ನಗರದ ಕೋಟೆ ವೃತ್ತದಲ್ಲಿ ಸೋಮವಾರ ಸಂಜೆ ತಾಲ್ಲೂಕು ಸ್ವೀಪ್ ಸಮಿತಿಯಿಂದ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಆಯೋಜಿಸಲಾಗಿದ್ದ ಮೇಣದ ಬತ್ತಿ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿ ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಸಿ.ಎಸ್.ಶ್ರೀನಾಥಗೌಡ ಮಾತನಾಡಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಹಕ್ಕು ಜನರಿಗೆ ಸಿಕ್ಕಿರುವ ಪರಮಾಧಿಕಾರ ಅದನ್ನು ಚಲಾಯಿಸಲಿಕ್ಕೆ ಯಾರೂ ಹಿಂದುಳಿಯಬಾರದು ಎಂದು ಅವರು ಹೇಳಿದರು.
ಮತದಾನ ಮಾಡುವುದು ಪ್ರತಿಯೊಬ್ಬ ಪ್ರಜ್ಞಾವಂತ ನಾಗರಿಕರ ಕರ್ತವ್ಯವಾಗಿದೆ. ಏಪ್ರಿಲ್ ೧೮ ರ ಗುರುವಾರ ನಡೆಯಲಿರುವ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಬೇಕು ಎಂದರು.
ನಾಗರಿಕರು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೇ ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಳ್ಳಲು ಚುನಾವಣೆ ಸಹಕಾರಿಯಾಗಿರುತ್ತದೆ. ಹಾಗಾಗಿ ಪ್ರತಿಯೊಬ್ಬರೂ ಮತಗಟ್ಟೆಗೆ ತಮ್ಮ ಗುರುತಿನ ಚೀಟಿಯೊಂದಿಗೆ ಬಂದು ಉತ್ತಮ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು ಎಂದರು.
ನಗರದ ನಗರಸಭೆ ಮುಂಭಾಗದಿಂದ ತಾಲ್ಲೂಕು ಕಚೇರಿಯವರೆಗೂ ಮೇಣದಬತ್ತಿ ಜಾಥಾ ಮೂಲಕ ಸಾಗಿ ಮತದಾನದ ಬಗ್ಗೆ ಜನರಲ್ಲಿ ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ಹನುಮಂತರಾಜು, ಸಿಡಿಪಿಓ ಲಕ್ಷ್ಮಿದೇವಮ್ಮ, ತಾಲ್ಲೂಕು ಪಂಚಾಯಿತಿ ಮೇಲ್ವಿಚಾರಕ ಪ್ರಸಾದ್ ಹಾಜರಿದ್ದರು.