ಅಂಗವಿಕಲರನ್ನು ಆರ್ಥಿಕ ಮತ್ತು ಸಾಮಾಜಿಕವಾಗಿ ಸಧೃಡರಾಗಲು ಸಹಕರಿಸಬೇಕು. ಅವರು ಸ್ವಾವಲಂಬಿಗಳಾದಾಗ ಕುಟುಂಬಕ್ಕೆ ಹೊರೆಯಾಗುವುದಿಲ್ಲ ಎಂದು ಶಾಸಕ ಎಂ.ರಾಜಣ್ಣ ಅಭಿಪ್ರಾಯಪಟ್ಟರು.
ಪಟ್ಟಣದ ತಾಲ್ಲೂಕು ಕಚೇರಿಯ ಮುಂದೆ ಸೋಮವಾರ ಸ್ವಾಮಿ ವಿವೇಕಾನಂದ ಅಂಗವಿಕಲರ ಕ್ಷೇಮಾಭಿವೃದ್ಧಿ ಸಂಸ್ಥೆ ಮತ್ತು ತಾಲ್ಲೂಕು ಆಡಳಿತ ಸಹಯೋಗದಲ್ಲಿ ನಡೆದ ‘ವಿಶ್ವ ಅಂಗವಿಕರ ದಿನಾಚರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸರ್ಕಾರಿ ಕಚೇರಿಗಳಲ್ಲಿ ಅಂಗವಿಕಲರಿಗೆ ಮೊದಲ ಆದ್ಯತೆ ನೀಡಿ ತ್ವರಿತವಾಗಿ ಅವರ ಕೆಲಸಗಳನ್ನು ಮಾಡಿಕೊಡಬೇಕು. ಸಮಾಜದಲ್ಲಿ ಅಂಗವಿಕಲರನ್ನು ತಾತ್ಸಾರ ಮನೋಭಾವದಿಂದ ನೋಡದೆ ಅವರಲ್ಲಿನ ಪ್ರತಿಭೆಗೆ ಪ್ರೋತ್ಸಾಹಿಸಿ ಸ್ವಾವಲಂಬಿಗಳಾಗಲು ಸಹಾಯ ಮಾಡಬೇಕು. ತಾಲ್ಲೂಕಿನಲ್ಲಿ 15,193 ಅಂಗವಿಕಲರು ಪಿಂಚಣಿ ಪಡೆಯುತ್ತಿದ್ದರೆ. ಅಂಗವಿಕಲರಿಗೆ ಪೆಟ್ರೋಲ್ ಚಾಲಿತ ವಾಹನಗಳನ್ನು ಶಾಸಕರ ಅನುದಾನದಲ್ಲಿ ನೀಡಲು ಅಂಗವಿಕಲರ ಕ್ಷೇಮಾಭಿವೃದ್ಧಿ ಸಂಸ್ಥೆಯವರು ಪಟ್ಟಿ ಸಿದ್ಧಪಡಿಸಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಸಕ ಎಂ.ರಾಜಣ್ಣ ಅವರಿಗೆ ಅಂಗವಿಕಲರ ಕ್ಷೇಮಾಭಿವೃದ್ಧಿ ಸಂಸ್ಥೆಯವರು ತಾಲ್ಲೂಕಿನಲ್ಲಿ ನಿವೇಶನವನ್ನು ಒದಗಿಸಿ ಭವನವನ್ನು ನಿರ್ಮಿಸಿಕೊಡುವಂತೆ ಮನವಿ ಮಾಡಿದರು.
ಜಿಲ್ಲಾ ಪಂಚಾಯತಿ ಸದಸ್ಯ ಎಸ್.ಎಂ.ನಾರಾಯಣಸ್ವಾಮಿ ಮಾತನಾಡಿ, ಅಂಗವಿಕಲತೆ ಯಾವುದೇ ಶಾಪವಲ್ಲ. ದೈಹಿಕ ನ್ಯೂನತೆಯಷ್ಟೆ. ತಾವು ಅಸಹಾಯಕರು ಎಂದು ಭಾವಿಸದೆ ಆರ್ಥಿಕವಾಗಿ ಸಬಲರಾಗಬೇಕು. ಸರ್ಕಾರದ ಅನುದಾನಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅಂಗವಿಕಲರಿಗೆ ಮಾಸಾಶನ ಮಂಜೂರಾತಿ ಪತ್ರಗಳನ್ನು ವಿತರಿಸಲಾಯಿತು. ಕೋಚಿಮುಲ್ ನಿರ್ದೇಶಕ ಮುನಿಯಪ್ಪ ತಮ್ಮ ಅನುದಾನದಲ್ಲಿ 50 ಸಾವಿರ ರೂಗಳನ್ನು ಸ್ವಾಮಿ ವಿವೇಕಾನಂದ ಅಂಗವಿಕಲರ ಕ್ಷೇಮಾಭಿವೃದ್ಧಿ ಸಂಸ್ಥೆಗೆ ನೀಡುವುದಾಗಿ ಘೋಷಿಸಿದರು. ಶಾಲಾ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಸ್ವಾಮಿ ವಿವೇಕಾನಂದ ಅಂಗವಿಕಲರ ಕ್ಷೇಮಾಭಿವೃದ್ಧಿ ಸಂಸ್ಥೆ ವತಿಯಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅಂಗವಿಕಲರ ಮೆರವಣಿಗೆಯನ್ನು ಆಯೋಜಿಸಿದ್ದರು.
ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಎನ್.ಎಂ.ಶಾಂತರಸ, ತಾಲ್ಲೂಕು ಪಂಚಾಯತಿ ಅಧ್ಯಕ್ಷೆ ಆಂಜಿನಮ್ಮ, ಕಾರ್ಯನಿರ್ವಾಹಣಾಧಿಕಾರಿ ಗಣಪತಿ ಸಾಕರೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲಕ್ಷ್ಮೀದೇವಮ್ಮ, ರೈತ ಸೇನೆ ಜಿಲ್ಲಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, ಮಳ್ಳೂರು ಹರೀಶ್, ಮಂಜುನಾಥ್, ಮುನಿರಾಜು, ಚಲಪತಿ, ನಟೇಶ್, ಸ್ವಾಮಿ ವಿವೇಕಾನಂದ ಅಂಗವಿಕಲರ ಕ್ಷೇಮಾಭಿವೃದ್ಧಿ ಸಂಸ್ಥೆ ಅಧ್ಯಕ್ಷೆ ವಿನೋದಮ್ಮ, ಉಪಾಧ್ಯಕ್ಷ ಮಾರಪ್ಪ, ಲಕ್ಷ್ಮಿನಾರಾಯಣ, ಸಂತೋಷ್, ರಾಮಚಂದ್ರ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -