ಜಲಸಂರಕ್ಷಣೆ, ಜಲಸಾಕ್ಷರತೆ, ಜಲಮೂಲಗಳ ಪುನಶ್ಚೇತನ, ಹಸುರೀಕರಣ ಮತ್ತು ಮಳೆನೀರು ಕೊಯ್ಲಿಗೆ ಪ್ರತಿಯೊಬ್ಬರೂ ಆದ್ಯತೆ ನೀಡಬೇಕು ಎಂದು ಶಾಸಕ ವಿ.ಮುನಿಯಪ್ಪ ತಿಳಿಸಿದರು.
ತಾಲ್ಲೂಕಿನ ವರದನಾಯಕನಹಳ್ಳಿ ಗೇಟ್ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಕೃಷಿ ಇಲಾಖೆ ಹಾಗೂ ಚಿಂತಾಮಣಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ಸೋಮವಾರ ನಡೆದ ಸಮಗ್ರ ಕೃಷಿ ಅಭಿಯಾನ, ಜಲಾಮೃತ ಹಾಗೂ ಜಲಶಕ್ತಿ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅತಿ ಕಡಿಮೆ ಪ್ರಮಾಣದಲ್ಲಿ ಜಮೀನು ಹೊಂದಿರುವ ರೈತರು ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡರೆ ಆರ್ಥಿಕವಾಗಿ ಸಬಲರಾಗಬಹುದು. ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳುವುವರಿಂದ ರೈತರಿಗೆ ನಿರಂತರ ಆದಾಯದ ಮೂಲಕ ಸ್ವಾವಲಂಬನೆ ಸುಲಭ ಸಾಧ್ಯವಾಗುತ್ತದೆ. ಜಲಕ್ಷಾಮ ಎದುರಿಸುತ್ತಿರುವ ಜಿಲ್ಲೆಯಲ್ಲಿ ಸಮರೋಪಾದಿಯಲ್ಲಿ ಮಳೆ ನೀರು ಕೊಯ್ಲು ಮಾಡಬೇಕು. ಜೊತೆಗೆ ನೀರಿನ ಸದ್ಬಳಕೆ, ಸಂರಕ್ಷಣೆಗೆ ಹೆಚ್ಚಿನ ಮಹತ್ವ ನೀಡಬೇಕಾಗಿದೆ ಎಂದರು.
ನೀರಿನ ಪುನರ್ ಬಳಕೆ, ಸಂರಕ್ಷಣೆ, ಮಳೆ ನೀರಿನ ಕೊಯ್ಲು, ಕೆರೆ ಕಟ್ಟೆಗಳ ಪುನಶ್ಚೇತನ, ಇಂಗುಗುಂಡಿಗಳ ತಯಾರಿಕೆ, ಜಲಾನಯನ ಅಭಿವೃದ್ಧಿ, ತ್ಯಾಜ್ಯ ನೀರಿನ ಪುನರ್ ಬಳಕೆ ಹಾಗೂ ಹಸಿರೀಕರಣದ ಬಗ್ಗೆ ತಳ ಮಟ್ಟದಿಂದ ಅಂದರೆ ಗ್ರಾಮೀಣದಿಂದ ನಗರ ಪ್ರದೇಶದವರೆಗೂ ಎಲ್ಲ ಹಂತಗಳಲ್ಲಿ ಜಾಗೃತಿ ಮೂಡಿಸಬೇಕಿದೆ. ನೀರಿನ ಸಮಸ್ಯೆ, ಅಂತರ್ಜಲ ಕುಸಿತ, ಕುಡಿಯುವ ನೀರಿನ ಅಭಾವ ನಿವಾರಿಸುವ ದಿಸೆಯಲ್ಲಿ ಎಲ್ಲರೂ ಕಾರ್ಯಪ್ರವೃತ್ತರಾಗಬೇಕಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಳೆ ನೀರು ಕೊಯ್ಲಿನ ಬಗ್ಗೆ ಕೆ.ವಿ.ಕೆ.ಚಿಂತಾಮಣಿಯ ಹಿರಿಯ ವಿಜ್ಞಾನಿ ಡಾ.ಆರ್.ಮಂಜುನಾಥ್ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಮಳೆ ನೀರು ಕೊಯ್ಲು ಮತ್ತು ಬಳಕೆಯ ಕುರಿತಂತೆ ಭಿತ್ತಿಪತ್ರವನ್ನು ಬಿಡುಗಡೆ ಮಾಡಲಾಯಿತು.
ಜೈವಿಕ ಇಂಧನ, ಕೃಷಿ ಹಾಗೂ ರೇಷ್ಮೆಯಲ್ಲಿನ ತಾಂತ್ರಿಕತೆ, ಟ್ರಾಕ್ಟರ್ ಹಾಗೂ ಟಿಲ್ಲರ್ ಗಳು ಮುಂತಾದ ಪ್ರಾತ್ಯಕ್ಷಿಕೆ, ಪ್ರದರ್ಶನವನ್ನು ಏರ್ಪಡಿಸಿದ್ದು ರೈತರು ವೀಕ್ಷಿಸಿ ಮಾಹಿತಿ ಪಡೆದರು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ವಿ.ನಾರಾಯಣಸ್ವಾಮಿ, ಉಪಾಧ್ಯಕ್ಷ ಮುನಿಯಪ್ಪ, ಸದಸ್ಯರಾದ ಕೆ.ಎಂ.ಶ್ರೀನಿವಾಸ್, ರಾಜಶೇಖರ್, ನರಸಿಂಹಪ್ಪ, ಜಂಟಿ ಕೃಷಿ ನಿರ್ದೇಶಕಿ ಎಲ್.ರೂಪ, ಉಪ ಕೃಷಿ ನಿರ್ದೇಶಕಿ ಎಚ್.ಪಂಕಜ, ಸಹಾಯಕ ತೋಟಗಾರಿಕಾ ನಿರ್ದೇಶಕ ಮುನೇಗೌಡ, ಸಹಾಯಕ ರೇಷ್ಮೆ ನಿರ್ದೇಶಕ ಬೋಜಣ್ಣ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಎಸ್.ವಿ.ಮಂಜುನಾಥ, ಮಾಲತೇಶ, ರೈತ ಮುಖಂಡರಾದ ಜೆ.ಎಸ್.ವೆಂಕಟಸ್ವಾಮಿ, ರವಿಪ್ರಕಾಶ್, ತಾದೂರು ಮಂಜುನಾಥ್, ಮುನಿಕೆಂಪಣ್ಣ, ಪ್ರತೀಶ್, ಎಚ್.ಜಿ.ಗೋಪಾಲಗೌಡ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನಾರಾಯಣಸ್ವಾಮಿ, ಮುನಿಯಪ್ಪ ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







