ಬದಲಾಗುತ್ತಿರುವ ಸಾಮಾಜಿಕ ಹಾಗು ಕೌಟುಂಬಿಕ ವ್ಯವಸ್ಥೆಗೆ ಅನುಗುಣವಾಗಿ ಮಹಿಳೆಯರಿಗೆ ಕಾನೂನಿನ ಅರಿವು ಅತ್ಯಗತ್ಯ, ಈ ವಿಷಯದಲ್ಲಿ ಅರಿವು ಮೂಡಿಸಲು ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಇದರ ಸದುಪಯೋಗವನ್ನು ಮಹಿಳೆಯರು ಪಡೆದುಕೊಳ್ಳಬೇಕು ಎಂದು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಟಿ.ಎಲ್.ಸಂದೀಶ್ ಹೇಳಿದರು.
ನಗರದ ಬಸ್ ನಿಲ್ದಾಣದ ಬಳಿಯಿರುವ ಬಿವಿಆರ್ ಕಾಂಪ್ಲೆಕ್ಸ್ನಲ್ಲಿ ಗುರುವಾರ ಸೌಂದರ್ಯ ಗ್ರಾಮೀಣ ಹಾಗೂ ಪಟ್ಟಣ ಅಭಿವೃದ್ಧಿ ಸಂಸ್ಥೆ ವತಿಯಿಂದ ಜಿಲ್ಲಾ ಪಂಚಾಯತಿಯ ರಾಜೀವ್ಗಾಂಧಿ ಚೈತನ್ಯ ಯೋಜನೆಯಡಿಯಲ್ಲಿ ಆಯೋಜಿಸಲಾಗಿರುವ ಗ್ರಾಮೀಣ ಪ್ರದೇಶದ ನಿರುದ್ಯೋಗಿ ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ ಹಾಗೂ ಬ್ಯುಟೀಷಿಯನ್ ತರಬೇತಿ ಶಿಬಿರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕೌಟುಂಬಿಕ ದೌರ್ಜನ್ಯಕೊಳ್ಳಗಾದ ಯಾವುದೇ ಮಹಿಳೆ ನೇರವಾಗಿ ತಾಲ್ಲೂಕು ಕಾನೂನು ಸೇವಾ ಪ್ರಾಧಿಕಾರಕ್ಕೆ ದೂರು ಸಲ್ಲಿಸಿದಲ್ಲಿ ಆಕೆಗೆ ಬೇಕಾದ ರಕ್ಷಣೆ ಸೇರಿದಂತೆ ಯಾವುದೇ ಶುಲ್ಕವಿಲ್ಲದೇ ಉಚಿತವಾಗಿ ಆಕೆಗೆ ನ್ಯಾಯ ದೊರಕಿಸಲು ವಕೀಲರನ್ನು ನೇಮಿಸಿಕೊಡಲಾಗುವದು ಎಂದರು.
ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎಂ.ಪಾಪಿರೆಡ್ಡಿ ಮಾತನಾಡಿ ಮಹಿಳೆಯರಿಗಾಗಿ ಇಂದು ಅನೇಕ ಕಾನೂನುಗಳು ಜಾರಿಯಲ್ಲಿದ್ದು ಅದರ ಸದುಪಯೋಗ ಪಡೆದುಕೊಳ್ಳಬೇಕು. ಕಾನೂನು ಚೌಕಟ್ಟಿನಲ್ಲಿರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡಾಗ ಮಾತ್ರ ಸಮಾಜದಲ್ಲಿ ಹೆಚ್ಚಾಗುತ್ತಿರುವ ಅಪರಾಧ ಪ್ರಕರಣಗಳು ಕಡಿಮೆಯಾಗುತ್ತವೆ, ಮಹಿಳೆಯರಲ್ಲಿ ಭಾವನಾತ್ಮಕ ಸಂಬಂಧಗಳು ಕಡಿಮೆಯಾಗುತ್ತಿರುವುದರಿಂದ ಕೌಟುಂಬಿಕ ಕಲಹಗಳು ಹೆಚ್ಚಾಗುತ್ತಿದ್ದು, ಮಹಿಳೆಯರು ಮಕ್ಕಳಿಗೆ ಉತ್ತಮವಾದ ಶಿಕ್ಷಣವನ್ನು ನೀಡುವ ಮೂಲಕ ಸಮಾಜದಲ್ಲಿ ಉತ್ತಮವಾದ ಪ್ರಜೆಗಳನ್ನಾಗಿ ರೂಪಿಸಬೇಕು ಎಂದರು.
ಮಹಿಳೆಯರ ಆರೋಗ್ಯದ ಬಗ್ಗೆ ಡಾ.ವಿಜಯ್ಕುಮಾರ್ ಮಾತನಾಡಿದರೆ ಬಾಲ್ಯವಿವಾಹದ ಬಗ್ಗೆ ವಕೀಲೆ ಆರ್.ವೀಣಾ ಮಾತನಾಡಿದರು.
ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶಕ ಭಾಸ್ಕರ್, ಸೌಂದರ್ಯ ಗ್ರಾಮೀಣ ಹಾಗು ಪಟ್ಟಣ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷೆ ಡಾ.ವಿಜಯಾ, ಕಾರ್ಯದರ್ಶಿ ವೆಂಕಟರೋಣಪ್ಪ, ಮುಖಂಡರಾದ ಬಿ.ವಿ.ಮುನೇಗೌಡ, ವೆಂಕಟಮೂರ್ತಿ, ತಾಲ್ಲೂಕು ವಕೀಲರ ಸಂಘದ ಕಾರ್ಯದರ್ಶಿ ಬೈರಾರೆಡ್ಡಿ, ವಕೀಲರಾದ ಯಣ್ಣಂಗೂರು ಮಂಜುನಾಥ್, ಎಂ.ಬಿ.ಲೋಕೇಶ್, ಚಂದ್ರೇಗೌಡ, ವೆಂಕಟರೆಡ್ಡಿ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -