ಮಾವಿನ ಗಿಡ ಸವರುವಿಕೆಯ ವಿಧಾನ, ಜುಲೈ ಆಗಸ್ಟ್ ತಿಂಗಳುಗಳಲ್ಲಿ ಕೈಗೊಳ್ಳಬೇಕಾದ ಬೇಸಾಯ ಕ್ರಮಗಳ ಬಗ್ಗೆ ತಿಳುವಳಿಕೆ ಹೊಂದಿದಲ್ಲಿ ಹೆಚ್ಚಿನ ಇಳುವರಿಯನ್ನು ಪಡೆಯಲು ಸಾಧ್ಯ ಎಂದು ಮಾವು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಗೋಪಾಲಕೃಷ್ಣ ತಿಳಿಸಿದರು.
ತಾಲ್ಲೂಕಿನ ತಿಪ್ಪೇನಹಳ್ಳಿ ಗ್ರಾಮದ ಲಕ್ಷ್ಮೀನಾರಾಯಣಪ್ಪ ಅವರ ತೋಟದಲ್ಲಿ ಗುರುವಾರ ಮಾವು ಪುನಶ್ಚೇತನ ಮತ್ತು ಸವರುವಿಕೆ ಕಾರ್ಯಕ್ರಮದ ಬಗ್ಗೆ ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ತೋಟಗಾರಿಕಾ ಬೆಳೆಗಳಲ್ಲಿ ಮಾವು ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಈ ಮಾವು ಸುಣ್ಣವನ್ನು ಬಯಸುವ ಬೆಳೆಯಾಗಿದೆ. ನಮ್ಮ ಈ ಭಾಗದಲ್ಲಿ ಮಣ್ಣಿನಲ್ಲಿ ಸುಣ್ಣದ ತೀವ್ರ ಕೊರತೆಯಿದೆ. ಸುಣ್ಣವು ಮಾವಿನ ಅಂಗಾಂಶಗಳ ಆರೋಗ್ಯಕ್ಕೆ ಅತಿ ಅವಶ್ಯಕ. ಜುಲೈ ತಿಂಗಳಿನಲ್ಲಿ ಅಂದರೆ ಮಳೆಗಾಲದ ಆರಂಭದಲ್ಲಿ ಸುಣ್ಣ ನೀಡುವುದು ಸೂಕ್ತ. ಸುಣ್ಣದ ಪುಡಿಯನ್ನು ಗಿಡದ ಪಾತಿಯಲ್ಲಿ ಸಮನಾಗಿ ಉದುರಿಸಿ ನಂತೆ ಹಗುರವಾಗಿ ನೆಲವನ್ನು ಅಗೆಯಬೇಕು. ಮಳೆ ಬಂದಾಗ ಸುಣ್ಣ ಕರಗಿ ಬೇರಿಗೆ ಅಭಿಸುತ್ತದೆ ಎಂದು ವಿವರಿಸಿದರು.
ಮಾವಿನ ಗಿಡಗಳಲ್ಲಿ ಒತ್ತಾಗಿ ಬೆಳೆದ ರೆಂಬೆಗಳನ್ನು ಕತ್ತರಿಸಿ ವಿರಳಗೊಳಿಸಿದರೆ ಸೂರ್ಯನ ಬೆಳಕು ಒಳಭಾಗದಲ್ಲಿ ಬೀಳುವಂತಾಗಿ ಒಳಭಾಗದಲ್ಲಿಯೂ ಕಾಯಿ ಕಚ್ಚುತ್ತವೆ. ಇದರಿಂದ ಇಳುವರಿ ಹಾಗೂ ಹಣ್ಣಿನ ಗುಣಮಟ್ಟ ಹೆಚ್ಚಾಗುತ್ತದೆ. ಹನಿ ನೀರಾವರಿ ಅಳವಡಿಸಿಕೊಳ್ಳುವುದು ಉತ್ತಮ, ಇದರಿಂದ ನೀರಿನ ಸದ್ಭಳಕೆಯಾಗುವುದು ಮತ್ತು ಕಾಯಿ ಉದುರುವುದು ಕಡಿಮೆಯಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಸವರುವಿಕೆ ರೀತಿ, ಕೀಟಗಳ ನಿರ್ವಹಣೆ, ಜುಲೈ ಆಗಸ್ಟ್ ತಿಂಗಳಿನಲ್ಲಿ ಕೈಗೊಳ್ಳಬೇಕಾದ ಬೇಸಾಯ ಕ್ರಮಗಳು, ತೋಟಗಳ ಪುನಶ್ಚೇತನ, ವಿಮೆ ಮಾಡಿಸುವುದು, ಹೊಸ ತೋಟಗಳ ಸ್ಥಾಪನೆಗೆ ಸರ್ಕಾರದಿಂದ ಸಿಗುವ ಸಹಾಯಧನ, ಹನಿ ನೀರಾವರಿ ಮುಂತಾದ ವಿಷಯಗಳ ಬಗ್ಗೆ ವಿಜ್ಞಾನಿಗಳು ಮತ್ತು ಅಧಿಕಾರಿಗಳು ತಿಳಿಸಿದರು.
ಜಿಕೆವಿಕೆ ಹಣ್ಣು ವಿಭಾಗದ ವಿಜ್ಞಾನಿ ಡಾ.ಮುಕುಂದ್, ತೋಟಗಾರಿಕೆ ಇಲಾಖೆಯ ನಿವೃತ್ತ ಅಪರ ನಿರ್ದೇಶಕ ಎಸ್.ವಿ.ಹಿತ್ತಲಮುನಿ, ತೋಟಗಾರಿಕಾ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕ ಕದಿರೇಗೌಡ, ಉಪನಿರ್ದೇಶಕಿ ಗಾಯತ್ರಿ, ಸಹಾಯಕ ನಿರ್ದೇಶಕ ಮುನೇಗೌಡ, ಹಾಪ್ಕಾಮ್ಸ್ ಉಪಾಧ್ಯಕ್ಷ ಚಂದ್ರೇಗೌಡ, ಆರ್.ಶ್ರೀನಿವಾಸ್, ರಾಮಯ್ಯ, ಸುರೇಶ್, ಚಿಕ್ಕಣ್ಣ ಹಾಜರಿದ್ದರು.
- Advertisement -
- Advertisement -
- Advertisement -







