ಆಧುನಿಕ ತಂತ್ರಜ್ಞಾನ ಬಳಕೆ ಮಾಡಿಕೊಂಡು ಉತ್ತಮ ಗುಣಮಟ್ಟದ ದ್ವಿತಳಿ ಗೂಡುಗಳನ್ನು ಬೆಳೆದು ರೈತರು ಆರ್ಥಿಕವಾಗಿ ಸಬಲರಾಗಬೇಕು ಎಂದು ರೇಷ್ಮೆ ಇಲಾಖೆಯ ಉಪನಿರ್ದೇಶಕ ನಾಗಭೂಷಣ್ ಹೇಳಿದರು.
ನಗರದ ರೇಷ್ಮೆ ಇಲಾಖೆಯ ಕಚೇರಿಯಲ್ಲಿ ಸೋಮವಾರ ಸಮೂಹ ಸಂವರ್ಧನಾ ಕಾರ್ಯಕ್ರಮದಡಿಯಲ್ಲಿ ಆಯೋಜನೆ ಮಾಡಲಾಗಿದ್ದ ಪ್ರಗತಿಪರ ಯಶಸ್ವಿ ದ್ವಿತಳಿ ರೈತರಿಂದ ರೈತರಿಗಾಗಿ ನಡೆದ ತರಬೇತಿ ಕಾರ್ಯಾಗಾರವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ತೀವ್ರವಾದ ನೀರಿನ ಸಮಸ್ಯೆಯನ್ನು ಅನುಭವಿಸುತ್ತಿರುವ ರೈತರು ಹನಿನೀರಾವರಿಯ ಪದ್ಧತಿಯಲ್ಲೆ ಉತ್ತಮಗುಣಮಟ್ಟದ ಹಿಪ್ಪುನೇರಳೆಯನ್ನು ಬೆಳೆಯುವ ಮುಖಾಂತರ, ದ್ವಿತಳಿ ಗೂಡನ್ನು ಬೆಳೆದು ಆರ್ಥಿಕವಾಗಿ ಸಬಲರಾಗಬೇಕು, ಇಲಾಖೆಯ ಮೇಲಾಧಿಕಾರಿಗಳಿಂದ ಬರುವಂತಹ ಸಲಹೆಗಳನ್ನು ಪಡೆದುಕೊಂಡು ಉತ್ತಮವಾದ ಬೆಳೆಗಳನ್ನು ಬೆಳೆಯುವಂತೆ ರೈತರಿಗೆ ಸಲಹೆ ನೀಡಿದರು.
ವಿಜ್ಞಾನಿ ಡಾ. ಕೆ.ವಿ.ಪ್ರಸಾದ್ ಮಾತನಾಡಿ, ಅಂತರಾಷ್ಟ್ರೀಯ ಮಟ್ಟದಲ್ಲಿ ರೇಷ್ಮೆಯಲ್ಲಿ ದೇಶದ ಖ್ಯಾತಿಯನ್ನು ಹೆಚ್ಚಿಸಬೇಕಾದರೆ ರೈತರು ದ್ವಿತಳಿ ಗೂಡನ್ನು ಬೆಳೆಯಬೇಕು. ಹಿಪ್ಪುನೇರಳೆ ತೋಟಗಳ ನಿರ್ವಹಣೆಯನ್ನು ವ್ಯವಸ್ಥಿತವಾಗಿ ಮಾಡುವುದರೊಂದಿಗೆ ದ್ವಿತಳಿ ರೇಷ್ಮೆ ಗೂಡಿಗೆ ಪಕ್ವವಾಗಿರುವ ಹಿಪ್ಪುನೇರಳೆ ಸೊಪ್ಪನ್ನು ಕೊಡುವುದರಿಂದ ಗುಣಮಟ್ಟದ ಬೆಳೆ ಹಾಗು ಇಳುವರಿಯನ್ನು ಪಡೆಯಲು ಸಾಧ್ಯವಾಗುತ್ತದೆ. ಪ್ರತಿ ವರ್ಷಕ್ಕೊಮ್ಮೆ ಮಣ್ಣಿನ ಪರೀಕ್ಷೆ ಮಾಡಿಸುವುದು ಖಡ್ಡಾಯವಾಗಿದ್ದು, ರೇಷ್ಮೆ ಹುಳುಸಾಕಾಣಿಕೆ ಮನೆಗಳಿಂದ ತೆಗೆದ ತ್ಯಾಜ್ಯವನ್ನು ಚೆನ್ನಾಗಿ ಕೊಳೆಸಿ ತೋಟಗಳಿಗೆ ನೀಡಬೇಕು. ಹಿಪ್ಪುನೇರಳೆ ಸೊಪ್ಪನ್ನು ಕಟಾವು ಮಾಡುವಂತಹ ಪದ್ಧತಿಗಳನ್ನು ಬದಲಾವಣೆ ಮಾಡಬೇಕು. ಕಾಂಪ್ಲೆಕ್ಸ್ ಹೆಚ್ಚಿನ ಪ್ರಮಾಣದಲ್ಲಿ ಬಳಕೆ ಮಾಡಬಾರದು, ಬದಲಿಗೆ ತೋಟಗಳಿಗೆ ಬೇವಿನಹಿಂಡಿ, ಹೊಂಗೆಹಿಂಡಿಯನ್ನು ಕೊಡುವುದು ಸೂಕ್ತ,
ರಾಸಾಯನಿಕಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸಿಂಪಡಣೆ ಮಾಡಬಾರದು ಎಂದು ವಿವರಿಸಿದರು.
ದ್ವಿತಳಿ ರೇಷ್ಮೆ ಗೂಡಿಗೆ ವ್ಯವಸ್ಥಿತ ಮಾರುಕಟ್ಟೆ ಸೌಲಭ್ಯವಿಲ್ಲದಿರುವುದರಿಂದ ರೈತರು ಬೆಳೆದ ದ್ವಿತಳಿ ರೇಷ್ಮೆ ಗೂಡನ್ನು ದೂರದ ರಾಮನಗರಕ್ಕೆ ಕೊಂಡೊಯ್ಯಬೇಕು. ಹೀಗೆ ಕೊಂಡೊಯ್ಯಲು ಸಾಗಾಣಿಕೆ ವೆಚ್ಚ ದುಬಾರಿಯಾಗುತ್ತದೆ. ಇದಕ್ಕೆ ರೈತರು ಏನು ಮಾಡಬೇಕು? ಎಂದು ರೈತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ತಾಲೂಕಿನಾಧ್ಯಂತ ಹೆಚ್ಚು ಹೆಚ್ಚು ದ್ವಿತಳಿ ರೇಷ್ಮೆ ಗೂಡುಗಳನ್ನು ಉತ್ಪಾದನೆ ಮಾಡಿದಾಗ ಮಾರುಕಟ್ಟೆಯ ಸೌಲಭ್ಯವನ್ನು ಕಲ್ಪಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಬಹುದು. ಆದರೆ ಬಹುತೇಕ ರೈತರು ಸರ್ಕಾರದಿಂದ ಸಿಗುವಂತಹ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಳ್ಳುತ್ತಾರಾದರೂ ದ್ವಿತಳಿ ರೇಷ್ಮೆಗೂಡನ್ನು ಬೆಳೆಯಲು ಹಿಂದೇಟು ಹಾಕುವುದು ಸರಿಯಲ್ಲವೆಂದರು.
ವಿಜ್ಞಾನಿಗಳಾದ ಡಾ.ವೆಂಕಟೇಶ್, ಮೌರಿಸಾಬ್, ಫಣಿರಾಜ್, ರೈತರಾದ ಮಳ್ಳೂರು ಶಿವಣ್ಣ, ಹಿತ್ತಲಹಳ್ಳಿ ಸುರೇಶ್, ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಸಿ.ಚಂದ್ರಪ್ಪ, ಕೃಷಿ ವಿಸ್ತರಣಾಧಿಕಾರಿ ನಾರಾಯಣಸ್ವಾಮಿ, ಕೃಷ್ಣಪ್ಪ, ಮುನಿರಾಜು, ನಿರಂಜನ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -