ನಗರದ ಮುತ್ತೂರು ಬೀದಿಯ ರಾಘವೇಂದ್ರಸ್ವಾಮಿ ಮಠದಲ್ಲಿ ರಾಯರ 344 ನೇ ಆರಾಧನಾ ಮಹೋತ್ಸವವನ್ನು ಶ್ರದ್ಧಾ ಭಕ್ತಿಯಿಂದ ಸೋಮವಾರ ಆಚರಿಸಲಾಯಿತು.
ಈ ಸಂದರ್ಭದಲ್ಲಿ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮೂರು ದಿನಗಳ ಕಾಲ ನಡೆಸುವ ಆರಾಧನಾ ಮಹೋತ್ಸವವು ಭಾನುವಾರ ಪ್ರಾರಂಭವಾಯಿತು. ಸುಪ್ರಭಾತ ಸೇವೆ, ಪಂಚಾಮೃತ ಅಭಿಷೇಕ, ಸಹಸ್ರನಾಮಾರ್ಚನೆ, ಹಸ್ತೋದಕ, ಮಹಾಮಂಗಳಾರತಿ ನಡೆರಾಯರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಸುಪ್ರಭಾತ ಸೇವೆ, ಪಂಚಾಮೃತ ಅಭಿಷೇಕ, ಸಹಸ್ರ ನಾಮಾರ್ಚನೆ, ಉತ್ಸವವನ್ನು ನೆರವೇರಿಸಲಾಯಿತು. ಭಾನುವಾರ ಸಂಜೆ ದೇವರ ನಾಮಗಳ ಗಾಯನ, ಕೀಬೋರ್ಡ್ ವಾದನ, ಹಿಂದೂಸ್ಥಾನಿ ಬಾನ್ಸುರಿ ವಾದನವನ್ನು ಆಯೋಜಿಸಲಾಗಿತ್ತು.
ಸೋಮವಾರ ತೀರ್ಥಪ್ರಸಾದ ವಿನಿಯೋಗಿಸಿದ ನಂತರ ನಗರದ ಪ್ರಮುಖ ರಸ್ತೆಗಳಲ್ಲಿ ರಾಯರ ಮೆರವಣಿಗೆಯನ್ನು ಆಯೋಜಿಸಲಾಗಿತ್ತು. ಉತ್ಸವ ಮೂರ್ತಿಗೆ ಭಕ್ತರು ಪೂಜೆ ಸಲ್ಲಿಸಿದರು. ಮೆರವಣಿಗೆ ಹಾದು ಹೋದ ರಸ್ತೆಗಳನ್ನು ಸಾರಿಸಿ ರಂಗವಲ್ಲಿ ಹಾಕಿ ಉತ್ಸವಕ್ಕೆ ಸ್ವಾಗತ ಕೋರಲಾಗಿತ್ತು.
ದೇವಾಲಯದ ಆವರಣದಲ್ಲಿ ರಾಘವೇಂದ್ರ ಸೇವಾ ಟ್ರಸ್ಟ್ ವತಿಯಿಂದ ಸಾಮೂಹಿಕ ಅನ್ನಸಂತರ್ಪಣೆಯನ್ನು ನಡೆಸಲಾಯಿತು.
‘ಸುಮಾರು 30 ವರ್ಷಗಳಿಂದಲೂ ಪಟ್ಟಣದ ರಾಯರ ಮಠದಲ್ಲಿ ಮೂರು ದಿನಗಳ ಆರಾಧನೆಯನ್ನು ನಡೆಸಿಕೊಂಡು ಬರುತ್ತಿದ್ದೇವೆ. ಪೂರ್ವಾರಾಧನೆ, ಮಧ್ಯಾರಾಧನೆ ಮತ್ತು ಉತ್ತರಾರಾಧನೆ ಎಂದು ಮೂರು ದಿನಗಳ ಕಾಲ ನಡೆಯುವ ಆರಾಧನೆಯಲ್ಲಿ ಹೋಮ ಹವನಗಳು, ರಾಯರ ಕಥೆಯನ್ನು ತಿಳಿಸುಕೊಡುವುದು, ವಿಶೇಷ ಪೂಜೆಗಳು, ಭಜನೆ, ಗೀತಗಾಯನಗಳನ್ನು ಆಯೋಜಿಸಲಾಗುತ್ತದೆ. ರಾಯರು ಭಕ್ತಿಯಿಂದ ಪೂಜಿಸುತ್ತಿದ್ದ ರಾಮ, ಕೃಷ್ಣ, ವೇದವ್ಯಾಸ, ಲಕ್ಷ್ಮೀನರಸಿಂಹ ಮತ್ತು ಹಯಗ್ರೀವ ದೇವರುಗಳನ್ನು ಪೂಜಿಸಲಾಗುತ್ತದೆ. ಸರ್ವರಿಗೂ ಸಲ್ಲುವ ರಾಯರ ಮಹಿಮೆಯನ್ನು ಎಲ್ಲರಿಗೂ ಸಾರುವ ಉದ್ದೇಶದಿಂದ ಸಂಜೆಗೆ ದೇವರನಾಮಗಳು ಹಾಗೂ ಶ್ರೀರಾಘವೇಂದ್ರ ವಿಜಯ ಹರಿಕಥೆಯನ್ನು ಆಯೋಜಿಸಿದ್ದೇವೆ’ ಎಂದು ಬ್ರಾಹ್ಮಣ ಸಂಘದ ಜಿಲ್ಲಾಧ್ಯಕ್ಷ ಎಂ.ವಾಸುದೇವರಾವ್ ತಿಳಿಸಿದರು.
ರಾಘವೇಂದ್ರ ಸೇವಾ ಟ್ರಸ್ಟ್ನ ತಾಲ್ಲೂಕು ಅಧ್ಯಕ್ಷ ಎ.ಎಸ್.ರವಿ, ಎನ್..ಶ್ರೀಕಾಂತ್, ಎಸ್.ವಿ.ನಾಗರಾಜರಾವ್, ವಿ.ಕೃಷ್ಣ, ರಮೇಶ್ಬಾಯಿರಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -