ತಾಲ್ಲೂಕಿನ ಚೌಡಸಂದ್ರ ಗ್ರಾಮದ ಆಂಜನೇಯಸ್ವಾಮಿ ದೇವಾಲಯದಲ್ಲಿ ಶುಕ್ರವಾರ ಹನುಮಜಯಂತಿಯನ್ನು ಶ್ರದ್ಧಾಭಕ್ತಿಯಿಂದ ವಿಶೇಷವಾಗಿ ಆಚರಿಸಲಾಯಿತು.
ಸೀತಾರಾಮ ಲಕ್ಷ್ಮಣ ಸಮೇತ ಆಂಜನೇಯಸ್ವಾಮಿಯ ಉತ್ಸವ ಮೂರ್ತಿಯ ಕಲ್ಯಾಣೋತ್ಸವ ಹಾಗೂ 29 ನೇ ವಾರ್ಷಿಕೋತ್ಸವದ ಪ್ರಯುಕ್ತ ದೇವಾಲಯದಲ್ಲಿ ವಿಶೇಷ ಅಲಂಕಾರ, ಪೂಜಾ ಮಹೋತ್ಸವದೊಂದಿಗೆ ಭಕ್ತಿಗೀತೆ, ಭಾವಗೀತೆ, ಭೋಜನ ವ್ಯವಸ್ಥೆಯನ್ನು ಮಾಡಲಾಗಿತ್ತು.
ಗುರುವಾರ ರಾತ್ರಿ ಗ್ರಾಮದಲ್ಲಿ ಉತ್ಸವ ಮೂರ್ತಿಯ ಮೆರವಣಿಗೆಯನ್ನು ಮಾಡಲಾಯಿತು. ಹೂವಿನ ಪಲ್ಲಕ್ಕಿಯ ಉತ್ಸವಕ್ಕೆ ನೂರಾರು ಮಂದಿ ಸಾಕ್ಷಿಯಾದರು. ದೇವಾಲಯವನ್ನು ಹಾಗೂ ಗ್ರಾಮದ ಪ್ರಮುಖ ರಸ್ತೆಗಳನ್ನೆಲ್ಲಾ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.
ದೇವರನ್ನು ಮತ್ತು ದೇವಾಲಯವನ್ನು ವಿವಿಧ ಹೂಗಳಿಂದ ಅಲಂಕರಿಸಲಾಗಿತ್ತು. ಹನುಮಜಯಂತಿಯ ಪ್ರಯುಕ್ತ ಗ್ರಾಮದಲ್ಲಿ ಜಾತ್ರೆಯ ವಾತಾವರಣ ಮೂಡಿದ್ದು, ಸಾವಿರಾರು ಭಕ್ತರು ವಿವಿಧ ತಾಲ್ಲೂಕು ಜಿಲ್ಲೆಗಳಿಂದ ಆಗಮಿಸಿ ದೇವರ ಪೂಜೆಯಲ್ಲಿ ಪಾಲ್ಗೊಂಡರು. ತಿಂಡಿ ತಿನಿಸುಗಳು, ಆಟಿಕೆಗಳು, ಮುಂತಾದ ವಿವಿಧ ರೀತಿಯ ಅಂಗಡಿಗಳು ತರೆಯಲಾಗಿತ್ತು. ಆಗಮಿಸಿದ ಭಕ್ತರಿಗೆಲ್ಲಾ ದೇವಾಲಯದ ಸಮಿತಿ ವತಿಯಿಂದ ಭೋಜನ ವ್ಯವಸ್ಥೆಯನ್ನು ಮಾಡಿದ್ದರು.
ಶಾಸಕ ಎಂ.ರಾಜಣ್ಣ, ಕಾಂಗ್ರೆಸ್ ಮುಖಂಡ ವಿ.ಮುನಿಯಪ್ಪ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಲಕ್ಷ್ಮೀನಾರಾಯಣರೆಡ್ಡಿ, ಆಂಜನೇಯಸ್ವಾಮಿ ಸೇವಾ ಸಮಿತಿ ಅಧ್ಯಕ್ಷ ಎಂ.ಅಪ್ಪಯ್ಯಣ್ಣ(ವೆಂಕಟಸ್ವಾಮಿ), ಕಾರ್ಯದರ್ಶಿ ಬೆಳ್ಳೂಟಿ ಎನ್.ನಾಗಪ್ಪ, ಖಜಾಂಚಿ ಎಚ್.ಎನ್.ಆಂಜಿನಪ್ಪ, ಅರ್ಚಕ ಸಿ.ಪಿ.ಮುರಳೀಧರ್, ನಿವೃತ್ತ ತಹಶೀಲ್ದಾರ್ ರಾಜರತ್ನಂ, ಹುಜಗೂರು ರಾಮಯ್ಯ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ತಾಲ್ಲೂಕಿನ ವಿವಿದೆಡೆ ಹನುಮಜಯಂತಿ: ತಾಲ್ಲೂಕಿನ ಅಪ್ಪೇಗೌಡನಹಳ್ಳಿ ಗ್ರಾಮದ ಆಂಜನೇಯಸ್ವಾಮಿ ದೇವಾಲಯ, ಅಪ್ಪೇಗೌಡನಹಳ್ಳಿ ಗೇಟ್ ನ ಬಯಲಾಂಜನೇಯಸ್ವಾಮಿ ದೇವಾಲಯ, ನಗರದ ಕೋಟೆ ಆಂಜನೇಯಸ್ವಾಮಿ ದೇವಾಲಯ, ಚಿಂತಾಮಣಿ ರಸ್ತೆಯಲ್ಲಿರುವ ಆಂಜನೇಯಸ್ವಾಮಿ ದೇಗುಲ, ಮುತ್ತೂರು ಗ್ರಾಮ, ಎಚ್.ಕ್ರಾಸ್, ನಾಗಮಂಗಲ ದ ಶ್ರೀ ಅಭಯ ಆಂಜನೇಯಸ್ವಾಮಿ, ಚೊಕ್ಕಂಡಹಳ್ಳಿ, ಎದ್ದಲತಿಪ್ಪೇನಹಳ್ಳಿ ಮುಂತಾದೆಡೆ ಶ್ರದ್ಧಾ ಭಕ್ತಿಯಿಂದ ಹನುಮಜಯಂತಿಯನ್ನು ಆಚರಿಸಲಾಯಿತು.
- Advertisement -
- Advertisement -
- Advertisement -
- Advertisement -