ಲಾಕ್ಡೌನ್ ಹಿನ್ನಲೆಯಲ್ಲಿ ಸಾಕಷ್ಟು ಸಮಸ್ಯೆ ಎದುರಿಸುತ್ತಿರುವ ರೈತರು ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ತೆಗೆದುಕೊಂಡು ಹೋಗಿ ಮಾರಾಟ ಮಾಡಲಿಕ್ಕಾಗದೇ ಸಂಕಷ್ಟ ಅನುಭವಿಸುತ್ತಿದ್ದಾರೆ. ಕೂಡಲೇ ಸರ್ಕಾರ ರೈತರ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿ ಕೆಲವು ರೈತ ಮುಖಂಡರು ತಹಶೀಲ್ದಾರ್ ಕೆ.ಅರುಂಧತಿ ಮೂಲಕ ಸರ್ಕಾರಕ್ಕೆ ಸೋಮವಾರ ಮನವಿ ಪತ್ರ ಸಲ್ಲಿಸಿದರು.
ರೈತ ಮುಖಂಡ ಬಿ.ಮುನಿಕೆಂಪಣ್ಣ ಮಾತನಾಡಿ, ರಾಜ್ಯದ ರೇಷ್ಮೆಬೆಳೆಗಾರರಿಗೆ ಸರ್ಕಾರ ಸೂಕ್ತವಾದ ಪರಿಹಾರ ನೀಡಬೇಕು. ಸರ್ಕಾರದಿಂದ ಉಚಿತವಾಗಿ ನೀಡುತ್ತಿರುವ ಹಾಲು ನಗರ ಪ್ರದೇಶಗಳಿಗೆ ಮಾತ್ರ ಸಮೀತವಾಗಿದ್ದು ಗ್ರಾಮಾಂತರ ಪ್ರದೇಶಗಳಿಗೂ ವಿಸ್ತರಿಸಬೇಕು, ದ್ರಾಕ್ಷಿ, ದಾಳಿಂಬೆ, ಸೀಬೆಹಣ್ಣು ಮುಂತಾದ ಬೆಳೆಗಳು ಕಟಾವಾಗದೆ ಹಣ್ಣಾಗಿ ಉದುರುತ್ತಿವೆ. ಆದ್ದರಿಂದ ತಕ್ಷಣ ಮಾರುಕಟ್ಟೆಯ ವ್ಯವಸ್ಥೆ ಮಾಡಬೇಕು. ಜಿಲ್ಲೆಯಲ್ಲಿ ಕೋಲ್ಡ್ ಸ್ಟೊರೇಜ್ ಸ್ಥಾಪನೆ ಮಾಡಬೇಕು ಎಂದು ಒತ್ತಾಯಿಸಿದರು.
ಹೈನುಗಾರಿಕೆಯಲ್ಲಿ ತೊಡಗಿಸಿ ಕೊಂಡಿರುವ ರೈತರು ಪಶುಆಹಾರಕ್ಕಾಗಿ ದುಬಾರಿ ಬೆಲೆ ನೀಡುತ್ತಿದ್ದು ತಕ್ಷಣ ಎಂ.ಆರ್.ಪಿ.ಬೆಲೆಗೆ ಸಿಗುವಂತೆ ಕ್ರಮ ಕೈಗೊಳ್ಳಬೇಕು. 300 ರೂಪಾಯಿಗೆ ಮಾರಾಟವಾಗುತ್ತಿರುವ ರೇಷ್ಮೆಗೂಡಿನ ಬೆಲೆ ಏರಿಕೆ ಮಾಡಲು ಕ್ರಮ ಕೈಗೊಳ್ಳಬೇಕು, ಸರ್ಕಾರವೇ ಖರೀದಿ ಮಾಡಬೇಕು, ತಾಲ್ಲೂಕಿನಲ್ಲಿ ಮಾದಕ ದ್ರವ್ಯಗಳ ಮಾರಾಟ ರಾಜಾರೋಷವಾಗಿ ನಡೆಯುತ್ತಿದೆ. ಅದರಿಂದ ಬಹಳಷ್ಟು ಮಂದಿ ಯುವಕರು ಚಟಕ್ಕೆ ಬಲಿಯಾಗುತ್ತಿದ್ದಾರೆ. ಕೂಡಲೇ ಅದಕ್ಕೆ ಕಡಿವಾಣ ಹಾಕಬೇಕು, ಕೃಷಿ ಚಟುವಟಿಕೆಗಳಿಗೆ ಹೊಸಸಾಲ ನೀಡುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು, ರಸಗೊಬ್ಬರಗಳು ಗ್ರಾಮ ಪಂಚಾಯಿತಿಯಲ್ಲಿ ಸಿಗುವಂತೆ ನೋಡಿಕೊಳ್ಳಬೇಕು, ಪಡಿತರ ಚೀಟಿಗಳು ಇಲ್ಲದವರಿಗೂ ಆಹಾರ ಸಾಮಾಗ್ರಿಗಳು ವಿತರಣೆಯಾಗಬೇಕು, ಟೋಲ್ ನಲ್ಲಿ ರೈತರಿಂದ ವಸೂಲಿ ಮಾಡುತ್ತಿರುವ ಟೋಲ್ ಶುಲ್ಕದಿಂದ ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಿ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು.
ಮನವಿ ಪತ್ರ ಸ್ವೀಕರಿಸಿದ ತಹಶೀಲ್ದಾರ್ ಕೆ.ಅರುಂಧತಿ ಮಾತನಾಡಿ, ರೈತ ಮುಖಂಡರು ಕೊಟ್ಟಿರುವ ಮನವಿಯಲ್ಲಿ ನಮ್ಮ ಇಲಾಖೆಯ ಹಂತದಲ್ಲಿರುವ ಸಮಸ್ಯೆಗಳನ್ನು ನಾವು ಈಡೇರಿಸುತ್ತೇವೆ. ಉಳಿದ ಬೇಡಿಕೆಗಳನ್ನು ಮೇಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ತಲುಪಿಸುವ ಕೆಲಸ ಮಾಡುತ್ತೇವೆ ಎಂದರು.
ರೈತ ಮುಖಂಡರಾದ ಪ್ರತೀಶ್, ಅಂಬರೀಶ್, ಡಿ.ವಿ.ನಾರಾಯಣಸ್ವಾಮಿ ಹಾಜರಿದ್ದರು.
- Advertisement -
- Advertisement -
- Advertisement -







