ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡದಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವ್ಯಾಪಕವಾಗಿ ಜನಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಲಾಗಿದೆ. ನಾಗರಿಕರು ಮನೆಯಲ್ಲಿದ್ದು ಸಹಕರಿಸಬೇಕೆಂದು ಜಿಲ್ಲಾ ಪಂಚಾಯಿತಿ ಸಿಇಓ ಫೌಝೀಯಾ ತರುನ್ನುಮ್ ಮನವಿ ಮಾಡಿದರು.
ನಗರದ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿರುವ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಮತ್ತು ಗ್ರಾಮಗಳಲ್ಲಿ ಕೊರೊನಾ ಕಾರ್ಯಪಡೆಯನ್ನು ರಚಿಸಿ ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸಲಾಗುತ್ತದೆ. ನಾಗರಿಕರು ಸಹ ಆರೋಗ್ಯ ಇಲಾಖೆಯ ಸಿಬ್ಬಂದಿಯೊಂದಿಗೆ ಸಹಕರಿಸಿ ಕೊರೊನಾ ಸೋಂಕಿನ ವಿರುಧ್ಧ ಕೈಗೊಂಡಿರುವ ಹೋರಾಟದಲ್ಲಿ ಕೈಜೋಡಿಸಬೇಕೆಂದರು.
ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಜ್ವರ-ನೆಗಡಿ ಅಥವಾ ಕೆಮ್ಮುವೆಂದು ಬರುವ ರೋಗಿಗಳಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಬೇಕು. ಆಸ್ಪತ್ರೆಯನ್ನು ಸ್ವಚ್ಛವಾಗಿಟ್ಟುಕೊಂಡು ರೋಗಿಗಳು ಹೊರತುಪಡಿಸಿ ಬೇರೆಯವರೆಗೆ ಆಸ್ಪತ್ರೆಯಲ್ಲಿ ಇರಲು ಅವಕಾಶ ಕಲ್ಪಿಸಬಾರದು. ಕೊರೊನಾ ಸೋಂಕು ಹೇಗೆ ಹರಡುತ್ತದೆ ಎಂಬುದರ ಕುರಿತು ಅರಿವು ಮೂಡಿಸುವ ಫಲಕಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.
ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆಯಲ್ಲಿ ಸುಮಾರು 13 ಮಂದಿಗೆ ಡಯಾಲಿಸಿಸ್ ಮಾಡಲಾಗುತ್ತದೆ. ಆಸ್ಪತ್ರೆಯಲ್ಲಿ ನೀರಿನ ಅಭಾವ ಹೆಚ್ಚಾಗಿದ್ದು ಟ್ಯಾಂಕರ್ ಮೂಲಕ ಸಮಸ್ಯೆ ನೀಗಿಸಲು ಕ್ರಮ ಕೈಗೊಂಡಿದ್ದೇವೆ ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ವಾಣಿ ಮಾಹಿತಿ ನೀಡಿದರು. ಇತ್ತೀಚಿಗೆ ಕೊರೆಸಿದ್ದ ಕೊಳವೆಬಾವಿಯಲ್ಲಿ ನೀರು ಲಭಿಸಿತ್ತು, ಜೊತೆಗೆ ಆಸ್ಪತ್ರೆಗೆ ನೀರು ಸರಬರಾಜು ಮಾಡಲು ನೇರವಾಗಿ ಪೈಪ್ಲೈನ್ ವ್ಯವಸ್ಥೆ ಮಾಡಲಾಗಿತ್ತು. ಆದರೆ ಈಗ ಕೊಳವೆಬಾವಿಯಲ್ಲಿ ನೀರು ಬತ್ತಿದೆ. ನಗರಸಭೆಯ ಮೂಲಕ ಸಮಪರ್ಕವಾಗಿ ನೀರು ಸರಬರಾಜು ಆಗುತ್ತಿಲ್ಲವೆಂದರು.
ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕವನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಬೇಕು. ಆಸ್ಪತ್ರೆಯಲ್ಲಿ ಖಾಲಿಯಿರುವ ತಜ್ಞ ವೈದ್ಯರನ್ನು ನೇಮಕ ಮಾಡಲು ಕ್ರಮ ಕೈಗೊಳ್ಳಲಾಗುವುದು. ಬಡವರಿಗೆ ಉತ್ತಮ ಆರೋಗ್ಯ ಸೇವೆ ನೀಡಲು ಅಧಿಕಾರಿಗಳು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕೆಂದರು.
ಇದೇ ವೇಳೆಯಲ್ಲಿ ಆಸ್ಪತ್ರೆಯ ಎಲ್ಲಾ ವಾರ್ಡ್ಗಳು, ಟ್ರಾಮಾಕೇರ್ ಘಟಕವನ್ನು ಪರಿಶೀಲಿಸಿ ಸ್ವಚ್ಛತೆ ಕಾಪಾಡಿಕೊಳ್ಳಬೇಕೆಂದು ತಾಕೀತು ಮಾಡಿ ಆಸ್ಪತ್ರೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಪ್ರಥಮ ಆದ್ಯತೆ ನೀಡಲಾಗುವುದೆಂದರು.
ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್ಮೂರ್ತಿ ಹಾಜರಿದ್ದರು.