ದಸರಾ ಬಂತೆಂದರೆ ಗೊಂಬೆ ಕೂರಿಸುವ ಸಂಭ್ರಮ, ಅಟ್ಟವೇರಿರುವ ಗೊಂಬೆ ತೆಗೆಯುವ ಉತ್ಸಾಹ, ಆ ಬೊಂಬೆಗಳಿಗೆ ಉಡುಗೆ ತೊಡಿಸಿ ಮಾಡುವ ಶೃಂಗಾರ, ಹಂತ ಹಂತವಾಗಿ ಬೊಂಬೆ ಜೋಡಿಸುವ ಸಡಗರ.
ಪಟ್ಟದ ಗೊಂಬೆ, ಅಮ್ಮನವರ ಮೂರ್ತಿ, ಬೆಣಚುಕಲ್ಲಿನ ಗಣಪತಿ, ದಶಾವತಾರ, ಮುವ್ವತ್ತು ವರ್ಷಗಳ ಹಿಂದಿನ ರಾಮ ಮತ್ತು ಕೃಷ್ಣರ ಅಪರೂಪದ ಮೂರ್ತಿಗಳು, ಶೆಟ್ಟಪ್ಪ ಶೆಟ್ಟಮ್ಮ, ಅವರ ಅಂಗಡಿಗೆ ದಿನಸಿ ತರುವ ಗಾಡಿ, ಹಣ್ಣು ತರುವವರು, ಈಶ್ವರನ ಅಭಿಷೇಕಕ್ಕೆ ಗಣಪತಿಯ ವಾದ್ಯಗೋಷ್ಠಿ, ರಾಮ ಗುಹನೊಂದಿಗೆ ವನವಾಸಕ್ಕೆ ತೆರಳುದ ದೃಶ್ಯ, ಶಬರಿ ರಾಮನಿಗೆ ಹಣ್ಣು ತಿನ್ನಿಸುವುದು, ರಾಮನ ತೊಡೆಯ ಮೇಲೆ ಮಲಗಿದ ಲಕ್ಷ್ಮಣ ಸಂಜೀವಿನಿ ತರಲು ಹೊರಟ ಹನುಮಂತ, ಮದುವೆ, ಮದುವೆ ಊಟ, ಹೆಣ್ಣಿನ ದೈನಂದಿನ ಕಾಯಕ, ಒಂಟೆ, ಕುದುರೆ, ಚನ್ನಪಟ್ಟಣದ ಬೊಂಬೆಗಳು, ವಿವಿಧ ದೇಶವಾಸಿಗಳ ದಿರಿಸುಗಳು, ಯೋಧರು, ಬುಡಕಟ್ಟು ಜನರು, ಮೈಸೂರು ಅರಮನೆ… ಹೀಗೆ ಗೊಂಬೆಗಳನ್ನು ತಾಲ್ಲೂಕಿನ ಮೇಲೂರಿನ ರವಿಪ್ರಸಾದ್ ಅವರ ಮನೆಯಲ್ಲಿ ವಿಶಿಷ್ಟವಾಗಿ ಜೋಡಿಸಿದ್ದಾರೆ.
‘ಆಶ್ವಯುಜ ಶುದ್ಧ ಪಾಡ್ಯದಿಂದ ದಶಮಿಯವರೆಗೆ 10 ದಿನ ನಡೆಯುವ ದಸರಾ ಹಬ್ಬದ ಸಂದರ್ಭದಲ್ಲಿ ಮೈಸೂರಿನ ಅರಮನೆ ಸಂಪ್ರದಾಯ ಅನುಸರಿಸಿ ಸಾಮಾಜಿಕ ಮತ್ತು ಸಾಂಸ್ಕೃತಿಕ ಪರಂಪರೆ ಬಿಂಬಿಸುವ ಗೊಂಬೆಹಬ್ಬವನ್ನು ನಾಡಿನ ಗೃಹಿಣಿಯರು ಮನೆಮನೆಗಳಲ್ಲಿ ಆಚರಿಸುತ್ತಾರೆ. ನಮ್ಮ ಮನೆಯಲ್ಲಿ ಸುಮಾರು 35 ವರ್ಷಗಳಿಂದಲ್ಲೂ ಗೊಂಬೆಗಳನ್ನಿಡುವ ಸಂಪ್ರದಾಯವಿದೆ. ನಮ್ಮಜ್ಜಿ ಗೊಂಬೆ ಇಡುವುದನ್ನು ನಮಗೆ ಕಲಿಸಿಕೊಟ್ಟರು. ಈಬಾರಿ ಮೈಸೂರು ಅರಮನೆಯ ಸುಂದರ ಪ್ರತಿಕೃತಿನ್ನು ತಂದಿರಿಸಿದ್ದೇವೆ’ ಎಂದು ಮೇಲೂರು ರವಿಪ್ರಸಾದ್ ತಿಳಿಸಿದರು.
ಕೃಷ್ಣಮೂರ್ತಿ, ಅಶ್ವತ್ಥಮ್ಮ, ದಿವ್ಯಾ ಹಾಜರಿದ್ದರು.