ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ಅಭಿವೃದ್ದಿ ಕಾಮಗಾರಿಗಳು ಉತ್ತಮವಾಗಿರಬೇಕಾದರೆ ಅದಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯ ಶಾಸಕ ಎಂ.ರಾಜಣ್ಣ ತಿಳಿಸಿದರು.
ತಾಲ್ಲೂಕಿನ ಮಳಮಾಚನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಸವಾಪಟ್ಟಣ ಗ್ರಾಮದಲ್ಲಿ ಬುಧವಾರ ನಮ್ಮ ಗ್ರಾಮ, ನಮ್ಮ ರಸ್ತೆ ಯೋಜನೆಯಡಿ ಸುಮಾರು ೧ ಕೋಟಿ ೪೧ ಲಕ್ಷ ರೂ ವೆಚ್ಚದಲ್ಲಿ ಸುಮಾರು ೨ ಕಿ.ಮೀ ರಸ್ತೆ ಡಾಂಬರೀಕರಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸವಲತ್ತು ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ವಿಶೇಷ ಯೋಜನೆಗಳನ್ನು ರೂಪಿಸಿದ್ದು ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ ತಾಲ್ಲೂಕಿನಾದ್ಯಂತ ಸುಮಾರು ೩೦ ಕಿ.ಮೀ ರಸ್ತೆ ಕಾಮಗಾರಿಗೆ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಈ ಪೈಕಿ ಇಂದು ತಾಲ್ಲೂಕಿನ ವಿವಿದೆಡೆ ಸುಮಾರು ೧೧ ಕೋಟಿ ರೂ ವೆಚ್ಚದಲ್ಲಿ ೯ ಕಿ.ಮೀ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆ ನೆರವೇರಿಸಲಾಗಿದೆ ಎಂದರು.
ಸಾರ್ವಜನಿಕರ ಸಹಭಾಗಿತ್ವ ಸಂಪೂರ್ಣವಾಗಿ ಇದ್ದಾಗ ಮಾತ್ರವೇ ಸರ್ಕಾರದ ಯಾವುದೇ ಯೋಜನೆ ಯಶಸ್ವಿಯಾಗಲು ಸಾಧ್ಯ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಪಾಲ್ಗೊಳ್ಳುವಿಕೆ ಇಲ್ಲದೆ ಯಾವುದೆ ಯೋಜನೆಯಾಗಲಿ ಯಶಸ್ಸು ಸಾಧ್ಯವಿಲ್ಲ. ಗ್ರಾಮಗಳಲ್ಲಿ ಕಾಮಗಾರಿ ನಡೆಯುವಾಗ ಪಕ್ಷಾತೀತವಾಗಿ ಜನರು ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಿ ಗ್ರಾಮದ ಅಭಿವೃದ್ಧಿಗೆ ಸಹಕರಿಸಬೇಕು. ಅಭಿವೃದ್ಧಿಯ ವಿಚಾರದಲ್ಲಿ ರಾಜಕೀಯ ಬೆರಸದೇ ಗ್ರಾಮಗಳಲ್ಲಿ ನಡೆಯುವ ಕಾಮಗಾರಿಯ ಗುಣಮಟ್ಟದ ಬಗ್ಗೆ ಎಚ್ಚರವಹಿಸಬೇಕು ಎಂದರು.
ಈ ಸಂದರ್ಭದಲ್ಲಿ ಗಮ ಪಂಚಾಯ್ತಿ ಸದಸ್ಯೆ ಮಂಜುಳಮ್ಮ, ಕಾರ್ಯಪಾಲಕ ಎಂಜಿನಿಯರ್ ನರಸಿಂಹರೆಡ್ಡಿ, ಗಂಗರೆಡ್ಡಿ, ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯ ಪಿಳ್ಳೇಗೌಡ, ಆಂಜಿನಪ್ಪ, ಬಿ.ಮಂಜುನಾಥ, ರವಿಕುಮಾರ್, ಎ.ಎಂ.ವಿಶ್ವನಾಥ, ತಾದೂರು ರಮೇಶ್, ಸೀನಪ್ಪ ಹಾಜರಿದ್ದರು.
- Advertisement -
- Advertisement -
- Advertisement -