ನಗರದ ತಾಲ್ಲೂಕು ಕಚೇರಿ ಸಮೀಪದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜನೆ ಮಾಡಲಾಗಿದ್ದ ಒಂಬತ್ತನೇ ವರ್ಷದ ಮಹರ್ಷಿವಾಲ್ಮೀಕಿ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.
ವಾಲ್ಮೀಕಿ ಸಮಾಜವು ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕವಾಗಿ ಮುಂದುವರೆಯಬೇಕು ಎಂದು ಅವರು ತಿಳಿಸಿದರು.
ಮಹರ್ಷಿ ವಾಲ್ಮೀಕಿಯವರು ತಮ್ಮ ಮಹಾ ತಪ್ಪಸ್ಸಿನಿಂದ ಉತ್ತಮವಾದ ಜ್ಞಾನೋಪದೇಶದ ಜೊತೆಗೆ ಅಹಿಂಸೆಯೆ ಪರಮಧರ್ಮವೆಂಬ ಮಂತ್ರವನ್ನು ತೋರಿಸಿಕೊಟ್ಟಿದ್ದಾರೆ. ಅವರ ಮಾರ್ಗದರ್ಶನಗಳು ಇಂದಿಗೂ ಕೂಡ ಪ್ರಸ್ತುತವಾಗಿವೆ. ವಿಶ್ವದ ಸಮಸ್ತ ಜನರು ಅವರ ದೂರದೃಷ್ಟಿಯನ್ನು ಹಾಗೂ ಅವರು ರಚಿಸಿದ ಮಹಾಕಾವ್ಯ ರಾಮಾಯಣವನ್ನು ಅರಿಯುವುದು ಅವಶ್ಯಕವಾಗಿದೆ. ಅದು ಮುಂದಿನ ಪೀಳಿಗೆಗೂ ಸಹಾ ದಾರಿ ದೀಪವಾಗಬೇಕು ಎಂದರು.
ತಹಶೀಲ್ದಾರ್ ಎಸ್.ಅಜಿತ್ಕುಮಾರ್ ರೈ ಮಾತನಾಡಿ, ಮಹರ್ಷಿ ವಾಲ್ಮೀಕಿ ರಚಿಸಿರುವ ಮಹಾಕಾವ್ಯದಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗಿದೆ. ಈಗಾಗಲೇ ಸರ್ಕಾರದಿಂದ ಸುಮಾರು ೩೫-೪೦ ಜಯಂತಿಗಳನ್ನು ಆಚರಿಸುತ್ತಿದ್ದು ಮಾಹಾನ್ ವ್ಯಕ್ತಿಗಳ ಜಯಂತಿಗಳನ್ನು ಯಾವುದೋ ಒಂದು ಸಮಾಜದ ಮುಖಂಡರು ಆಚರಿಸುತ್ತಿರುವುದು ದುರಂತವೇ ಸರಿ, ಮಹಾ ಪುರುಷರ ಜಯಂತಿಗಳನ್ನು ಎಲ್ಲಾ ಸಮುದಾಯದವರು ಸೇರಿ ಆಚರಿಸಿದಾಗ ಮಾತ್ರ ಜಯಂತಿಗಳಿಗೆ ಗೌರವ ಸಿಗುವಂತಾಗುತ್ತದೆ ಎಂದರು.
ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭೆಯ ಜಿಲ್ಲಾಧ್ಯಕ್ಷ ಬಂಕ್ ಮುನಿಯಪ್ಪ ಮಾತನಾಡಿ, ತಾಲ್ಲೂಕಿನ ತಲಕಾಯಲಬೆಟ್ಟದಲ್ಲಿ ವಾಲ್ಮೀಕಿ ತಪೋವನ ನಿರ್ಮಿಸಲು ಶಾಸಕರು ಮುಂದಾಗಬೇಕು. ವಾಲ್ಮೀಕಿ ಸಮಾಜದಲ್ಲಿ ಇಂದಿಗೂ ಶಿಕ್ಷಣ ವಂಚಿತರು ಸಾಕಷ್ಟಿದ್ದು ಉತ್ತಮ ಶಿಕ್ಷಣಕ್ಕಾಗಿ ವಸತಿ ಶಾಲೆಗಳನ್ನು ನಿರ್ಮಿಸಿಕೊಡಬೇಕು. ತಮ್ಮ ಕಾಲಾವಧಿಯಲ್ಲಿ ವಾಲ್ಮೀಕಿ ಸಮುದಾಯಕ್ಕೆ ಹೆಚ್ಚಿನ ಆಧ್ಯತೆ ನೀಡುವ ಮೂಲಕ ಸಮಾಜದ ಏಳಿಗೆಗೆ ಸಹಕಾರ ನೀಡಬೇಕು ಎಂದು ಸಭೆಯಲ್ಲಿ ಶಾಸಕರಿಗೆ ಮನವಿ ಮಾಡಿದರು.
ಸಮಾರಂಭದಲ್ಲಿ ವಾಲ್ಮೀಕಿ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.
ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ನಿರ್ಮಲಾಮುನಿರಾಜು, ನಗರಸಭೆ ಅಧ್ಯಕ್ಷ ಅಫ್ಸರ್ಪಾಷ, ಉಪಾಧ್ಯಕ್ಷೆ ಪ್ರಭಾವತಿ ಸುರೇಶ್, ಪೌರಾಯುಕ್ತ ಜಿ.ಎನ್.ಚಲಪತಿ, ಸರ್ಕಲ್ ಇನ್ಸ್ ಪೆಕ್ಟರ್ ಸಿದ್ದರಾಜು, ವಾಲ್ಮೀಕಿ ಸಂಘದ ತಾಲ್ಲೂಕು ಅಧ್ಯಕ್ಷ ರಾಮಚಂದ್ರಪ್ಪ, ಯುವ ಘಟಕದ ಅಧ್ಯಕ್ಷ ಗಿರೀಶ್ನಾಯಕ್, ಎನ್.ಮುನಿಯಪ್ಪ, ದ್ಯಾವಪ್ಪ ಹಾಜರಿದ್ದರು.
- Advertisement -
- Advertisement -
- Advertisement -







