Home News ಫಲಾನುಭವಿಗೆ ಅರಣ್ಯ ಇಲಾಖೆಯಿಂದ ಗ್ಯಾಸ್ ಸಂಪರ್ಕ

ಫಲಾನುಭವಿಗೆ ಅರಣ್ಯ ಇಲಾಖೆಯಿಂದ ಗ್ಯಾಸ್ ಸಂಪರ್ಕ

0

ಅರಣ್ಯದ ಮೇಲೆ ಅವಲಂಬನೆಯನ್ನು ಕಡಿಮೆ ಮಾಡಲು, ಪರಿಸರ ಕಾಳಜಿಯಿಂದ ಅರಣ್ಯ ಇಲಾಖೆ ಅಡುಗೆ ಅನಿಲ ವಿತರಿಸುತ್ತಿರುವುದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು.
ನಗರದ ವರದನಾಯಕನಹಳ್ಳಿ ಗೇಟ್ ಬಳಿಯ ವಲಯ ಅರಣ್ಯಾಧಿಕಾರಿಗಳ ಕಚೇರಿ ಆವರಣದಲ್ಲಿ ಬುಧವಾರ ಎಸ್ಸಿಪಿ ಮತ್ತು ಡಿಎಸ್ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪಂಗಡದ 12 ಮಂದಿ ಫಲಾನುಭವಿಗಳಿಗೆ ಅಡುಗೆ ಅನಿಲದ ಸಿಲಿಂಡರ್, ಸ್ಟೌ ಹಾಗೂ ರೆಗ್ಯೂಲೇಟರನ್ನು ವಿತರಿಸಿ ಅವರು ಮಾತನಾಡಿದರು.
ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ- ಮತ್ತು ಪಂಗಡದ ಕುಟುಂಬಗಳು ಅಡುಗೆ ಮಾಡಲು ಅರಣ್ಯದೊಳಗಿನ ಉರುವಲುಗಳನ್ನು ಸಂಗ್ರಹಿಸುತ್ತಾರೆ. ಇದನ್ನು ತಡೆಗಟ್ಟಲು ಉಚಿತವಾಗಿ ಅನಿಲ ಸಿಲಿಂಡರ್ ಮತ್ತು ಸ್ಟೌ ವಿತರಿಸಲಾಗಿದೆ. ಅಡುಗೆ ಅನಿಲವನ್ನು ಬಳಸುವಾಗ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು ಎಂದು ಹೇಳಿದರು.
ವಲಯ ಅರಣ್ಯಾಧಿಕಾರಿ ತಿಮ್ಮರಾಯಪ್ಪ ಮಾತನಾಡಿ, ಒಟ್ಟು 37 ಮಂದಿ ಫಲಾನುಭವಿಗಳನ್ನು ಪಟ್ಟಿ ಮಾಡಿದ್ದು, ಹಂತಹಂತವಾಗಿ ಎಲ್ಲರಿಗೂ ಅಡುಗೆ ಅನಿಲದ ಸಿಲಿಂಡರ್, ಸ್ಟೌ ಹಾಗೂ ರೆಗ್ಯೂಲೇಟರ್ ವಿತರಿಸಲಾಗುವುದು. ಅರಣ್ಯದಲ್ಲಿ ನಡೆಯುವ ಕಳ್ಳತನದ ಬಗ್ಗೆ ಇಲಾಖೆಗೆ ಮಾಹಿತಿ ನೀಡಬೇಕು ಮತ್ತು ಬೆಂಕಿ ಬಿದ್ದಂತಹ ಸಂದರ್ಭದಲ್ಲಿ ಗ್ರಾಮಸ್ಥರು ಅರಣ್ಯ ಸಿಬ್ಬಂದಿಯೊಂದಿಗೆ ಸಹಕಾರ ನೀಡಬೇಕೆಂದು ತಿಳಿಸಿದರು.
ತಾಲ್ಲೂಕು ಪಂಚಾಯತಿ ಅಧ್ಯಕ್ಷ ಕೆ.ಲಕ್ಷ್ಮೀನಾರಾಯಣರೆಡ್ಡಿ, ಮಳ್ಳೂರಯ್ಯ, ತಾದೂರು ರಮೇಶ್, ಉಪ ವಲಯ ಅರಣ್ಯಾಧಿಕಾರಿ ರಾಮಾಂಜಿನೇಯುಲು ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.