Home News ಶ್ರೀವೀರಾಂಜನೇಯ ದೇವಾಲಯದಲ್ಲಿ ೯೧ ನೇ ವರ್ಷದ ಉಟ್ಲು ಪರಿಷೆ

ಶ್ರೀವೀರಾಂಜನೇಯ ದೇವಾಲಯದಲ್ಲಿ ೯೧ ನೇ ವರ್ಷದ ಉಟ್ಲು ಪರಿಷೆ

0

ಶ್ರೀ ರಾಮನವಮಿಯ ಪ್ರಯುಕ್ತ ಪಟ್ಟಣದ ಚಿಂತಾಮಣಿ ರಸ್ತೆಯಲ್ಲಿರುವ ಶ್ರೀವೀರಾಂಜನೇಯ ದೇವಾಲಯದಲ್ಲಿ 91ನೇ ವರ್ಷದ ಉಟ್ಲು ಪರಿಷೆ ನಡೆಯಿತು. ಕ್ಷೀರ ಉಟ್ಲು ಮತ್ತು ಮನರಂಜನಾ ಉಟ್ಲುಗಳನ್ನು ವೀರಾಂಜನೇಯಸ್ವಾಮಿ ಬಲಿಜ ಸೇವಾ ಟ್ರಸ್ಟ್ ಮತ್ತು ಮಹಿಳಾ ಮಂಡಳಿಯವರು ಆಯೋಜಿಸಿದ್ದರು. ಮಕ್ಕಳು, ಮಹಿಳೆಯರು ಸೇರಿದಂತೆ ನೂರಾರು ಜನರು ಮನರಂಜನಾ ಉಟ್ಲು ವೀಕ್ಷಿಸಿ ಆನಂದಿಸಿದರು.
ಮೊದಲು ಕ್ಷೀರ ಉಟ್ಲು ಕಾರ್ಯಕ್ರಮದಲ್ಲಿ ಹಾಲನ್ನು ಮಡಿಕೆಯಲ್ಲಿ ಕಟ್ಟಿ ಪೂಜಿಸಿ ಒಡೆದರು. ನಂತರ ನಡೆಯುವ ಮನರಂಜನಾ ಉಟ್ಲು ಜನಾಕರ್ಷಣೆಯ ಕೇಂದ್ರ ಬಿಂದು. ಎತ್ತರದ ಕಂಬದ ಮೇಲೆ ಕಬ್ಬಿಣದಲ್ಲಿ ಮಾಡಿರುವ ತಿರುಗುಮಣೆ ಇರುತ್ತದೆ. ಅದಕ್ಕೆ ನಾಲ್ಕು ಹಗ್ಗಗಳನ್ನು ಕಟ್ಟಿರುತ್ತಾರೆ. ಹಗ್ಗದ ತುದಿಯಲ್ಲಿ ತೆಂಗಿನಕಾಯಿ ಕಟ್ಟಿರುತ್ತಾರೆ. ತಿರುಗುಮಣೆಯಲ್ಲಿ ಇಬ್ಬರು ಕುಳಿತು ತಿರುಗಿಸುತ್ತಿದ್ದಂತೆಯೇ ತೆಂಗಿನಕಾಯಿ ಕಟ್ಟಿರುವ ಹಗ್ಗವೂ ಸುತ್ತತೊಡಗುತ್ತವೆ. ಉದ್ದುದ್ದದ ಕೋಲು ಹಿಡಿದು ಈ ತೆಂಗಿನಕಾಯಿಯನ್ನು ಹೊಡೆಯಲು ಇಬ್ಬರು ನಿಂತಿರುತ್ತಾರೆ. ಅವರು ತೆಂಗಿನಕಾಯಿಗೆ ಹೊಡೆಯದಂತೆ ಅವರೆಡೆಗೆ ಸುತ್ತಲಿಂದ ನೀರನ್ನು ಎರಚುತ್ತಿರುತ್ತಾರೆ. ಈ ಆಟ ನೋಡುವ ಜನ ಹೊಡೆಯಲು ಕೂಗುತ್ತಾ ಹುರಿದುಂಬಿಸುತ್ತಾರೆ. ತೆಂಗಿನ ಕಾಯಿ ಹೊಡೆದ ವೀರನಿಗೆ ಹಾರಹಾಕಿ ದೇವಾಲಯದಲ್ಲಿ ಗೌರವಿಸಿದರು.