ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಭಾನುವಾರ ಪಟ್ಟಣದ ಟಿ.ಬಿ.ರಸ್ತೆಯಲ್ಲಿರುವ ಕೃಷ್ಣಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಹೂವಿನ ಅಲಂಕಾರ, ಹೋಮ, ಪೂಜೆ ನಡೆಸಲಾಯಿತು. ಯಾದವ ಕುಲಸ್ಥರು ಕುಟುಂಬ ಸಮೇತರಾಗಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ಮಹಿಳೆಯರು ತಂಬಿಟ್ಟು ದೀಪಗಳನ್ನು ಮೆರವಣಿಗೆಯಲ್ಲಿ ತಂದು ಪೂಜೆಯನ್ನು ನೆರವೇರಿಸಿದರು.
ತಾಲ್ಲೂಕಿನ ಯಾದವ ಕುಲಸ್ಥರಿಂದ ಮೆರವಣಿಗೆಯನ್ನು ಆಯೋಜಿಸಿದ್ದು, ಶ್ರೀಕೃಷ್ಣ ಮೂರ್ತಿಗಳಿರುವ ಮುತ್ತಿನ ಪಲ್ಲಕ್ಕಿಗಳು, ಸಪ್ತಾಶ್ವದ ರಥಗಳು, ಕೀಲುಕುದುರೆ, ಗಾರ್ಡಿಬೊಂಬೆ, ನವಿಲುಬೊಂಬೆ, ತಮಟೆ ವಾದನ, ನಾದಸ್ವರ, ಶ್ರೀಕೃಷ್ಣ ವೇಷಧಾರಿಗಳಾದ ಮಕ್ಕಳು, ದೀಪಗಳನ್ನು ಹೊತ್ತ ಮಹಿಳೆಯರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯಲ್ಲಿ ಸಾಗಿದ್ದು ಆಕರ್ಷಕವಾಗಿತ್ತು.
ಕೃಷ್ಣಸ್ವಾಮಿ ದೇವಸ್ಥಾನದಲ್ಲಿ ಬಾಲಕೃಷ್ಣನ ಮೂರ್ತಿಯನ್ನು ತೊಟ್ಟಿಲಲ್ಲಿರಿಸಿ ಬೆಣ್ಣೆ, ಚಕ್ಕುಲಿ, ನಿಪ್ಪಟ್ಟು, ಕೋಡುಬಳೆ ಹಾಗೂ ಹಣ್ಣುಗಳಿಂದ ಸಿಂಗರಿಸಲಾಗಿತ್ತು. ದೇವಾಲಯದಲ್ಲಿ ಮಹಾಮಂಗಳಾರತಿಯ ನಂತರ ಪ್ರಸಾದವನ್ನು ವಿನಿಯೋಗಿಸಲಾಯಿತು. ಪಟ್ಟಣದ ಉಲ್ಲೂರುಪೇಟೆಯ ಭಜನೆ ಮಂದಿರದಲ್ಲಿರುವ ಪುರಾತನ ತಂಜಾವೂರು ಚಿತ್ರಕಲೆಯ ಬಾಲಕೃಷ್ಣನ ಚಿತ್ರಪಟಕ್ಕೆ ವಿಶೇಷ ಅಲಂಕಾರವನ್ನು ಮಾಡಿ ಪೂಜೆಯನ್ನು ನೆರವೇರಿಸಲಾಯಿತು. ಪದ್ಮಶ್ರೀ ಘಂಟಸಾಲ ಗಾಲ ಕಲಾವೃಂದದ ಡಿ.ಎನ್.ಲಕ್ಷ್ಮೀಪತಿ ಮತ್ತು ತಂಡದವರಿಂದ ಭಕ್ತಿಗೀತೆಗಳ ರಸಸಂಜೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕೋಟೆ ವೃತ್ತದಲ್ಲಿ ನಾಡಹಬ್ಬಗಳ ಆಚರಣಾ ಸಮಿತಿಯಿಂದ ಶ್ರೀಕೃಷ್ಣ ಜಯಂತಿಯನ್ನು ಆಯೋಜಿಸಿದ್ದು, ಶಾಸಕ ಎಂ.ರಾಜಣ್ಣ ಉದ್ಘಾಟಿಸಿ ಮಾತನಾಡಿ, ‘ಶ್ರೀಕೃಷ್ಣ ಭರತಖಂಡದ ಐಕ್ಯತೆಗಾಗಿ ಶ್ರಮಿಸಿದ ಮಹಾನುಭಾವ. ಶ್ರೀಕೃಷ್ಣ ಯಾವುದೇ ರಾಜ್ಯದ ರಾಜನಾಗದಿದ್ದರೂ ದೇಶದಲ್ಲಿದ್ದ ಆಗಿನ ಎಲ್ಲಾ ರಾಜರಿಂದಲೂ ಪೂಜಿಸಿಕೊಂಡಥಹ ಶ್ರೇಷ್ಠ ವ್ಯಕ್ತಿ. ದೇಶದಲ್ಲಿ ಧರ್ಮದ ಸ್ಥಾಪನೆಗಾಗಿ ಅಧರ್ಮದ ಹಾದಿಯಲ್ಲಿದ್ದವರನ್ನೆಲ್ಲಾ ನಾಶ ಮಾಡಿ, ಜಗತ್ತಿಗೆ ಗೀತೆಯನ್ನು ನೀಡಿ ಬದುಕುವ ಮಾರ್ಗವನ್ನು ತಿಳಿಸಿಕೊಟ್ಟಿದ್ದಾರೆ. ಶ್ರೀಕೃಷ್ಣ ಯಾವುದೇ ಜಾತಿಗೆ ಸೀಮಿತವಾಗಿಲ್ಲ. ಮನುಕುಲಕ್ಕೇ ಸೇರುವಂಥಹ ಶ್ರೇಷ್ಠ ವ್ಯಕ್ತಿತ್ವ. ಗೀತೆಯ ಸಾರವನ್ನು ಜನಸಾಮಾನ್ಯರಿಗೆ ತಲುಪಿಸುವುದು ಮತ್ತು ಅದನ್ನು ಅಳವಡಿಸಿಕೊಳ್ಳುವುದು ಸಮಾಜದ ಏಳಿಗೆಗೆ ಅತ್ಯಗತ್ಯ’ ಎಂದು ಹೇಳಿದರು.
ಮೆರವಣಿಗೆಯಲ್ಲಿ ಭಾಗವಹಿಸಿದ್ದ ಎಲ್ಲಾ ಪಲ್ಲಕ್ಕಿಗಳ ತಂಡದವರಿಗೆ ನೆನಪಿನ ಕಾಣಿಕೆಯನ್ನು ನೀಡಲಾಯಿತು.
ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ, ತಾಲ್ಲೂಕು ಯಾದವ ಸಂಘದ ಅಧ್ಯಕ್ಷ ಯೋಗಾನಂದ, ಯಾದವ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಆರ್.ನರಸಿಂಹರಾಜು, ಕೆ.ಎಂ.ಎಫ್. ನಿರ್ದೇಶಕ ಬಂಕ್ ಮುನಿಯಪ್ಪ ಕಾರ್ಯಕ್ರಮದಲ್ಲಿ ಮಾತನಾಡಿದರು.
ತಾಲ್ಲೂಕು ಪಂಚಾಯತಿ ಅಧ್ಯಕ್ಷೆ ಆಂಜಿನಮ್ಮ, ಮಾಜಿ ಅಧ್ಯಕ್ಷ ವೇಣುಗೋಪಾಲ್, ಪಿ.ಎಲ್.ಡಿ. ಬ್ಯಾಂಕ್ ಮಾಜಿ ಉಪಾಧ್ಯಕ್ಷ ಅಶ್ವತ್ಥಪ್ಪ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -