ವಸತಿ ರಹಿತರು, ನಿವೇಶನ ರಹಿತರಾಗಿರುವ ದಲಿತರು, ಅಲ್ಪಸಂಖ್ಯಾತರು, ಬಡವರಿಗೆ ನಿವೇಶನಗಳನ್ನು ಒದಗಿಸಿಕೊಡಬೇಕು ಎಂದು ಬಹುಜನ ಸಮಾಜ ಪಕ್ಷದ ತಾಲ್ಲೂಕು ಘಟಕದ ಪದಾಧಿಕಾರಿಗಳು ನಗರಸಭೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಿದರು.
ನಗರಸಭೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಅವರು, ಮೂರು ದಶಕಗಳಿಂದಲೂ ಸಾಕಷ್ಟು ಮಂದಿಗೆ ಸೂರಿಲ್ಲ, ದಿನನಿತ್ಯ ೨೦೦ ರೂಪಾಯಿಗಳ ಕೂಲಿ ಮಾಡಿಕೊಂಡು ಕುಟುಂಬ ನಿರ್ವಹಣೆ ಮಾಡಿಕೊಳ್ಳುತ್ತಿರುವವರೇ ಹೆಚ್ಚಾಗಿದ್ದಾರೆ. ನಗರದಲ್ಲಿ ರೇಷ್ಮೆ ಉದ್ಯಮದಿಂದಲೇ ಬಹುತೇಕ ಕುಟುಂಬಗಳು ಜೀವನ ನಡೆಸುತ್ತಿದ್ದಾರೆ. ಸಾಕಷ್ಟು ಮಂದಿ ತಿಂಗಳ ಪೂರ್ತಿ ದುಡಿದ ದುಡಿಮೆಯ ಹಣದಲ್ಲಿ ಬಾಡಿಗೆ ಕಟ್ಟಲಿಕ್ಕೆ ಸರಿಹೋಗುತ್ತಿದೆ. ಜೀವನ ನಿರ್ವಹಣೆ ಕಷ್ಟಕರವಾಗುತ್ತಿದೆ.
ನಿವೇಶನ ರಹಿತರಿಗೆ ನಿವೇಶನಗಳನ್ನು ನೀಡಿ, ಮನೆಗಳ ನಿರ್ಮಾಣಕ್ಕೆ ಅನುದಾನ ಕೊಡಬೇಕು ಎಂದು ಪ್ರತಿ ವರ್ಷ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಕೋಟ್ಯಾಂತರ ರೂಪಾಯಿಗಳ ಅನುದಾನಗಳು ಬಿಡುಗಡೆಯಾಗುತ್ತಿದ್ದರೂ ಕೂಡಾ ನಿಜವಾದ ಫಲಾನುಭವಿಗಳಿಗೆ ಸೌಲಭ್ಯಗಳು ಸಿಕ್ಕಿಲ್ಲ, ಉಳ್ಳವರಿಗೆ ಅನುಕೂಲ ಮಾಡಿಕೊಡುವ ಕೆಲಸವನ್ನು ಅಧಿಕಾರಿಗಳು ಮಾಡಿಕೊಡುತ್ತಲೇ ಬಂದಿದ್ದಾರೆ. ನಮ್ಮ ಮನವಿಗಳಿಗೆ ಇದುವರೆಗೂ ಸ್ಪಂದನೆ ನೀಡಿಲ್ಲ ಕೂಡಲೇ ಜಿಲ್ಲಾಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕು. ನಿವೇಶನ ರಹಿತ ಅರ್ಹರಾಗಿರುವ ಪ್ರತಿಯೊಬ್ಬ ಫಲಾನುಭವಿಗಳಿಗೆ ನಿವೇಶನ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಬಹುಜನ ಸಮಾಜ ಪಕ್ಷದ ತಾಲ್ಲೂಕು ಅಧ್ಯಕ್ಷ ರಾಮು ಒತ್ತಾಯಿಸಿದರು.
ಮನವಿ ಪತ್ರವನ್ನು ಸ್ವೀಕರಿಸಿ ನಗರಸಭೆ ಅಧ್ಯಕ್ಷ ಬಿ.ಅಪ್ಸರ್ ಪಾಷ ಮಾತನಾಡಿ, ನಿವೇಶನ ರಹಿತರಿಗೆ ನಿವೇಶನಗಳನ್ನು ವಿತರಣೆ ಮಾಡಬೇಕೆನ್ನುವ ವಿಚಾರವನ್ನು ಸಾಮಾನ್ಯ ಸಭೆಯಲ್ಲಿ ಚರ್ಚೆಯಲ್ಲಿಟ್ಟುಕೊಂಡಿದ್ದೇವೆ. ಈ ಬಗ್ಗೆ ಚರ್ಚೆ ನಡೆಸಿದ ನಂತರ ಸೂಕ್ತ ತೀರ್ಮಾನ ಕೈಗೊಂಡು ನ್ಯಾಯ ಒದಗಿಸಿಕೊಡುವ ಕೆಲಸ ಮಾಡುತ್ತೇವೆ ಎಂದರು.
ಆಯುಕ್ತ ಚಲಪತಿ ಮಾತನಾಡಿ, ಪ್ರತಿಭಟನಾ ಕಾರರು ನೀಡಿರುವ ಮನವಿಯನ್ನು ಆಧರಿಸಿ ಸಭೆಯಲ್ಲಿ ಚರ್ಚೆ ಮಾಡಿದ ನಂತರ ಎಲ್ಲಾ ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ ನ್ಯಾಯ ಒದಗಿಸಿಕೊಡುವ ಕೆಲಸ ಮಾಡುತ್ತೇವೆ ಎಂದರು.
ನಗರಸಭೆ ಉಪಾಧ್ಯಕ್ಷೆ ಪ್ರಭಾವತಿಸುರೇಶ್, ಬಹುಜನ ಸಮಾಜವಾದಿ ಪಕ್ಷದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ನರೇಶ್ಬಾಬು, ಸುಂದರ್, ರವಿಕುಮಾರ್, ಮಂಜುನಾಥ್, ನರಸಿಂಹ, ರಾಜುವಿಟಲ್, ನಟರಾಜ್, ಮುರಳಿ, ವೆಂಕಟರಾಜು, ಆರಿಫ್, ಶಫಿವುಲ್ಲ ಹಾಜರಿದ್ದರು.
- Advertisement -
- Advertisement -
- Advertisement -