ಪುಷ್ಯಮಾಸ ಶುಕ್ಲಪಕ್ಷದ ಏಕಾದಶಿಯು ವೈಕುಂಠ ಏಕಾದಶಿ ಎಂಬ ವಿಶೇಷ ದಿನವಾದ್ದರಿಂದ ಮಂಗಳವಾರ ತಾಲ್ಲೂಕಿನ ಪ್ರಮುಖ ವೆಂಕಟೇಶ್ವರ, ಶ್ರೀನಿವಾಸ, ವಿಷ್ಣು ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳನ್ನು ಏರ್ಪಡಿಸಿದ್ದರು. ಎಲ್ಲಾ ದೇವಸ್ಥಾನಗಳಲ್ಲಿ ಜನಸಂದಣಿ ಹೆಚ್ಚಿದ್ದು, ಕೆಲವು ದೇವಸ್ಥಾನಗಳಲ್ಲಿ ನಿರ್ಮಿಸಿದ್ದ ವೈಕುಂಠ ದ್ವಾರದ ಒಳಗೆ ಹೋಗಿ ಬಂದರೆ ಮೋಕ್ಷ ಸಿಗುವುದೆಂಬ ನಂಬಿಕೆಯಿಂದ ಭಕ್ತರು ದೇವಾಲಯಗಳಿಗೆ ಭೇಟಿ ನೀಡಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ನಗರದ ಕೆ.ಎಚ್.ಬಿ ಕಾಲೋನಿಯಲ್ಲಿ ಶ್ರೀ ಗಾಯಿತ್ರಿದೇವಿ ಸೇವಾ ಮತ್ತು ಅಭಿವೃದ್ಧಿ ಟ್ರಸ್ಟ್ ವತಿಯಿಂದ ಗಾಯಿತ್ರಿ ದೇವಾಲಯದಲ್ಲಿ ವೈಕುಂಠ ಏಕಾದಶಿಯ ಅಂಗವಾಗಿ ಶ್ರೀ ಕಲ್ಯಾಣ ವೆಂಕಟೇಶ್ವರ ಸ್ವಾಮಿಯವರಿಗೆ ವಿಶೇಷ ಪೂಜೆ ನಡೆಸಲಾಯಿತು.
ವೈಕುಂಠ ಏಕಾದಶಿಯ ಪ್ರಯುಕ್ತ ಸ್ವಾಮಿಯವರಿಗೆ ಸುಪ್ರಭಾತ ಸೇವೆ, ಅಭಿಷೇಕ, ವಜ್ರಾಕೋಷ ಅಲಂಕಾರ ಹಾಗೂ ವೈಕುಂಠ ದ್ವಾರ ದರ್ಶನ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ವೈಕುಂಠ ಏಕಾದಶಿಯ ದಿನ ತಮ್ಮ ಪೂರ್ವಜರಿಗೆ, ಮಾತಾ ಪಿತೃಗಳಿಗೆ ಸದ್ಗತಿ ಮತ್ತು ವೈಕುಂಠ ಪ್ರಾಪ್ತಿಯಾಗಲಿ ಎಂದು ಹೇಳಿ ವೈಕುಂಠ ದ್ವಾರ ಪ್ರವೇಶವನ್ನು ಮಾಡಿದರೆ ಸದ್ಗತಿ ಸಿಗುತ್ತದೆ ಎಂಬ ನಂಬಿಕೆ ಭಕ್ತರದ್ದು. ಈ ಸಂದರ್ಭದಲ್ಲಿ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ದೇವಾಲಯದಕ್ಕೆ ಬರುವ ಭಕ್ತಾಧಿಗಳಿಗೆ ತೀರ್ಥ ಪ್ರಸಾದಗಳನ್ನು ವಿನಿಯೋಗ ಮಾಡಲಾಯಿತು.

ತಾಲ್ಲೂಕಿನ ಮೇಲೂರು ಗ್ರಾಮದ ಚನ್ನಕೇಶವಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ಪೂಜೆಯನ್ನು ಏರ್ಪಡಿಸಲಾಗಿತ್ತು. ಸುಪ್ರಭಾತ, ವಿಷ್ಣು ಸಹಸ್ರನಾಮ, ವಿಶ್ವಕ್ಸೇನ ಪೂಜೆ, ಪುಣ್ಯಾಹವಾಚನ, ಪಂಚಾಮೃತಾಭಿಷೇಕ, ರಾಷ್ಟ್ರಾಶೀರ್ವಾದ, ಮಹಾಮಂಗಳಾರತಿ ಮತ್ತು ತೀರ್ಥಪ್ರಸಾದ ವಿನಿಯೋಗವನ್ನು ನಡೆಸಲಾಯಿತು.
ತಾಲ್ಲೂಕಿನ ಚೌಡಸಂದ್ರದ ಸೋಮೇಶ್ವರಸ್ವಾಮಿ ದೇವಸ್ಥಾನ, ಚಿಕ್ಕದಾಸರಹಳ್ಳಿ ಬಳಿಯ ಬ್ಯಾಟರಾಯಸ್ವಾಮಿ ದೇವಾಲಯ, ಜಂಗಮಕೋಟೆ ಬಳಿಯ ಮುತ್ಯಾಲಮ್ಮ ದೇವಸ್ಥಾನ, ಒಡಯನಕೆರೆಯ ಅನಂತಪದ್ಮನಾಭಸ್ವಾಮಿ ದೇವಾಲಯ, ದೊಡ್ಡದಾಸೇನಹಳ್ಳಿ ಗ್ರಾಮದ ಲಕ್ಷ್ಮಿವೆಂಕಟೇಶ್ವರಸ್ವಾಮಿ ದೇವಾಲಯ, ವಾಸವಿ ರಸ್ತೆಯ ವೆಂಕಟರಮಣಸ್ವಾಮಿ ದೇವಾಲಯಗಳಲ್ಲಿ ಬೆಳಿಗ್ಗೆಯಿಂದಲೇ ವಿಶೇಷ ಪೂಜೆಗಳನ್ನು ನಡೆಸಲಾಗಿತ್ತು.