ಸಾರ್ವಜನಿಕ ಆಸ್ಪತ್ರೆಯಲ್ಲಿ ಸಿಗುವಂತಹ ಸೇವೆಯನ್ನು ನಾಗರೀಕರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಂಗಮಕೋಟೆ ಗ್ರಾಮ ಪಂಚಾಯತಿ ಅಧ್ಯಕ್ಷೆ ರಹಮತ್ಜಾನ್ ಹೇಳಿದರು.
ತಾಲ್ಲೂಕಿನ ಜಂಗಮಕೋಟೆ ಸಾರ್ವಜನಿಕ ಆಸ್ಪತ್ರೆಗೆ ನೂತನವಾಗಿ ಖರೀದಿಸಿರುವ ಆಂಬುಲೆನ್ಸ್ ವಾಹನಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶಗಳ ಜನರ ಆರೋಗ್ಯವನ್ನು ಕಾಪಾಡುವ ದೃಷ್ಟಿಯಿಂದ ಸರ್ಕಾರ, ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಗರ್ಭಿಣಿಯರ ತಪಾಸಣೆ, ಹೊರರೋಗಿಗಳ ತಪಾಸಣೆ, ಪ್ರಸವ, ಉಚಿತ ರಕ್ತಪರೀಕ್ಷೆಗಳು, ಸೇರಿದಂತೆ ಅನೇಕ ಬಗೆಯ ಸೇವೆಗಳನ್ನು ನೀಡಲಾಗುತ್ತಿದೆ. ಹಲವು ಬಾರಿ ಹೆಚ್ಚಿನ ಚಿಕಿತ್ಸೆಗಳಿಗಾಗಿ ಬೇರೆ ಆಸ್ಪತ್ರೆಗಳಿಗೆ ತೆರಳಲು ರೋಗಿಗಳ ಪರದಾಡಬೇಕಾದಂತಹ ಸ್ಥಿತಿ ನಿರ್ಮಾಣವಾಗಿರುವುದರಿಂದ ಆಂಬುಲೆನ್ಸ್ ತರಿಸಲಾಗಿದೆ.
ಗ್ರಾಮದಲ್ಲಿ ಸ್ವಚ್ಚತೆಯನ್ನು ಕಾಪಾಡಿಕೊಳ್ಳುವಲ್ಲಿಯೂ ಕೂಡಾ ನಾಗರಿಕರು ಹೆಚ್ಚು ಗಮನಹರಿಸಬೇಕು. ನೀರು ನಿಲ್ಲುವಂತಹ ಸ್ಥಳಗಳಲ್ಲಿ ಸ್ವಚ್ಚವಾಗಿಟ್ಟುಕೊಂಡು ಮುಂದಿನ ದಿನಗಳಲ್ಲಿ ಹರಡಬಹುದಾದ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ನಾಗರಿಕರು ಸಹಕಾರ ನೀಡಬೇಕು ಎಂದರು.
ಶಾಸಕ ಎಂ.ರಾಜಣ್ಣ ಮಾತನಾಡಿ, ಸಾರ್ವಜನಿಕ ಆಸ್ಪತ್ರೆಗೆ ಬರುವಂತಹ ರೋಗಿಗಳೊಂದಿಗೆ ವೈದ್ಯರು ಸಂಯಮದಿಂದ ವರ್ತನೆ ಮಾಡಬೇಕು. ಸರ್ಕಾರದಿಂದ ನೀಡುವಂತಹ ಎಲ್ಲಾ ಸೌಲಭ್ಯಗಳನ್ನು ಬಡರೋಗಿಗಳಿಗೆ ಪ್ರಾಮಾಣಿಕವಾಗಿ ತಲುಪಿಸಬೇಕು. ವಿನಾಕಾರಣ ರೋಗಿಗಳನ್ನು ಅಲೆದಾಡಿಸಬೇಡಿ. ಇರುವಂತಹ ಸೌಲಭ್ಯಗಳನ್ನು ದುರುಪಯೋಗ ಪಡಿಸಿಕೊಳ್ಳದೆ, ಸಾರ್ವಜನಿಕರ ಸ್ವತ್ತುಗಳನ್ನು ಕಾಪಾಡಿಕೊಳ್ಳಬೇಕು ಎಂದರು.
ಕೋಚಿಮುಲ್ ನಿರ್ದೇಶಕ ಬಂಕ್ಮುನಿಯಪ್ಪ, ಗ್ರಾಮ ಪಂಚಾಯತಿ ಉಪಾಧ್ಯಕ್ಷ ನಾರಾಯಣಸ್ವಾಮಿ, ವೈದ್ಯಾಧಿಕಾರಿ ಡಾ.ಅಂಬಿಕಾ, ಗ್ರಾಮ ಪಂಚಾಯತಿ ಸದಸ್ಯರು, ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -