ಮಹರ್ಷಿ ವಾಲ್ಮೀಕಿ ವಿಶ್ವಮಾನ್ಯರು. ಎಲ್ಲಾ ಸಮುದಾಯಗಳಿಗೂ ಬೇಕಾಗಿರುವ ದೈವಸಂಭೂತರು, ಅವರ ಜಯಂತ್ಯುತ್ಸವ ಆಚರಣೆಯನ್ನು ಅದ್ದೂರಿಯಾಗಿ ಮಾಡಲು ಎಲ್ಲರ ಸಹಕಾರ ಅತ್ಯಗತ್ಯವಿದೆ ಎಂದು ಶಾಸಕ ವಿ.ಮುನಿಯಪ್ಪ ಹೇಳಿದರು.
ನಗರದ ತಾಲ್ಲೂಕು ಕಚೇರಿಯಲ್ಲಿ ಸೋಮವಾರ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಎಲ್ಲಾ ಸಮಾಜಗಳು ಸಮಾಜದಲ್ಲಿ ಸಾಮರಸ್ಯದಿಂದ ಬದುಕು ಕಟ್ಟಿಕೊಳ್ಳಬೇಕು. ಈ ನಿಟ್ಟಿನಲ್ಲಿ ರಾಮಾಯಣ ಗ್ರಂಥದ ಮೂಲಕ ಮಹರ್ಷಿ ವಾಲ್ಮೀಕಿಯವರು ನೀಡಿರುವ ಸಂದೇಶಗಳು ಸಮಾಜಕ್ಕೆ ತಿಳಿಸುವಂತಹ ಕೆಲಸವಾಗಬೇಕು ಎಂದರು.
ಜಿಲ್ಲಾ ಪಂಚಾಯಿತಿ ಸದಸ್ಯ ಬಂಕ್ ಮುನಿಯಪ್ಪ ಮಾತನಾಡಿ, ವಾಲ್ಮೀಕಿಯವರ ಆದರ್ಶಗಳು, ಅವರ ಸಮಸಮಾಜದ ವಿಚಾರಧಾರೆ, ಶ್ರೀರಾಮರಾಜ್ಯದ ಪರಿಕಲ್ಪನೆ, ಶ್ರೀರಾಮನ ವ್ಯಕ್ತಿತ್ವದ ಚಿತ್ರಣದ ಮೂಲಕ ನೀಡಿರುವ ಆದರ್ಶ ಮುಂತಾದ ಎಲ್ಲಾ ವಿಚಾರಗಳನ್ನು ಸಮಾಜಕ್ಕೆ ತಿಳಿಸಬೇಕಾಗಿದೆ. ಆದ್ದರಿಂದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಆಚರಣೆಯಲ್ಲಿ ಪ್ರತಿಯೊಬ್ಬರು ತೊಡಗಿಸಿಕೊಳ್ಳಬೇಕು ಎಂದರು.
ವಾಲ್ಮೀಕಿ ಜಯಂತಿಯ ದಿನದಂದು ಬೆಳಿಗ್ಗೆ ೮ ಗಂಟೆಗೆ ತಲಕಾಯಲಬೆಟ್ಟದಲ್ಲಿರುವ ವಾಲ್ಮೀಕಿ ದೇವಾಲಯದಲ್ಲಿ ಪೂಜೆ ಸಲ್ಲಿಸಲಾಗುತ್ತದೆ. ನಂತರ ಕೋಟೆ ವೃತ್ತದಿಂದ ಸಾಂಸ್ಕೃತಿಕ ಕಲಾತಂಡಗಳು ಪೂರ್ಣಕುಂಭದೊಂದಿಗೆ ಮೆರವಣಿಗೆ ನಡೆಸುವ ಮೂಲಕ ತಾಲ್ಲೂಕು ಕಚೇರಿಯ ಮುಂಭಾಗದಲ್ಲಿನ ವೇದಿಕೆಗೆ ಬರುವುದು, ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿ ಹೆಚ್ಚು ಅಂಕಗಳನ್ನು ಗಳಿಸಿಕೊಂಡಿರುವ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.
ಮುಖಂಡ ಲಗಿನಾಯಕನಹಳ್ಳಿ ಮುನಿಯಪ್ಪ ಮಾತನಾಡಿ, ಕಳೆದ ವರ್ಷ ವಿಧಾನಸೌಧ ಮುಂಭಾಗದಲ್ಲಿ ಮಹರ್ಷಿ ವಾಲ್ಮೀಕಿಯವರ ಪುತ್ಥಳಿ ಅನಾವರಣ ಇದ್ದ ಕಾರಣ, ತಾಲ್ಲೂಕಿನಲ್ಲಿ ಕಾರ್ಯಕ್ರಮವನ್ನು ಸರಳವಾಗಿ ಆಚರಣೆ ಮಾಡಲಾಗಿತ್ತು. ಈ ಬಾರಿ ವಿಜೃಂಭಣೆಯಿಂದ ನೆರವೇರಿಸಲು ಎಲ್ಲರ ಸಹಕಾರ ಮುಖ್ಯ ಎಂದರು.
ತಹಶೀಲ್ದಾರ್ ಅಜಿತ್ ಕುಮಾರ್ ರೈ ಮಾತನಾಡಿ, ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವುದು ಬೇಡ. ಕಾರ್ಯಕ್ರಮದ ಆಯೋಜನೆಯ ಹೊಣೆಗಾರಿಕೆಯನ್ನು ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ವಹಿಸಿಕೊಳ್ಳಬೇಕು. ಕಾರ್ಯಕ್ರಮದಲ್ಲಿ ಯಾವುದೇ ಕೊರತೆಗಳು ಕಂಡು ಬಾರದಂತೆ ಗಮನಹರಿಸಬೇಕು ಎಂದರು. ಪತ್ರ ಬರೆದರೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ಸ್ಪಂದಿಸುವುದಿಲ್ಲ, ಬರುವುದೂ ಇಲ್ಲ. ಅವರನ್ನು ಸಂಪರ್ಕ ಮಾಡುವ ಕೆಲಸವನ್ನು ಸಮುದಾಯದ ಮುಖಂಡರು ವಹಿಸಿಕೊಳ್ಳಿ ಎಂದು ತಹಶೀಲ್ದಾರ್ ಬೇಸರ ವ್ಯಕ್ತಪಡಿಸಿದರು.
ನಗರಸಭಾ ಅಧ್ಯಕ್ಷ ಅಫ್ಸರ್ಪಾಷ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟೇಶ್, ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಸಿದ್ದರಾಜು, ನಗರ ಠಾಣೆ ಸಬ್ ಇನ್ಸ್ಪೆಕ್ಟರ್ ಲಿಯಾಖತ್ ಉಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







