Home News ಮೇಲೂರು ಗ್ರಾಮದ ಗಂಗಾದೇವಿಯ ಬ್ರಹ್ಮರಥೋತ್ಸವ

ಮೇಲೂರು ಗ್ರಾಮದ ಗಂಗಾದೇವಿಯ ಬ್ರಹ್ಮರಥೋತ್ಸವ

0

ಪುರಾಣ ಪ್ರಸಿದ್ದ ಶ್ರೀ ಗಂಗಾದೇವಿಯ ಬ್ರಹ್ಮರಥೋತ್ಸವ ತಾಲ್ಲೂಕಿನ ಮೇಲೂರು ಗ್ರಾಮದಲ್ಲಿ ಚೈತ್ರ ಶುದ್ಧ ಪೌರ್ಣಿಮೆ ಶುಕ್ರವಾರ ಅದ್ದೂರಿಯಾಗಿ ನೆರವೇರಿತು. ಗ್ರಾಮದ ಮುಖಂಡರುಗಳು ಹಾಗೂ ಯುವಕರು ರಥೋತ್ಸವಕ್ಕೆ ಚಾಲನೆ ನೀಡಿದರು. ರೆವಿನ್ಯೂ ಸೆಕ್ರೇಟರಿ ಕುಬೇರ ಗಿರಿಯನ್ನನವರ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಮುನಾ ಧರ್ಮೇಂದ್ರ, ಮುಖಂಡ ಬಿ.ಎನ್.ರವಿಕುಮಾರ್, ಗ್ರಾಮದ ಹಿರಿಯರು ಹಾಗೂ ಯುವಕರು ರಥೋತ್ಸವಕ್ಕೆ ಚಾಲನೆ ನೀಡಿದರು.
ತಾಲ್ಲೂಕಿನ ಪುರಾಣ ಪ್ರಸಿದ್ದ ದೇವಾಲಯಗಳಲ್ಲಿ ಒಂದಾದ ಮೇಲೂರಿನ ಶ್ರೀ ಗಂಗಾದೇವಿಯ ಬ್ರಹ್ಮರಥೋತ್ಸವದ ಅಂಗವಾಗಿ ದೇವಾಲಯವನ್ನು ಹೂವಿನ ಅಲಂಕಾರದಿಂದ ಶೃಂಗಾರ ಮಾಡಲಾಗಿತ್ತು, ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ವಿಜೃಂಭಣೆಯಿಂದ ಬ್ರಹ್ಮರಥೋತ್ಸವ ಕಾರ್ಯಕ್ರಮವನ್ನು ನೆರವೇರಿಸಲಾಯಿತು, ಮಂಗಳವಾದ್ಯಗಳು, ತಮಟೆಗಳ ವಾದನ ರಥೋತ್ಸವಕ್ಕೆ ಮೆರುಗನ್ನು ತಂದಿತ್ತು.
ಬ್ರಹ್ಮರಥೋತ್ಸವದ ಅಂಗವಾಗಿ ಹೋಮಕುಂಡವನ್ನು ಸ್ಥಾಪನೆ ಮಾಡಿ, ಲೋಕ ಕಲ್ಯಾಣಾರ್ಥವಾಗಿ ವಿವಿಧ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು, ಗಂಗಾದೇವಿಗೆ ವಿಶೇಷ ಹೂವಿನ ಅಲಂಕಾರಗಳೊಂದಿಗೆ ಪೂಜೆಗಳನ್ನು ಸಮರ್ಪಣೆ ಮಾಡಲಾಯಿತು, ನೆರೆದಿದ್ದ ಭಕ್ತಾದಿಗಳು ರಥಕ್ಕೆ ದವನದೊಂದಿಗಿನ ಬಾಳೇ ಹಣ್ಣು ಎಸೆಯುವುದರ ಮೂಲಕ ತಮ್ಮ ಇಷ್ಟಾರ್ಥಗಳನ್ನು ನೆರವೇರಿಸುವಂತೆ ದೇವರಲ್ಲಿ ಪ್ರಾರ್ಥಿಸಿದರು, ಸುತ್ತಮುತ್ತಲಿನ ಹಳ್ಳಿಗಳಿಂದ ಬಂದಿದ್ದ ಭಕ್ತಾದಿಗಳಿಗೆ ಕೋಸಂಬರಿ ಪಾನಕಗಳನ್ನು ವಿತರಿಸಲಾಯಿತು. ದೇವಾಲಯದಿಂದ ಭಕ್ತಾದಿಗಳಿಗೆ ಸಿಹಿಯೊಂದಿಗೆ ಅನ್ನಸಂತರ್ಪಣೆಯನ್ನು ಸಹ ಏರ್ಪಡಿಸಲಾಗಿತ್ತು. ಬತ್ತಾಸು, ಬುರುಗು, ಖಾರ, ವಿವಿಧ ಸಿಹಿ ಖಾದ್ಯಗಳು, ಹಣ್ಣುಗಳು, ತಂಪು ಪಾನೀಯಗಳು ಮೊದಲಾದ ಆಕರ್ಷಕ ಅಂಗಡಿಗಳು ಜನರನ್ನು ಆಕರ್ಷಿಸುತ್ತಿದ್ದವು.
ಗ್ರಾಮದ ಮುಖಂಡರಾದ ಬಿ.ಎನ್.ರವಿಕುಮಾರ್, ಆರ್.ಎ.ಉಮೇಶ್, ಕೆ.ಎಸ್.ಮಂಜುನಾಥ್, ಸುದರ್ಶನ್, ಧರ್ಮೇಂದ್ರ, ಸುಧೀರ್, ಶ್ರೀನಿವಾಸಮೂರ್ತಿ(ಪುಲಿ), ಕೆ.ಎನ್.ಬಚ್ಚೇಗೌಡ, ರಾಮಕೃಷ್ಣಪ್ಪ, ಶಿವಕುಮಾರ್, ಜೇಜೇಗೌಡ, ಅಶ್ವಥ್ಥಪ್ಪ, ಮುನಿಶಾಮಪ್ಪ, ಎಂ.ಜೆ.ಶ್ರೀನಿವಾಸ್, ಪ್ರಧಾನ ಆಗಮೀಕರಾದ ಎಂ.ಎಸ್.ನಾರಾಯಣಮೂರ್ತಿ, ಗಂಗಾದೇವಿ ಭಕ್ತಮಂಡಲಿ ಮತ್ತು ದೇವಾಲಯದ ಸಮಿತಿಯ ಪದಾಧಿಕಾರಿಗಳು ಹಾಗೂ ಗ್ರಾಮದ ಯುವಜನರು ಹಾಜರಿದ್ದರು.

error: Content is protected !!