ನಗರದ ೨೧ ನೇ ವಾರ್ಡಿನ ನಗರಸಭೆ ಸದಸ್ಯೆ ಸುಗುಣ ಲಕ್ಮೀನಾರಾಯಣ ಅವರ ಮನೆಯಲ್ಲಿ ತಾಲ್ಲೂಕು ವಚನ ಸಾಹಿತ್ಯ ಪರಿಷತ್ ವತಿಯಿಂದ ಸೋಮವಾರ ಆಯೋಜಿಸಲಾಗಿದ್ದ ಮನೆ ಅಂಗಳದಲ್ಲಿ ವಚನ ಸಾಹಿತ್ಯ ಸಿಂಚನ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಚೀಮಂಗಲ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ಡಾ.ಎಂ.ಶಿವಕುಮಾರ್ ಮಾತನಾಡಿದರು.
ವಚನ ಸಾಹಿತ್ಯ ನಮ್ಮ ಬದುಕಿಗೆ ಶತಮಾನಗಳಿಂದಲೂ ಉತ್ತಮ ಮಾರ್ಗದರ್ಶನ ಡುತ್ತ ಬಂದಿದೆ. 12ನೇ ಶತಮಾನದಲ್ಲಿ ಶರಣರು ಅಂದಿನ ಸಂಸ್ಕೃತ ಭಾಷೆ ಸಾಮಾನ್ಯ ಜನರಿಗೆ ಅರ್ಥವಾಗದ್ದನ್ನು ಮನಗಂಡು ಕನ್ನಡ ಭಾಷೆಯಲ್ಲಿ ಸರಳವಾಗಿ ಎಲ್ಲರಿಗೂ ಅರ್ಥವಾಗುವ ರೀತಿಯಲ್ಲಿ ವಚನಗಳನ್ನು ರಚಿಸಿದರು. ಹಾಗಾಗಿ ಜನಸಮೂಹ ಈ ಸಾಹಿತ್ಯ ಪ್ರಕಾರದತ್ತ ಆಕರ್ಷಿತವಾಯಿತು ಎಂದರು.
ನಗರಸಭೆ ಸದಸ್ಯೆ ಸುಗುಣ ಲಕ್ಮೀನಾರಾಯಣ ಮಾತನಾಡಿ, ಶಿಕ್ಷಕರು ಸಮಾಜದ ಮಾರ್ಗದರ್ಶಕರು. ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅಪಾರವಾದದ್ದು. ಈ ಬಾರಿ ನಮ್ಮ ತಾಲ್ಲೂಕಿನಲ್ಲಿ ಐವರು ಶಿಕ್ಷಕರು ಪ್ರಶಸ್ತಿ ಪಡೆದಿರುವುದು ಹೆಮ್ಮೆಯ ಸಂಗತಿ. ಅವರನ್ನು ಸನ್ಮಾನಿಸುವ ಅವಕಾಶ ನಮಗೆ ಲಭಿಸಿರುವುದು ಸಂತಸ ತಂದಿದೆ ಎಂದರು.
ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ ಪುರಸ್ಕೃತ ಚೀಮಂಗಲ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಡಾ.ಎಂ.ಶಿವಕುಮಾರ್, ವೈಜ್ಞಾನಿಕ ಕ್ಷೇತ್ರದಲ್ಲಿ ವಿಶೇಷ ಶಿಕ್ಷಕ ರಾಜ್ಯ ಪ್ರಶಸ್ತಿ ಪುರಸ್ಕೃತ ಅಮ್ಮಗಾರಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ ಎಚ್.ಜಿ.ಚಂದ್ರಕಲಾ, ಮಳ್ಳೂರು ಶಾಲೆಯ ಎಂ.ಸೀನಪ್ಪ ಮತ್ತು ಸರಸ್ವತಿ ಕಾನ್ವೆಂಟ್ ಪ್ರೌಢಶಾಲೆಯ ಜಿ.ಎನ್.ಶಿವಣ್ಣ ಅವರನ್ನು ಸನ್ಮಾನಿಸಲಾಯಿತು. ವಚನ ಸಾಹಿತ್ಯ ಸಿಂಚನ ಕಾರ್ಯಕ್ರಮ ನಡೆಸಲು ಸ್ಥಳಾವಕಾಶ ಮಾಡಿಕೊಟ್ಟ ನಗರಸಭೆ ಸದಸ್ಯೆ ಸುಗುಣ ಲಕ್ಮೀನಾರಾಯಣ ದಂಪತಿಯನ್ನು ಗೌರವಿಸಲಾಯಿತು.
ವಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಟಿ.ನಾರಾಯಣಸ್ವಾಮಿ, ಕಸಾಪ ತಾಲ್ಲೂಕು ಅಧ್ಯಕ್ಷ ಎ.ಎಂ.ತ್ಯಾಗರಾಜ್, ಎಸ್.ವಿ.ನಾಗರಾಜ್ರಾವ್, ಸುಂದರಾಚಾರಿ, ವೇಣುಗೋಪಾಲ್, ವೆಂಕಟೇಶಪ್ಪ, ಗಜೇಂದ್ರ, ನರಸಿಂಹಪ್ಪ, ಶ್ಯಾಮಸುಂದರ್, ರೈತ ಸಂಘದ ಅಧ್ಯಕ್ಷ ಎಸ್.ಎಂ.ರವಿಪ್ರಕಾಶ್, ಕಾರ್ಯದರ್ಶಿ ಪ್ರತೀಶ್ ಹಾಜರಿದ್ದರು.