ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಹಸಿರನ್ನು ಉಳಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಗಂಭೀರವಾದ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಎಂದು ಬಚ್ಚಹಳ್ಳಿ ಗ್ರಾಮದ ವಿಜ್ಞಾನ ವಿದ್ಯಾರ್ಥಿ ಗೋಪಿನಾಥ್ ಶಾಲಾ ಮಕ್ಕಳಲ್ಲಿ ಅರಿವು ಮೂಡಿಸಿದರು.
ತಾಲ್ಲೂಕಿನ ಬಚ್ಚಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಬುಧವಾರ ಆಯೋಜನೆ ಮಾಡಲಾಗಿದ್ದ ವಿಜ್ಞಾನ ವಸ್ತುಪ್ರದರ್ಶನ ಹಾಗೂ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಆಧುನಿಕತೆ ಬೆಳೆದಂತೆಲ್ಲಾ ಜನರು ತಮ್ಮ ಸ್ವಾರ್ಥಕ್ಕಾಗಿ ಸುತ್ತಮುತ್ತಲಿನ ಪರಿಸರವನ್ನು ಹಾಳು ಮಾಡುತ್ತಿರುವುದರಿಂದ ಸರಿಯಾದ ಸಮಯಕ್ಕೆ ಮಳೆ ಬೆಳೆಗಳಾಗದೆ ಕಂಗಾಲಾಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ೨೦ ವರ್ಷಗಳ ಹಿಂದೆ ಇದ್ದಂತಹ ಉತ್ತಮವಾದ ಪರಿಸರವನ್ನು ನಾವು ಕಳೆದುಕೊಂಡಿದ್ದೇವೆ. ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣದ ಹೆಸರಿನಲ್ಲಿ ಮರಗಿಡಗಳನ್ನು ಕಡಿಯಲಾಗುತ್ತಿದೆ. ಮರಳು ಗಣಿಗಾರಿಕೆಯಿಂದ ಅಂತರ್ಜಲದ ಮಟ್ಟ ತೀವ್ರವಾಗಿ ಕುಸಿಯುತ್ತಿವೆ. ಜಲಚರ ಪ್ರಾಣಿಗಳನ್ನು ಕೇವಲ ಚಿತ್ರಗಳಲ್ಲಿ ನೋಡಿಕೊಳ್ಳಬೇಕಾದಂತಹ ದುಸ್ಥಿತಿ ಒದಗಿ ಬಂದಿದೆ.
ಕೆರೆ ಕುಂಟೆಗಳು ಬತ್ತಿಹೋಗಿದ್ದು, ಜನರು ಕುಡಿಯುವ ನೀರಿಗಾಗಿ ಅನಿವಾರ್ಯವಾಗಿ ಕೊಳವೆಬಾವಿಗಳನ್ನು ಅವಲಂಬಿಸಬೇಕಾದಂತಹ ಪರಿಸ್ಥಿತಿ ಉಂಟಾಗಿರುವುದು ಮುಂದಿನ ಪೀಳಿಗೆಗೆ ಕಾದಿರುವ ದುರ್ಗತಿಯನ್ನು ಸೂಚಿಸುತ್ತದೆ. ಆದ್ದರಿಂದ ಶಾಲಾ ಮಕ್ಕಳು, ತಲಾ ಒಂದೊಂದು ಗಿಡವನ್ನು ನೆಟ್ಟು, ಪರಿಸರವನ್ನು ಸಂರಕ್ಷಣೆ ಮಾಡುವ ಕಡೆಗೆ ಹೆಚ್ಚು ಕಾಳಜಿವಹಿಸಬೇಕು. ನಾಗರಿಕರೂ ಕೂಡಾ ಮರಗಿಡಗಳನ್ನು ಬೆಳೆಸುವ ಮೂಲಕ ತಮ್ಮ ಮಕ್ಕಳ ಮುಂದಿನ ಭವಿಷ್ಯವನ್ನು ಉತ್ತಮಗೊಳಿಸಬೇಕು ಎಂದು ಪ್ರಾತ್ಯಕ್ಷಿಕೆಯ ಮುಖಾಂತರವಾಗಿ ವಿವರಿಸಿದರು.
ಗ್ರಾಮದ ಮುಖಂಡರಾದ ನಾರಾಯಣಸ್ವಾಮಿ, ತಿಮ್ಮಣ್ಣ, ಮುನಿಶಾಮಿ, ಗೋವಿಂದು, ವೆಂಕಟೇಶ್, ಹಾಗೂ ಶಾಲಾ ಸಿಬ್ಬಂದಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -