Home News ಸಹಕಾರಿ ಸಂಘಗಳನ್ನು ಬಲಪಡಿಸಿ

ಸಹಕಾರಿ ಸಂಘಗಳನ್ನು ಬಲಪಡಿಸಿ

0

ಸಹಕಾರಿ ಸಂಘಗಳಿಂದ ಪಡೆಯುವಂತಹ ಸಾಲವನ್ನು ನಿಗದಿತ ಅವಧಿಯಲ್ಲಿ ಮರುಪಾವತಿ ಮಾಡುವ ಮೂಲಕ ಸಂಘಗಳನ್ನು ಉಳಿಸಿ ಬೆಳಸಬೇಕು ಎಂದು ಜಿಲ್ಲಾ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದೇಗೌಡ ತಿಳಿಸಿದರು.
ತಾಲ್ಲೂಕಿನ ಎಸ್ ದೇವಗಾನಹಳ್ಳಿ ಗ್ರಾಮದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ೬೪ ನೇ ಅಖಿಲ ಭಾರತ ಸಹಕಾರ ಸಪ್ತಾಹ -೨೦೧೭ ಮತ್ತು ಸಾದಲಿ ವ್ಯವಸಾಯ ಸೇವಾ ಸಹಕಾರ ಸಂಘದ ವತಿಯಿಂದ ಸಾಲ ವಿತರಣಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
‘ಸಹಕಾರ ಸಂಸ್ಥೆಗಳನ್ನು ಗಣಕೀಕರಣಗೊಳಿಸುವ ಮೂಲಕ ಜನರ ಸಬಲೀಕರಣ’ ಎಂಬ ಘೋಷ ವಾಕ್ಯದೊಂದಿಗೆ ಈ ಬಾರಿ ೬೪ ನೇ ಅಖಿಲ ಭಾರತ ಸಹಕಾರ ಸಪ್ತಾಹ ದೇಶಾದ್ಯಂತ ಹಮ್ಮಿಕೊಳ್ಳಲಾಗಿದೆ. ಸಹಕಾರಿ ಸಂಘಗಳ ಮೂಲಕ ಸಹಕಾರಿ ಬೇಸಾಯ, ಸಹಕಾರಿ ಉದ್ದಿಮೆ, ಸಹಕಾರಿ ಮಾರಾಟ ಮತ್ತು ವ್ಯಾಪಾರ, ಸಹಕಾರಿ ಪತ್ತು ಮತ್ತು ಹಣಕಾಸಿನ ನಿರ್ವಹಣೆ, ಶಿಕ್ಷಣ, ಕೌಶಲ್ಯಾಧಾರಿತ ತರಬೇತಿ, ಪ್ರಚಾರ, ಮಾನವನ ಇತರೇ ಸಹಕಾರಿ ಚಟುವಟಿಕೆಗಳು ಹಾಗೂ ಆರೋಗ್ಯದ ಉದ್ದೇಶಗಳಿಗಾಗಿ ಉತ್ತೇಜನ ನೀಡುವಂತಹ ಕೆಲಸವಾಗಬೇಕು ಎಂದರು.
ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಚ್.ವಿ.ನಾಗರಾಜ್ ಮಾತನಾಡಿ, ಕಳೆದ ೧೧೩ ವರ್ಷಗಳಿಂದ ದೇಶದ ಆರ್ಥಿಕ, ಸಾಮಾಜಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಭಾರತದ ಸಹಕಾರ ಚಳುವಳಿ ವಿಶ್ವದಲ್ಲಿಯೇ ಮಹತ್ವವೆನಿಸಿಕೊಂಡಿದೆ. ಇಂತಹ ಸಹಕಾರ ಸಂಘಗಳು ಉತ್ತಮವಾಗಿ ಕಾರ್ಯನಿರ್ವಹಿಸಬೇಕಾದರೆ ಷೇರುದಾರರು ಸೇರಿದಂತೆ ಸಾಲ ಪಡೆಯುವವರು ಹೆಚ್ಚು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
ಕೋಚಿಮುಲ್ ನಿರ್ದೇಶಕ, ಜಿಲ್ಲಾ ಪಂಚಾಯಿತಿ ಸದಸ್ಯ ಬಂಕ್ಮುನಿಯಪ್ಪ ಮಾತನಾಡಿ, ರೈತರು ಸೇರಿದಂತೆ ಸ್ತ್ರೀಶಕ್ತಿ ಸಂಘಗಳ ಪದಾಧಿಕಾರಿಗಳು ಯಾವ ಉದ್ದೇಶಕ್ಕಾಗಿ ಸಾಲ ಪಡೆಯುತ್ತಾರೊ ಅದೇ ಉದ್ದೇಶಕ್ಕೆ ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು. ರೈತರು ಕೇವಲ ಕೃಷಿಯನ್ನು ಮಾತ್ರ ಅವಲಂಬಿಸದೆ ಹೈನುಗಾರಿಕೆ, ಮಿನಿಅರಣ್ಯ, ಗುಡಿಕೈಗಾರಿಕೆಗಳ ಕಡೆಗೆ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದರು.
ತೀವ್ರ ನೀರಿನ ಅಭಾವದಿಂದಾಗಿ ಬಯಲುಸೀಮೆ ಭಾಗದ ಜನರು ರೇಷ್ಮೆಯೊಂದರಿಂದಲೇ ಸುಧಾರಣೆ ಕಾಣಲು ಸಾಧ್ಯವಾಗುವುದಿಲ್ಲ. ಹಾಗಾಗಿ ಆರ್ಥಿಕವಾಗಿ ಅಭಿವೃದ್ಧಿ ಹೊಂದುವಂತಹ ಚಟುವಟಿಕೆಗಳ ಕಡೆಗೆ ಹೆಚ್ಚು ಒಲವು ತೋರಿಸಬೇಕು ಎಂದರು.
ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಶಿವಾರೆಡ್ಡಿ, ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಕೆ.ಗುಡಿಯಪ್ಪ ಮಾತನಾಡಿದರು.
ಇದೇ ಸಂದರ್ಭದಲ್ಲಿ ಸಾದಲಿ ಪತ್ತಿನ ವ್ಯವಸಾಯ ಸೇವಾ ಸಹಕಾರ ಸಂಘದ ಸುಮಾರು ೧೩೯ ಅರ್ಹ ರೈತರಿಗೆ ಕೆಸಿಸಿ ಸಾಲ ಸೇರಿದಂತೆ ೧೩ ಮಹಿಳಾ ಸ್ವಸಹಾಯ ಸಂಘಗಳಿಗೆ ಒಟ್ಟು ೨ ಕೋಟಿ ೪೩ ಲಕ್ಷದ ೨೦ ಸಾವಿರ ರೂಗಳ ಸಾಲದ ಚೆಕ್ಗಳನ್ನು ವಿತರಿಸಲಾಯಿತು.
ಡಿಸಿಸಿ ಬ್ಯಾಂಕ್ ನಿರ್ದೇಶಕ ಜೆ.ವಿ.ಹನುಮೇಗೌಡ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಲಕ್ಷ್ಮಿನಾರಾಯಣರೆಡ್ಡಿ, ಹಾಪ್ಕಾಮ್ಸ್ ಅಧ್ಯಕ್ಷ ಎಂ.ಎಸ್.ಚಂದ್ರೇಗೌಡ, ಸಹಕಾರ ಸಂಘಗಳ ಸಹಾಯಕ ನಿಬಂಧಕ ಆರೀಫ್ಉಲ್ಲಾ, ಡಿಸಿಸಿ ಬ್ಯಾಂಕ್ ಶಿಡ್ಲಘಟ್ಟ ಶಾಖೆಯ ವ್ಯವಸ್ಥಾಪಕ ಆನಂದ್, ತಾಲ್ಲೂಕು ಹಾಲು ಉತ್ಪಾದಕರ ನೌಕರರ ಸಂಘದ ಅಧ್ಯಕ್ಷ ಚಂದ್ರೇಗೌಡ, ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ಟಿ.ಎ.ರಮೇಶ್, ಸಾದಲಿ ವಿಎಸ್ಎಸ್ಎನ್ ಅಧ್ಯಕ್ಷ ಲಕ್ಷ್ಮೀಪತಿ ಹಾಜರಿದ್ದರು.
 

error: Content is protected !!