ತಾಲ್ಲೂಕಿನ ನಾಗಮಂಗಲದಲ್ಲಿ ಗುರುವಾರ ನರೇಗಾ ಯೋಜನೆಯಡಿ ಸುಮಾರು ೧೬ ಲಕ್ಷ ರೂ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಭಾರತ್ ನಿರ್ಮಾಣ್ ರಾಜೀವ್ಗಾಂಧಿ ಸೇವಾ ಕೇಂದ್ರದ ಉದ್ಘಾಟನೆ ನೆರವೇರಿಸಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.
ಹಿಂದಿನ ಯುಪಿಎ ಸರ್ಕಾರದ ದೂರದೃಷ್ಟಿಯ ಮಹಾತ್ಮ ಗಾಂಧಿ ಉದ್ಯೋಗಖಾತ್ರಿ ಯೋಜನೆಯ ಫಲವಾಗಿ ಇಂದು ದೇಶದ ಎಲ್ಲಾ ಗ್ರಾಮೀಣ ಪ್ರದೇಶಗಳಲ್ಲಿಯೂ ಉತ್ತಮ ಗ್ರಾಮ ಪಂಚಾಯಿತಿ ಕಾರ್ಯಾಲಯಗಳು ನಿರ್ಮಿಸಿಕೊಳ್ಳಲು ಸಾಧ್ಯವಾಗಿದೆ ಎಂದು ಅವರು ಹೇಳಿದರು.
ಜನರಿಗೆ ಕೆಲಸ ಸಿಗುವಂತೆ ಮಾಡುವುದು ಹಾಗೂ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ನರೇಗಾ ಯೋಜನೆ ಬಹಳ ಉಪಯುಕ್ತವಾಗಿದ್ದು ಎಲ್ಲರೂ ಇದರ ಸವಲತ್ತು ಪಡೆದುಕೊಂಡು ಆರ್ಥಿಕವಾಗಿ ಮುಂದುವರೆಯಬೇಕು ಎಂದರು.
ತಾಲ್ಲೂಕು ಪಂಚಾಯಿತಿ ಇಓ ಎಂ.ವೆಂಕಟೇಶ್ ಮಾತನಾಡಿ, ಗ್ರಾಮ ಪಂಚಾಯಿತಿಗಳ ಏಳಿಗೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಅಧಿಕಾರಿಗಳು ಗ್ರಾಮೀಣ ಪ್ರದೇಶದ ಅಭಿವೃದ್ಧಿಗಾಗಿ ಒಟ್ಟಾಗಿ ದುಡಿಯಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ನಿರ್ಮಲಾಮುನಿರಾಜು, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೆ.ರೂಪಶಿವಕುಮಾರ್, ಉಪಾಧ್ಯಕ್ಷ ಎನ್.ಡಿ.ನಾರಾಯಣಪ್ಪ, ಸದಸ್ಯರಾದ ಶ್ರೀನಿವಾಸಗೌಡ, ನರೇಗಾ ಸಹಾಯಕ ನಿರ್ದೇಶಕ ಶ್ರೀನಾಥಗೌಡ, ಕೆ.ಗುಡಿಯಪ್ಪ, ಗ್ರಾಮ ಪಂಚಾಯಿತಿ ಪಿಡಿಓ ಗೋಪಿನಾಥ್ ಹಾಜರಿದ್ದರು.