ಮಣ್ಣಿನ ಫಲವತ್ತತೆಯನ್ನು ಆಧರಿಸಿ ರಸಗೊಬ್ಬರಗಳನ್ನು ಬಳಸುವ ಮೂಲಕ ಅಧಿಕ ಇಳುವರಿಯನ್ನು ಪಡೆಯಬಹುದೆಂದು ಸಹಾಯಕ ಕೃಷಿ ನಿರ್ದೇಶಕ ದೇವೇಗೌಡ ತಿಳಿಸಿದರು.
ವಿಶ್ವ ಮಣ್ಣಿನ ದಿನದ ಅಂಗವಾಗಿ ನಗರದ ಸ್ತ್ರೀ ಶಕ್ತಿ ಭವನದಲ್ಲಿ ಕೃಷಿ ಇಲಾಖೆಯ ವತಿಯಿಂದ ಶನಿವಾರ ರೈತರಿಗೆ ಅರಿವು ಮೂಡಿಸುವ ಸಲುವಾಗಿ ನಡೆದ ‘ಮಣ್ಣಿನ ಆರೋಗ್ಯ ನಿರ್ವಹಣೆ ಮತ್ತು ಸುರಕ್ಷಿತ ಕೀಟನಾಶಕ ಬಳಕೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರತಿಯೊಬ್ಬ ರೈತರೂ ಮಣ್ಣಿನ ಪರೀಕ್ಷೆಯನ್ನು ಖಡ್ಡಾಯವಾಗಿ ಮಾಡಿಸಬೇಕು. ಮಣ್ಣಿನ ಪರೀಕ್ಷೆಯ ಅಂಕಿ ಅಂಶಗಳನ್ನು ಗಣಕೀಕೃತಗೊಳಿಸಲಾಗುತ್ತದೆ. ಇದರಿಂದ ರೈತರು ಯಾವ ಬೆಳೆ ಬೆಳೆಯಬಹುದು, ಅದಕ್ಕೆ ಬೇಕಾಗುವ ಪೌಷ್ಠಿಕಾಂಶಗಳೇನು ಮತ್ತು ಕಾಲಾನುಕ್ರಮದಲ್ಲಿ ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುವ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಬಹುದು. ಮಣ್ಣಿನ ಪರೀಕ್ಷೆಯ ಸಲುವಾಗಿ ಅಧಿಕಾರಿಗಳು ರೈತರ ಭೂಮಿಗಳಿಗೆ ಭೇಟಿ ನೀಡಲಿದ್ದು ಸಹಕರಿಸಬೇಕೆಂದು ಹೇಳಿದರು.
ಕೃಷಿ ಇಲಾಖೆಯಿಂದ ಯಾವುದೇ ಪ್ರಯೋಜನವನ್ನು ಹೊಂದಲು ಮಣ್ಣಿನ ಪರೀಕ್ಷೆ ಖಡ್ಡಾಯವಾಗಿದೆ. ಬೆಳೆಯಿದ್ದಾಗ ಪರೀಕ್ಷೆಗೆ ಮಣ್ಣಿನ ಸಂಗ್ರಹಣೆ ಮಾಡಬಾರದು. ತಿಪ್ಪೆಗೊಬ್ಬರವಿರುವೆಡೆ, ಕಳೆಗಳಿರುವ ಜಾಗದಲ್ಲೂ ಮಾಡಬಾರದು. ಬೆಳೆ ಕಟಾವು ಮಾಡಿದ ನಂತರ ಮಣ್ಣಿನ ಪರೀಕ್ಷೆಯನ್ನು ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಸುರಕ್ಷಿತ ಕೀಟ ನಾಶಕಗಳ ಬಳಕೆ ಹಾಗೂ ಪರಿಸರ ಮಾಲಿನ್ಯ ತಡೆಗಟ್ಟುವಿಕೆಯ ಬಗ್ಗೆಯೂ ರೈತರಿಗೆ ಮಾಹಿತಿಯನ್ನು ನೀಡಲಾಯಿತು.
ರೇಷ್ಮೆ ಸಹಾಯಕ ನಿರ್ದೇಶಕ ಚಂದ್ರಪ್ಪ, ಪ್ರಗತಿಪರ ರೈತ ಹಿತ್ತಲಹಳ್ಳಿ ಗೋಪಾಲಗೌಡ, ರೈತ ಸಂಘದ ತಾಲ್ಲೂಕು ಅಧ್ಯಕ್ಷರಾದ ರವಿಪ್ರಕಾಶ್, ತಾದೂರು ಮಂಜುನಾಥ್, ಪ್ರತೀಶ್ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -