Home News ವಿಶ್ವ ಪರಿಸರ ದಿನಾಚರಣೆ ಹಾಗೂ ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮ

ವಿಶ್ವ ಪರಿಸರ ದಿನಾಚರಣೆ ಹಾಗೂ ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮ

0

ತಾಲ್ಲೂಕಿನ ಅಪ್ಪೇಗೌಡನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಹಾಗೂ ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಎ.ಎಂ.ತ್ಯಾಗರಾಜ್ ಮಾತನಾಡಿದರು.
ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಶಾಲೆಯ ಆವರಣದಲ್ಲಿ ನೆಟ್ಟ ಗಿಡವನ್ನು ಪೋಷಿಸುವುದು ಬಹಳ ಮುಖ್ಯ ಎಂದು ಅವರು ತಿಳಿಸಿದರು.
ಗಿಡ ನೆಟ್ಟು ಪೋಷಿಸುವ ಕೆಲಸ ಕೇವಲ ಅರಣ್ಯ ಇಲಾಖೆಯದ್ದಲ್ಲ, ಸಮಾಜದ ಪ್ರತಿ ಪ್ರಜೆಯ ಆದ್ಯ ಕರ್ತವ್ಯವಾಗಬೇಕು. ಶಾಲಾ ಮಕ್ಕಳು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ಗಿಡಗಳನ್ನು ಪೋಷಿಸಲು ತಮ್ಮ ಸಮಯ ಮೀಸಲಿಡಬೇಕು. ಅಲ್ಲದೇ ಪರಿಸರ ಉಳಿವಿನ ಬಗ್ಗೆ ಇತರರಿಗೂ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಶಿಡ್ಲಘಟ್ಟ ಬಿ ವಿಭಾಗದ ಮೇಲ್ವಿಚಾರಕಿ ಜ್ಯೋತಿ ಮಾತನಾಡಿ, ಇಂದು ನಾವು ಸಸಿಗಳನ್ನು ನೆಟ್ಟು ಪೋಷಣೆ ಮಾಡಿದರೆ ಮುಂದಿನ ದಿನಗಳಲ್ಲಿ ಅವು ನಮಗೆ ಪ್ರಾಣವಾಯು ನೀಡುವ ಜತೆಗೆ ನಮ್ಮ ಆರೋಗ್ಯ ಕಾಪಾಡುತ್ತವೆ. ಪರಿಸರದ ಬಗ್ಗೆ ಕಾಳಜಿ ವಹಿಸಬೇಕಾದ ನಾವು ಎಲ್ಲಾ ಜವಾಬ್ದಾರಿಯನ್ನು ಸರಕಾರಕ್ಕೆ ವಹಿಸಿ ಸುಮ್ಮನಾದರೆ ಇದರಿಂದ ಮುಂದಿನ ದಿನಗಳಲ್ಲಿ ನಷ್ಟ ಅನುಭವಿಸಬೇಕಾಗುತ್ತದೆ. ಶುದ್ಧ ಗಾಳಿಯನ್ನು ಹಣ ಕೊಟ್ಟು ಪಡೆಯುವ ಸ್ಥಿತಿ ಬರುತ್ತದೆ ಎಂದು ಎಚ್ಚರಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದ ಶಾಲಾ ಮಕ್ಕಳಿಗೆ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ಶಾಲಾ ಆವರಣದಲ್ಲಿ ವಿವಿಧ ಸಸಿಗಳನ್ನು ನೆಡಲಾಯಿತು.
ಎಸ್.ಡಿ.ಎಂ.ಸಿ ಅಧ್ಯಕ್ಷೆ ಪುಷ್ಪ ರಾಮಚಂದ್ರ, ಸದಸ್ಯ ಹನುಮಂತರೆಡ್ಡಿ, ಮುಖ್ಯ ಶಿಕ್ಷಕಿ ಎಂ.ವಿ.ವೆಂಕಟರತ್ನಮ್ಮ, ಶಿಕ್ಷಕರಾದ ಎಸ್.ಚಾಂದ್ ಪಾಷ, ಎಂ.ಭಾರತಿ, ಅಶೋಕ್, ಸಿಬ್ಬಂದಿ ವೆಂಕಟಮ್ಮ, ಲೀಲಮ್ಮ ಹಾಜರಿದ್ದರು.

error: Content is protected !!