Home News ರಾಘವೇಂದ್ರಸ್ವಾಮಿಯವರ ಆರಾಧನಾ ಮಹೋತ್ಸವ

ರಾಘವೇಂದ್ರಸ್ವಾಮಿಯವರ ಆರಾಧನಾ ಮಹೋತ್ಸವ

0

ಪಟ್ಟಣದ ಮುತ್ತೂರು ಬೀದಿಯ ರಾಘವೇಂದ್ರಸ್ವಾಮಿ ದೇವಾಲಯದಲ್ಲಿ ಮಂಗಳವಾರ ರಾಘವೇಂದ್ರಸ್ವಾಮಿಯವರ 343ನೇ ಆರಾಧನಾ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಮೂರು ದಿನಗಳ ಕಾಲ ನಡೆಸುವ ಆರಾಧನಾ ಮಹೋತ್ಸವವು ಸೋಮವಾರ ಪ್ರಾರಂಭವಾಯಿತು. ಸುಪ್ರಭಾತ ಸೇವೆ, ಪಂಚಾಮೃತ ಅಭಿಷೇಕ, ಸಹಸ್ರನಾಮಾರ್ಚನೆ, ಹಸ್ತೋದಕ, ಮಹಾಮಂಗಳಾರತಿ ನಡೆದು ಸಂಜೆ ಪತಂಜಲಿ ಯೋಗ ಶಿಕ್ಷಣ ಅಮಿತಿ ವತಿಯಿಂದ ಹಾಗೂ ಗಾಯಿತ್ರಿ ಮಹಿಳಾ ಮಂಡಳಿಯಿಂದ ಭಜನೆ ನಡೆಯಿತು.
ಮಂಗಳವಾರ ಸುಪ್ರಭಾತ ಸೇವೆ, ಪಂಚಾಮೃತ ಅಭಿಷೇಕ, ಸಹಸ್ರನಾಮಾರ್ಚನೆಯ ನಂತರ ರಾಯರ ಉತ್ಸವವನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮಂಗಳವಾದ್ಯಗಳೊಂದಿಗೆ ನಡೆಸಲಾಯಿತು. ಹಸ್ತೋದಕ, ಮಹಾಮಂಗಳಾರತಿಯ ನಂತರ ಬ್ರಾಹ್ಮಣರ ಸಂತರ್ಪಣೆಯನ್ನು ನಡೆಸಲಾಯಿತು.
‘ಸುಮಾರು 30 ವರ್ಷಗಳಿಂದಲೂ ಪಟ್ಟಣದ ರಾಯರ ಮಠದಲ್ಲಿ ಮೂರು ದಿನಗಳ ಆರಾಧನೆಯನ್ನು ನಡೆಸಿಕೊಂಡು ಬರುತ್ತಿದ್ದೇವೆ. ಪೂರ್ವಾರಾಧನೆ, ಮಧ್ಯಾರಾಧನೆ ಮತ್ತು ಉತ್ತರಾರಾಧನೆ ಎಂದು ಮೂರು ದಿನಗಳ ಕಾಲ ನಡೆಯುವ ಆರಾಧನೆಯಲ್ಲಿ ಹೋಮ ಹವನಗಳು, ರಾಯರ ಕಥೆಯನ್ನು ತಿಳಿಸುಕೊಡುವುದು, ವಿಶೇಷ ಪೂಜೆಗಳು, ಭಜನೆ, ಗೀತಗಾಯನಗಳನ್ನು ಆಯೋಜಿಸಲಾಗುತ್ತದೆ. ರಾಯರು ಭಕ್ತಿಯಿಂದ ಪೂಜಿಸುತ್ತಿದ್ದ ರಾಮ, ಕೃಷ್ಣ, ವೇದವ್ಯಾಸ, ಲಕ್ಷ್ಮೀನರಸಿಂಹ ಮತ್ತು ಹಯಗ್ರೀವ ದೇವರುಗಳನ್ನು ಪೂಜಿಸಲಾಗುತ್ತದೆ. ಸರ್ವರಿಗೂ ಸಲ್ಲುವ ರಾಯರ ಮಹಿಮೆಯನ್ನು ಎಲ್ಲರಿಗೂ ಸಾರುವ ಉದ್ದೇಶದಿಂದ ಸಂಜೆಗೆ ದೇವರನಾಮಗಳು ಹಾಗೂ ಶ್ರೀರಾಘವೇಂದ್ರ ವಿಜಯ ಹರಿಕಥೆಯನ್ನು ಆಯೋಜಿಸಿದ್ದೇವೆ. ಬುಧವಾರ ಸಂಜೆ ಶೃಂಗೇರಿ ಸಹೋದರಿಯರಿಂದ ಸಂಗೋತ ಕಚೇರಿ ಹಾಗೂ ಎನ್‌.ಮೇಘನಾ ಅವರಿಂದ ದೇವರನಾಮಗಳನ್ನು ಆಯೋಜಿಸಿದ್ದೇವೆ’ ಎಂದು ಬ್ರಾಹ್ಮಣ ಸಂಘದ ಜಿಲ್ಲಾಧ್ಯಕ್ಷ ಎಂ.ವಾಸುದೇವರಾವ್‌ ತಿಳಿಸಿದರು.