ವಿದ್ಯೆ, ಕ್ರೀಡೆ, ರಾಜಕೀಯ, ಕಲೆ ಹೀಗೆ ಬಹುತೇಕ ಕ್ಷೇತ್ರಗಳಲ್ಲಿ ಪುರುಷರಿಗೆ ಸರಿಸಮನಾಗಿ ನಿಂತು ಸ್ವತಂತ್ರರಾಗಿ, ಸ್ವಾವಲಂಬಿಗಳಾಗಿ ಬದುಕುತ್ತಿರುವ ಮಹಿಳೆಯರು ಮಾದರಿಯಾಗಿದ್ದಾರೆ. ಗ್ರಾಮೀಣ ಭಾಗದಲ್ಲಿಯೂ ದುಡಿಯುವ ಹೆಣ್ಣು ಆರ್ಥಿಕವಾಗಿ ಸಬಲಳಾಗಬೇಕು ಎಂದು ಮಳ್ಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಧಾ ಶಿವಕುಮಾರ್ ತಿಳಿಸಿದರು.
ತಾಲ್ಲೂಕಿನ ಮುತ್ತೂರು ಗ್ರಾಮದಲ್ಲಿ ಶ್ರೀ ಗಂಗಾದೇವಿ ಮಹಿಳಾ ಸ್ವಸಹಾಯ ಸಂಘ ಮತ್ತು ಶ್ರೀ ನೇತಾಜಿ ಗ್ರಾಮೀಣಾಭಿವೃದ್ಧಿ ಸಂಘದ ಸಹಯೋಗದಲ್ಲಿ ಈಚೆಗೆ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದುಡಿವ ಮಹಿಳೆಯರನ್ನು ಗೌರವಿಸಿ, ಪ್ರೋತ್ಸಾಹ ನೀಡುವುದಕ್ಕೆ “ಮಹಿಳಾ ದಿನ” ಆಚರಿಸಲಾಗುತ್ತದೆ. ಇದು ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಸಾಧನೆಯ ಸಂಕೇತ ದಿನ. ಮಹಿಳೆಯರಿಗೆ ಹಕ್ಕು, ಹಿತರಕ್ಷಣೆ, ಜಾಗತಿಕ ಮಟ್ಟದಲ್ಲಿ ತಿಳಿವಳಿಕೆ, ಶಿಕ್ಷಣ, ತರಬೇತಿ, ವಿಜ್ಞಾನ, ತಂತ್ರಜ್ಞಾನಕ್ಕೆ ನೆರವು ನೀಡಿ, ಸಮಾಜದಲ್ಲಿ ಸಮಾನತೆಯ ವೈಶಿಷ್ಟ್ಯಪೂರ್ಣ ಬದಲಾವಣೆಗಳಿಗೆ ಅವಕಾಶ ಕಲ್ಪಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಹಿಳೆಯರಿಗೆ ಕುಂಕುಮ ಮತ್ತು ಬಳೆಗಳನ್ನು ವಿತರಿಸಲಾಯಿತು.
ಮಳ್ಳೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಎಂ.ವಿ.ಗೋಪಾಲಪ್ಪ, ಸದಸ್ಯರಾದ ಬೈರೇಗೌಡ, ಶಾಮಲಾ ದೇವರಾಜ್, ಕೆಂಪಮ್ಮ ಸೂರಪ್ಪ, ಸಾಕಮ್ಮ, ಶ್ರೀ ನೇತಾಜಿ ಗ್ರಾಮೀಣಾಭಿವೃದ್ಧಿ ಸಂಘದ ಅಧ್ಯಕ್ಷ ಜಿ.ಮಂಜುನಾಥ್, ನಿರ್ದೇಶಕಿ ಜಿ.ಅಶ್ವಿನಿ, ಶಿವಮ್ಮ ಹಾಜರಿದ್ದರು.