Home News ಬಯಲು ಸೀಮೆಯ ರೈತರಿಗೆ ನೆರವು ನೀಡಿ – ವಿ.ಮುನಿಯಪ್ಪ

ಬಯಲು ಸೀಮೆಯ ರೈತರಿಗೆ ನೆರವು ನೀಡಿ – ವಿ.ಮುನಿಯಪ್ಪ

0

ತೀವ್ರ ಬರಗಾಲಕ್ಕೆ ತುತ್ತಾಗಿರುವ ಬಯಲು ಸೀಮೆಯ ರೈತರುಗಳ ಅಭಿವೃದ್ಧಿಗಾಗಿ ಭೂ ಅಭಿವೃದ್ಧಿ ಬ್ಯಾಂಕ್ ಹಾಗೂ ಸಹಕಾರಿ ಸಂಘಗಳು ನೆರವಾಗಬೇಕು ಎಂದು ಕೆ.ಪಿ.ಸಿ.ಸಿ ಉಪಾಧ್ಯಕ್ಷ ವಿ.ಮುನಿಯಪ್ಪ ಹೇಳಿದರು.
ನಗರದ ಸಹಕಾರಿ ಭೂ ಅಭಿವೃದ್ಧಿ ಬ್ಯಾಂಕಿನ ಆವರಣದಲ್ಲಿ ಬುಧವಾರ ನಡೆದ ಅಧ್ಯಕ್ಷ, ಉಪಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿದರು.
ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದೆ. ಸಹಕಾರಿ ಸಂಘಗಳಲ್ಲಿ ರಾಜಕೀಯಕ್ಕೆ ಅವಕಾಶ ನೀಡದೆ ಎಲ್ಲಾ ಅರ್ಹ ರೈತರುಗಳಿಗೆ ಸಾಲಗಳನ್ನು ನೀಡಬೇಕು. ಬಯಲು ಸೀಮೆಯ ಪ್ರದೇಶ ಕಳೆದ ೨೦ ವರ್ಷಗಳಿಂದ ಮಳೆ ಕಡಿಮೆಯಾಗುತ್ತಿದೆ. ಕಷ್ಟಕಾಲದಲ್ಲಿ ಹಿಪ್ಪುನೇರಳೆ, ಹೈನುಗಾರಿಕೆಯ ಮುಖಾಂತರ ಕುಟುಂಬಗಳನ್ನು ನಿರ್ವಹಣೆ ಮಾಡಿಕೊಳ್ಳುವಂತಹ ಪರಿಸ್ಥಿತಿಯಿದೆ. ನೀರಾವರಿ ಯೋಜನೆಯ ಅನುಷ್ಠಾನಕ್ಕಾಗಿ ನಿರಂತರವಾಗಿ ಹೋರಾಟಗಳು ನಡೆಯುತ್ತಲೇ ಇವೆ. ಜನತೆಯ ನಿರಂತರ ಹೋರಾಟದ ಫಲವಾಗಿ ೫೦೦ ಕೋಟಿ ರೂಪಾಯಿಗಳ ಹಣವನ್ನು ಬಿಡುಗಡೆ ಮಾಡಲಾಗಿದ್ದು, ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದಂತೆ ಅಣೆಕಟ್ಟು ಕಟ್ಟುವಂತಹ ಕಾರ್ಯಗಳು ಪ್ರಗತಿಯಲ್ಲಿದೆ. ಮುಂದಿನ ೨ ವರ್ಷದಲ್ಲಿ ಈ ಭಾಗದ ಜನರಿಗೆ ಅನುಕೂಲವಾಗುವಂತೆ ಎತ್ತಿನಹೊಳೆ ಯೋಜನೆಯನ್ನು ಸರ್ಕಾರ ಅನುಷ್ಠಾನಕ್ಕೆ ತರಲಿದೆ ಎಂದರು.
ನೂತನವಾಗಿ ಆಯ್ಕೆಯಾಗಿ ಪದಗ್ರಹಣ ಮಾಡಿದ ಪಿ.ಎಲ್.ಡಿ.ಬ್ಯಾಂಕ್ ಅಧ್ಯಕ್ಷ ಸಿ.ಎಂ.ಗೋಪಾಲ್, ಉಪಾಧ್ಯಕ್ಷ ರವಿ, ತಾಲ್ಲೂಕು ಪಂಚಾಯತಿ ಅಧ್ಯಕ್ಷೆ ಆಂಜಿನಮ್ಮ, ಉಪಾಧ್ಯಕ್ಷ ಡಿ.ಎಸ್.ಎನ್.ರಾಜು, ಮಾಜಿ ಕೋಚಿಮುಲ್ ಅಧ್ಯಕ್ಷ ಕೆ.ಗುಡಿಯಪ್ಪ, ಜಿಲ್ಲಾ ಪಂಚಾಯತಿ ಸದಸ್ಯ ಎಸ್.ಎಂ.ನಾರಾಯಣಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎಂ.ಮುನಿಯಪ್ಪ, ಮುನಿಕೃಷ್ಣಪ್ಪ, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ವಿ.ಸುಭ್ರಮಣಿ, ನಿರ್ದೇಶಕರಾದ ಭೀಮೇಶ್, ರಮಾದೇವಿ, ಅಶ್ವತ್ಥನಾರಾಯಣರೆಡ್ಡಿ, ಶಂಕರ್, ಮಯೂರ, ನಗರಸಭಾ ಸದಸ್ಯರಾದ ಕೇಶವಮೂರ್ತಿ, ಜೆ.ಎಂ.ಬಾಲಕೃಷ್ಣ, ಪಿ.ಎಲ್.ಡಿ.ಬ್ಯಾಂಕ್ ಮಾಜಿ ಅಧ್ಯಕ್ಷ ಎ.ರಾಮಚಂದ್ರಪ್ಪ, ವೆಂಕಟೇಶಪ್ಪ, ನಾಗರಾಜು, ಮೌಲಾ, ಭಕ್ತರಹಳ್ಳಿ ಮುನೇಗೌಡ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.