ಇಡೀ ವಿಶ್ವವೇ ಒಂದು ಕುಟುಂಬದಂತೆ ಒಮ್ಮತದಿಂದ ದೇಹ, ಮನಸ್ಸು, ಬುದ್ಧಿಯನ್ನು ಶುದ್ಧಗೊಳಿಸಲು, ಶಾಂತಿಯುತ ಮತ್ತು ಆರೋಗ್ಯಕರ ಜೀವನಕ್ಕೆ ಯೋಗದ ದಿನಾಚರಣೆ ನಡೆಸುತ್ತಿರುವುದಾಗಿ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ತಿಳಿಸಿದರು.
ನಗರದ ರೈಲ್ವೆ ನಿಲ್ದಾಣದ ಬಳಿ ಪತಂಜಲಿ ಯೋಗ ಶಿಕ್ಷಣ ಸಮಿತಿ ಶಿಡ್ಲಘಟ್ಟ ಶಾಖೆಯ ವತಿಯಿಂದ ‘ವಿಶ್ವ ಯೋಗ ದಿನಾಚರಣೆ’ ಅಂಗವಾಗಿ ಆಯೋಜಿಸಿದ್ದ ಶೋಭಾಯಾತ್ರೆ ಹಾಗೂ ಯೋಗಾಸನ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ವಿಶ್ವದ ನೂರಾರು ರಾಷ್ಟ್ರಗಳಲ್ಲಿ ಇಂದು ‘ವಿಶ್ವ ಯೋಗ ದಿನಾಚರಣೆ’ ನಡೆಸಲಾಗುತ್ತಿರುವುದು ಯೋಗದ ಹಿರಿಮೆಯನ್ನು ತಿಳಿಸುತ್ತದೆ. ಭಾರತೀಯ ಯೋಗ ಪದ್ಧತಿಗೆ ವಿಶ್ವಮಾನ್ಯತೆ ದೊರಕಿರುವುದು ಹೆಮ್ಮೆಯ ಸಂಗತಿ. ಒತ್ತಡ ಬದುಕಿನಿಂದ ಮತ್ತು ಆಧುನಿಕ ಆಹಾರ ಪದ್ಧತಿಯಿಂದಾಗಿ ನಾನಾ ಖಾಯಿಲೆಗಳಿಂದ ಜನರು ಬಳಲುತ್ತಿದ್ದು, ಇದಕ್ಕೆ ಯೋಗ ಪರಿಹಾರವಾಗಲಿದೆ ಎಂದು ಹೇಳಿದರು.
ನಗರದ ರೈಲ್ವೆ ನಿಲ್ದಾಣ, ಮಾರಮ್ಮ ವೃತ್ತ, ಉಲ್ಲೂರುಪೇಟೆ, ಕೋಟೆ ವೃತ್ತ, ಬಸ್ ನಿಲ್ದಾಣ, ಹೂ ವೃತ್ತಗಳ ಬಳಿ ಶಾಲಾ ವಿದ್ಯಾರ್ಥಿಗಳು ಮತ್ತು ಪತಂಜಲಿ ಯೋಗ ಶಿಕ್ಷಣ ಸಮಿತಿ ಸದಸ್ಯರು ನಿಂತು ಮಾಡುವ ಆಸನಗಳಾದ ತಾಡಾಸನ, ಪಾದ ಹಸ್ತಾಸನ, ಚಕ್ರಾಸನ, ವೀರಭದ್ರಾಸನ, ವೃಕ್ಷಾಸನ, ತ್ರಿಕೋಣಾಸನ ಮುಂತಾದವುಗಳನ್ನು ಪ್ರದರ್ಶಿಸಿದರು. ಪ್ರತಿಯೊಂದು ಆಸನಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸುವಾಗ ಅವುಗಳಿಂದಾಗುವ ಉಪಯೋಗಗಳ ಬಗ್ಗೆ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ವಿವರಿಸಿದರು.
‘ಯೋಗದಿಂದ ರೋಗ ಮುಕ್ತ ಜೀವನ’, ‘ನಮ್ಮ ನಡಿಗೆ ಯೋಗದ ಕಡೆಗೆ’ ಎಂದು ಘೋಷಣೆಗಳನ್ನು ಕೂಗುತ್ತಾ ಶೋಭಾಯಾತ್ರೆಯನ್ನು ವಿವಿಧ ಶಾಲೆಯ ವಿದ್ಯಾರ್ಥಿಗಳು ಮತ್ತು ಯೋಗ ಬಂಧುಗಳು ನಡೆಸಿದರು.
- Advertisement -
- Advertisement -
- Advertisement -
- Advertisement -