ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ನಗರದ ಟಿ.ಬಿ. ರಸ್ತೆಯಲ್ಲಿರುವ ಕೃಷ್ಣಸ್ವಾಮಿ ದೇವಸ್ಥಾನ ಸೇರಿದಂತೆ ಉಲ್ಲೂರುಪೇಟೆಯ ಶ್ರೀರಾಮ ಭಜನೆ ಮಂದಿರದಲ್ಲಿ ವಿಶೇಷ ಹೂವಿನ ಅಲಂಕಾರ, ಹೋಮ, ಪೂಜೆ ನಡೆಸಲಾಯಿತು.
ಯಾದವ ಕುಲಸ್ಥರು ಕುಟುಂಬ ಸಮೇತರಾಗಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ಮಹಿಳೆಯರು ತಂಬಿಟ್ಟು ದೀಪಗಳನ್ನು ಮೆರವಣಿಗೆಯಲ್ಲಿ ತಂದು ಪೂಜೆಯನ್ನು ನೆರವೇರಿಸಿದರು.
ತಾಲ್ಲೂಕಿನ ಯಾದವ ಕುಲಸ್ಥರಿಂದ ಕುದುರೆ ರಥ ಮೆರವಣಿಗೆಯನ್ನು ಆಯೋಜಿಸಿದ್ದು, ಶ್ರೀಕೃಷ್ಣ ಮೂರ್ತಿಗಳಿರುವ ಮುತ್ತಿನ ಪಲ್ಲಕ್ಕಿಗಳು, ಸಪ್ತಾಶ್ವದ ರಥಗಳು, ಕೀಲುಕುದುರೆ, ಗಾರ್ಡಿಬೊಂಬೆ, ನವಿಲುಬೊಂಬೆ, ತಮಟೆ ವಾದನ, ನಾದಸ್ವರ, ಶ್ರೀಕೃಷ್ಣ ವೇಷಧಾರಿಗಳಾದ ಮಕ್ಕಳು, ದೀಪಗಳನ್ನು ಹೊತ್ತ ಮಹಿಳೆಯರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯಲ್ಲಿ ಸಾಗಿದ್ದು ಆಕರ್ಷಕವಾಗಿತ್ತು.
ಪಟ್ಟಣದ ಉಲ್ಲೂರುಪೇಟೆಯ ಭಜನೆ ಮಂದಿರದಲ್ಲಿರುವ ಪುರಾತನ ತಂಜಾವೂರು ಚಿತ್ರಕಲೆಯ ಬಾಲಕೃಷ್ಣನ ಚಿತ್ರಪಟಕ್ಕೆ ವಿಶೇಷ ಅಲಂಕಾರವನ್ನು ಮಾಡಿ ಪೂಜೆಯನ್ನು ನೆರವೇರಿಸಲಾಯಿತು.
ಮೆರವಣಿಗೆಯಲ್ಲಿ ಭಾಗವಹಿಸಿದ್ದ ಎಲ್ಲಾ ಪಲ್ಲಕ್ಕಿಗಳ ತಂಡದವರಿಗೆ ನೆನಪಿನ ಕಾಣಿಕೆಯನ್ನು ನೀಡಲಾಯಿತು.
- Advertisement -
- Advertisement -
- Advertisement -
- Advertisement -