23.1 C
Sidlaghatta
Wednesday, February 18, 2026

ಶ್ರೀ ಕರಗದಮ್ಮದೇವಿಯ ಹಸಿ ಕರಗ ಮಹೋತ್ಸವ

- Advertisement -
- Advertisement -

ನಗರದ ಮುತ್ತೂರು ಬೀದಿಯ ಶ್ರೀ ಕರಗದಮ್ಮದೇವಿಯ ಕರಗವು ಚೈತ್ರ ಮಾಸ ಶುದ್ಧ ಬಹುಳ ತ್ರಯೋದಶಿ ಬುಧವಾರ ಧ್ವಜಾರೋಹಣದಿಂದ ಆರಂಭವಾಗಿ ಭಾನುವಾರದವರೆಗೆ ಅನೇಕ ಪೂಜಾ ಕಾರ್ಯಕ್ರಮಗಳನ್ನು ಒಳಗೊಂಡಿರುತ್ತದೆ.
ಈ ಬಾರಿ ಕರಗವನ್ನು ಮುಳಬಾಗಿಲು ವೆಂಕಟೇಶ್ ಹೊತ್ತಿದ್ದರು. ಸಂಜೆಯ ಸುಮಾರಿಗೆ ಕರಗ ಹೊತ್ತು ನಡೆಯುವ ವ್ಯಕ್ತಿಗೆ ವಪನ ಸಂಸ್ಕಾರ ಮಾಡಿ, ಕಂಕಣ ಕಟ್ಟಿ, ಕೈತುಂಬ ಕರಿ ಬಳೆ ತೊಡಿಸಿ, ಅಚ್ಚ ಮಲ್ಲಿಗೆಯ ಜಡೆಕುಚ್ಚುಗಳಿಂದ ಸಿಂಗರಿಸಿ, ಅರಿಶಿನದ ಸೀರೆ, ಕುಪ್ಪುಸ ಉಡಿಸಿ, ಆಭರಣಗಳಿಂದ ಅಲಂಕರಿಸಿದರು. ಕರಗ ಹೊರುವ ವ್ಯಕ್ತಿ ನವವಧುವಿನಂತೆ ಶೋಭಿಸುತ್ತಿದ್ದರು.
ಅನಂತರ ಶಕ್ತಿಸ್ವರೂಪನಾದ ಆ ವ್ಯಕ್ತಿಗೆ ಧೂಪ ದೀಪಗಳಿಂದ ಮಂಗಳವಾದ್ಯಗಳೊಂದಿಗೆ ಶಾಸ್ತ್ರೋಕ್ತವಾದ ಪೂಜೆ ನಡೆಯಿತು. ಹಣೆಗೆ ನಾಮ, ನಡುಪಟ್ಟಿ ಧರಿಸಿ ಕೈಯಲ್ಲಿ ಕತ್ತಿ ಹಿಡಿದ ಅಂಗರಕ್ಷಕರ ತಂಡದ ವೀರಕುಮಾರರ ಕಾವಲಿನಲ್ಲಿ ಕರಗ ಹೊರುವ ವ್ಯಕ್ತಿಯನ್ನು ನಡೆಮಡಿಯೊಂದಿಗೆ ದೇವಸ್ಥಾನಕ್ಕೆ ಕರೆತಂದರು. ಅಷ್ಟರಲ್ಲಿ ಅರಿಶಿನ, ಕುಂಕುಮ ಮಲ್ಲಿಗೆ ಹೂವಿನಿಂದ ಅಲಂಕೃತವಾದ ಹಸಿಕರಗ ಸಿದ್ಧವಾಗಿತ್ತು. ಕರಗದ ಮೇಲೆ ಗೋಪುರದಂತೆ ಮಲ್ಲಿಗೆ ಹೂವಿನ ಅಲಂಕಾರವಿದ್ದು ತುದಿಯಿಂದ ಇಳಿಬಿಟ್ಟ ಹೂ ಸರಗಳನ್ನು ಹೊರುವವರ ಭುಜದಿಂದ ಕೆಳಕ್ಕೆ ಮಾಲೆಯಂತೆ ಹರಡಿಕೊಳ್ಳುವ ರೀತಿಯಲ್ಲಿ ಕಟ್ಟಿದ್ದರು.
ವೀರಕುಮಾರರ ರಕ್ಷಣೆಯಲ್ಲಿ ಗುಡಿಯ ಅಂಗಳ ಬಿಟ್ಟ ಕರಗ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬೆಳಗಿನ ಜಾವಕ್ಕೆ ಮತ್ತೆ ಗರ್ಭಗುಡಿ ಪ್ರವೇಶಿಸಿತು. ದಾರಿಯುದ್ದಕ್ಕೂ ಭಕ್ತಾದಿಗಳಿಂದ ಪೂಜೆ ಸೇವೆ ನಡೆಯಿತು. ನಗರದ ಹಲವಾರು ಬೀದಿಗಳಲ್ಲಿ ವಿದ್ಯುತ್ ಅಲಂಕಾರ ಮಾಡಿ ಮಜ್ಜಿಗೆ ಪಾನಕಗಳ ವ್ಯವಸ್ಥೆಗಳನ್ನೂ ವಿವಿಧ ದಾನಿಗಳು ಮಾಡಿದ್ದರು. ಮಹಿಳೆಯರು ಕರಗಲ್ಲೆ ಪೂಜೆ ಸಲ್ಲಿಸಿ ಮಲ್ಲಿಗೆ ಹೂವನ್ನು ಸಮರ್ಪಿಸಿದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!