ತಾಲ್ಲೂಕಿನ ಬಶೆಟ್ಟಹಳ್ಳಿ ಗೇಟ್ ಬಳಿಯಿರುವ ಶ್ರೀ ಸಾಯಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಶನಿವಾರ ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿದ್ಯಾರ್ಥಿಗಳ ಪೋಷಕರಿಗೆ ಕ್ರೀಡಾಕೂಟ ಮತ್ತು ಪೋಷಕರೊಂದಿಗೆ ಆಡಳಿತ ಮಂಡಳಿ ಹಾಗೂ ಶಿಕ್ಷಣ ತಜ್ಞರಿಂದ ನಡೆದ ಸಮಾಲೋಚನಾ ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ವಿ.ನಾರಾಯಣಸ್ವಾಮಿ ಮಾತನಾಡಿದರು.
ರಾಜ್ಯೋತ್ಸವವು ಕೇವಲ ಒಂದು ದಿನಕ್ಕೆ ಸೀಮಿತವಾಗದೇ ನಿತ್ಯೋತ್ಸವವಾಗಬೇಕು. ಈ ನಿಟ್ಟಿನಲ್ಲಿ ನವೆಂಬರ್ಗೆ ಮಾತ್ರ ರಾಜ್ಯೋತ್ಸವ ಆಚರಿಸಿ ಕನ್ನಡದ ಮೇಲಿನ ಪ್ರೇಮವನ್ನು ವ್ಯಕ್ತಪಡಿಸುವುದಕ್ಕಿಂತ ವರ್ಷದ ಎಲ್ಲ ದಿನಗಳಲ್ಲೂ ಕನ್ನಡ ಭಾಷೆಯನ್ನು ಬಳಸುವ ಜೊತೆಗೆ ಗೌರವಿಸಬೇಕು ಎಂದು ಅವರು ತಿಳಿಸಿದರು.
ಮಕ್ಕಳಿಗೆ ಉಜ್ವಲ ಭವಿಷ್ಯ ಒದಗಿಸುವಲ್ಲಿ ಪೋಷಕರ ಮತ್ತು ಶಿಕ್ಷಕರ ಪಾತ್ರ ಮಹತ್ತರವಾಗಿದೆ. ಗ್ರಾಮೀಣ ಭಾಗದಲ್ಲಿ ಶ್ರೀ ಸಾಯಿ ಇಂಟರ್ ನ್ಯಾಷನಲ್ ಶಾಲೆಯು ಮಕ್ಕಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಅವರನ್ನು ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸಲು ಕಾಲ ಕಾಲಕ್ಕೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕರವೇ ಕನ್ನಡಿಗರ ಸಾರಥ್ಯ ಸಂಘಟನೆಯ ರಾಜ್ಯಾಧ್ಯಕ್ಷ ಅಗಲಗುರ್ಕಿ ಚಲಪತಿ ಮಾತನಾಡಿ, ನಾಡು, ನುಡಿ, ಜಲ, ಸಂಸ್ಕೃತಿ, ಸ್ವಾಭಿಮಾನಕ್ಕೆ ಧಕ್ಕೆಯಾದ ಸಂದರ್ಭದಲ್ಲಿ ಪ್ರತಿಯೊಬ್ಬರೂ ಹೋರಾಟ ನಡೆಸುವ ಮೂಲಕ ತಾಯಿ ಭುವನೇಶ್ವರಿ ರಕ್ಷಣೆಗೆ ನಿಲ್ಲಬೇಕು. ಕನ್ನಡ ಕೇವಲ ಭಾಷೆಯಲ್ಲ, ಬದಲಿಗೆ ನೂರಾರು ವರ್ಷಗಳ ಇತಿಹಾಸ ಹೊಂದಿರುವ ಸಾಹಿತ್ಯಾತ್ಮಕ ಧ್ವನಿಯಾಗಿದೆ. ಪ್ರತಿಯೊಬ್ಬರೂ ಕನ್ನಡ ಅಭಿವೃದ್ಧಿಗೆ ಕಂಕಣಬದ್ಧರಾಗಬೇಕಿದೆ ಎಂದರು.
ಶಿಕ್ಷಣ ತಜ್ಞರಾದ ಬೆಂಗಳೂರಿನ ಶೈಲಜಾಶಾಸ್ತ್ರಿ ಮಕ್ಕಳ ಪೋಷಣೆ, ಶಿಕ್ಷಣ, ಮೌಲ್ಯಮಾಪನ ಸೇರಿದಂತೆ ಇತರೆ ವಿಚಾರಗಳ ಕುರಿತು ಪೋಷಕರಲ್ಲಿ ಅರಿವು ಮೂಡಿಸಿದರು.
ರಾಜ್ಯೋತ್ಸವ ಪ್ರಯುಕ್ತ ಮಕ್ಕಳಿಂದ ನೆರವೇರಿದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮನಸೂರೆಗೈದವು. ದಿನವಿಡೀ ನಡೆದ ಕಾರ್ಯಕ್ರಮದಲ್ಲಿ ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದ ಪೋಷಕರು ಬಾಲ್ಯದ ನೆನಪುಗಳನ್ನು ಮೆಲುಕು ಹಾಕಿಕೊಂಡು ಉತ್ಸಾಹದಿಂದ ಕ್ರೀಡೆ ಮತ್ತಿತರ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.
ಕರವೇ ಜಿಲ್ಲಾಧ್ಯಕ್ಷ ದೇವರಾಜ್, ಮುಖಂಡ ಮುನಿಶಾಮಿಗೌಡ, ಸೋಸು ನಾಗೇಂದ್ರನಾಥ್, ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ದೀಪಾ ಮಂಜುನಾಥ್, ಕಾರ್ಯದರ್ಶಿ ಎಂ.ಮಂಜುನಾಥ್, ಪ್ರಾಂಶುಪಾಲೆ ಮಂಜುಳಾ ಮುರಳೀಧರ್, ಶಿಕ್ಷಕರಾದ ವಿನುತಾ, ಧನ್ಯ, ಮೀನಾಕ್ಷಿ, ಮಾಲಾಶ್ರಿ, ಮಂಜುಳ, ನೇತ್ರಾವತಿ, ಗಜೇಂದ್ರ, ಶ್ರೀನಿವಾಸ್, ರೂಪಶ್ರೀ, ಶೈಲಜಾ, ಮಮತಾ, ಸುಮಿತ್ರಾ, ಅಮರಾವತಿ, ಲಕ್ಷ್ಮೀ, ಮಿಥುನ್ ಹಾಜರಿದ್ದರು.
- Advertisement -
- Advertisement -
- Advertisement -