Home News ಫಲಾನುಭವಿಗೆ ಅರಣ್ಯ ಇಲಾಖೆಯಿಂದ ಗ್ಯಾಸ್ ಸಂಪರ್ಕ

ಫಲಾನುಭವಿಗೆ ಅರಣ್ಯ ಇಲಾಖೆಯಿಂದ ಗ್ಯಾಸ್ ಸಂಪರ್ಕ

0

ಅರಣ್ಯದ ಮೇಲೆ ಅವಲಂಬನೆಯನ್ನು ಕಡಿಮೆ ಮಾಡಲು, ಪರಿಸರ ಕಾಳಜಿಯಿಂದ ಅರಣ್ಯ ಇಲಾಖೆ ಅಡುಗೆ ಅನಿಲ ವಿತರಿಸುತ್ತಿದೆ. ಅರಣ್ಯ ಇಲಾಖೆಯ ಹಲವಾರು ಯೋಜನೆಗಳನ್ನು ಸದುಪಯೋಗಪಡಿಸಿಕೊಂಡು ಕಾಡನ್ನು ಬೆಳೆಸುವ ಕೆಲಸ ಮಾಡಬೇಕು ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು.
ನಗರದ ವರದನಾಯಕನಹಳ್ಳಿ ಗೇಟ್ ಬಳಿಯ ವಲಯ ಅರಣ್ಯಾಧಿಕಾರಿಗಳ ಕಚೇರಿ ಆವರಣದಲ್ಲಿ ಬುಧವಾರ ತಾಲ್ಲೂಕಿನ ಗೊರ್ಲಗುಮ್ಮನಹಳ್ಳಿಯ ಗ್ರಾಮ ಅರಣ್ಯ ಸಮಿತಿ ಸದಸ್ಯರಾಗಿರುವ 19 ಮಂದಿ ಫಲಾನುಭವಿಗಳಿಗೆ ಅಡುಗೆ ಅನಿಲದ ಸಿಲಿಂಡರ್, ಸ್ಟೌ ಹಾಗೂ ರೆಗ್ಯೂಲೇಟರನ್ನು ವಿತರಿಸಿ ಅವರು ಮಾತನಾಡಿದರು.
ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಕುಟುಂಬಗಳು ಅಡುಗೆ ಮಾಡಲು ಅರಣ್ಯದೊಳಗಿನ ಉರುವಲುಗಳನ್ನು ಸಂಗ್ರಹಿಸುತ್ತಾರೆ. ಇದನ್ನು ತಡೆಗಟ್ಟಲು ಉಚಿತವಾಗಿ ಅನಿಲ ಸಿಲಿಂಡರ್ ಮತ್ತು ಸ್ಟೌ ವಿತರಿಸಲಾಗಿದೆ. ಅಡುಗೆ ಅನಿಲವನ್ನು ಬಳಸುವಾಗ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು ಎಂದು ಹೇಳಿದರು.
ವಲಯ ಅರಣ್ಯಾಧಿಕಾರಿ ತಿಮ್ಮರಾಯಪ್ಪ ಮಾತನಾಡಿ, ಒಟ್ಟು 19 ಮಂದಿ ಫಲಾನುಭವಿಗಳಿಗೆ ಅಡುಗೆ ಅನಿಲದ ಸಿಲಿಂಡರ್, ಸ್ಟೌ ಹಾಗೂ ರೆಗ್ಯೂಲೇಟರ್ ವಿತರಿಸಲಾಗುವುದು. ಅರಣ್ಯದಲ್ಲಿ ನಡೆಯುವ ಕಳ್ಳತನದ ಬಗ್ಗೆ ಇಲಾಖೆಗೆ ಮಾಹಿತಿ ನೀಡಬೇಕು ಮತ್ತು ಬೆಂಕಿ ಬಿದ್ದಂತಹ ಸಂದರ್ಭದಲ್ಲಿ ಗ್ರಾಮಸ್ಥರು ಅರಣ್ಯ ಸಿಬ್ಬಂದಿಯೊಂದಿಗೆ ಸಹಕಾರ ನೀಡಬೇಕು. ಅರಣ್ಯ ಇಲಾಖೆಯಿಂದ ನೀಡುವ ಗಿಡಗಳನ್ನು ಜನರು ಬೆಳೆಸುವ ಮೂಲಕ ಪರಿಸರವನ್ನು ಹಸಿರುಮಯಗೊಳಿಸಬೇಕು ಎಂದು ತಿಳಿಸಿದರು.
ನಗರಸಭೆ ಅಧ್ಯಕ್ಷ ಅಫ್ಸರ್‌ಪಾಷ, ಆಯುಕ್ತ ಛಲಪತಿ, ಗೊರ್ಲಗುಮ್ಮನಹಳ್ಳಿ ಅರಣ್ಯ ಸಮಿತಿ ಅಧ್ಯಕ್ಷ ವೇಣುಗೋಪಾಲರೆಡ್ಡಿ, ವೆಂಕಟರೆಡ್ಡಿ, ರಾಮಸ್ವಾಮಿ, ಲಕ್ಷ್ಮೀನಾರಾಯಣ್‌ ಈ ಸಂದರ್ಭದಲ್ಲಿ ಹಾಜರಿದ್ದರು.