34.1 C
Sidlaghatta
Friday, March 29, 2024

ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಹಿಳೆಯರ ಪಾತ್ರ ಸ್ಮರಣೀಯ

- Advertisement -
- Advertisement -

ಸ್ವಾತಂತ್ರ್ಯ ಹೋರಾಟದಲ್ಲಿ ಎಲೆಮರೆಯ ಕಾಯಿಗಳಂತೆ ಜೀವತೇಯ್ದ ಸಾವಿರಾರು ಮಹಿಳೆಯರಿದ್ದಾರೆ. ಪ್ರತಿ ಪುರುಷನ ಯಶಸ್ಸಿನ ಹಿಂದೆ ಒಬ್ಬ ಮಹಿಳೆ ಇರುವಳೆಂಬ ಹೇಳಿಕೆಯಂತೆ ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅನೇಕ ಹೋರಾಟಗಾರ್ತಿಯರ ಪಾತ್ರವು ಸ್ಮರಣೀಯ ಎಂದು ಕ.ಸಾ.ಪ ತಾಲ್ಲೂಕು ಅಧ್ಯಕ್ಷ ಬಿ.ಆರ್.ಅನಂತಕೃಷ್ಣ ತಿಳಿಸಿದರು.
ತಾಲ್ಲೂಕಿನ ತುಮ್ಮನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ‘ಶಾಲೆಗೊಂದು ಕನ್ನಡ ಕಾರ್ಯಕ್ರಮ – ಕಲಿಯುವ ಕೈಗೆ ಓದುವ ಪುಸ್ತಕ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬೇಗಂ ಹಜರತ್ಮಹಲ್, ಲಕ್ಷ್ಮೀಸ್ವಾಮಿನಾಥನ್, ವಿಜಯಲಕ್ಷ್ಮಿ ಪಂಡಿತ್, ಅಕ್ಕಮ್ಮ ಚರಿಯನ್, ಅರುಣಾ ಅಸಫ್ ಅಲಿ, ಕೇರಳದ ಕುಟ್ಟಮ್ಮಾಳ್ ಅಮ್ಮ, ದುರ್ಗಾಬಾಯಿ ಮುಂತಾದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಿಳೆಯರನ್ನು ನಾವು ಮರೆಯಬಾರದು. ‘ನನಗೆ ಉಪವಾಸದ ಮೂಲಕ ಪ್ರತಿಭಟಿಸುವುದು ಹೇಳಿಕೊಟ್ಟಿರುವುದು ನನ್ನ ಅಮ್ಮ’ ಎಂದು ಗಾಂಧೀಜಿ ಹೇಳುತ್ತಿದ್ದರು.
ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿ ಪಡೆದ ಅರುಣಾ ಅಸಫ್ಅಲಿ ಹಾಗೂ ಸುಚೇತ ಕೃಪಲಾನಿಯವರು ಚಳವಳಿಯ ಮುಂದಾಳತ್ವವನ್ನು ವಹಿಸಿಕೊಳ್ಳುವ ಮೂಲಕ ಯುವಕರಿಗೆ ಪ್ರೇರಣೆಯಾದರು. ಗೋಮಾಲಿಯಾ ಟ್ಯಾಂಕ್ ಮೈದಾನದಲ್ಲಿ ತ್ರಿವರ್ಣ ಧ್ವಜ ಹಾರಿಸಿದ್ದರಿಂದಲೇ ಅರುಣಾ ಅಸಫ್ ಅಲಿ ಅವರನ್ನು ಸ್ವಾತಂತ್ರ್ಯ ಸಂಗ್ರಾಮದ ಮಹಾತಾಯಿ ಎಂದು ಕರೆದರು.
ಆಗಸ್ಟ್ 9 ರಂದು ಬ್ರಿಟೀಷರ ವಿರುದ್ಧ ಭಾರತ ಬಿಟ್ಟು ಚಳುವಳಿ ಪ್ರಾರಂಭಿಸಿದ ದಿನವಷ್ಟೇ ಅಲ್ಲದೆ ವಿ.ಕೃ.ಗೋಕಾಕ್ ಅವರ ಜನ್ಮದಿನ ಕೂಡ. ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಅನಕ್ಷರಸ್ಥರ ವಲಯದಲ್ಲೂ ಜನಪ್ರಿಯರು. ವಿ.ಕೃ.ಗೋಕಾಕರ ಅಧ್ಯಕ್ಷತೆಯಲ್ಲಿ ಸಮಿತಿಯು ರಾಜ್ಯ ಸರ್ಕಾರಕ್ಕೆ ೧೯೮೦ರಲ್ಲಿ ಪ್ರೌಢಶಾಲಾ ವ್ಯಾಸಂಗದಲ್ಲಿ ಭಾಷೆಗಳ ಸ್ಥಾನಮಾನ ಕುರಿತು ನೀಡಿದ ವರದಿ ಕನ್ನಡದ ಪರವಾಗಿತ್ತು. ಸರ್ಕಾರ ಈ ವರದಿಯನ್ನು ಅಂಗೀಕರಿಸಲು ಹಿಂದೆ ಮುಂದೆ ನೋಡಿದಾಗ ಕನ್ನಡ ಜನತೆ ಮೊದಲ ಬಾರಿಗೆ ಒಕ್ಕೊರಲಿನಿಂದ ಗೋಕಾಕ್ ವರದಿ ಜಾರಿಗೆ ಬರಲಿ ಎಂದು ಸರ್ಕಾರವನ್ನು ಒತ್ತಾಯಿಸಿತು. ಈ ಸಂದರ್ಭದಲ್ಲಿ ನಡೆದ ಕನ್ನಡ ಚಳವಳಿ ಒಂದು ಐತಿಹಾಸಿಕ ದಾಖಲೆಯಾಗಿದೆ. ಈಗ ಇದರ ಫಲವಾಗಿ ಕರ್ನಾಟಕದ ಕನ್ನಡೇತರ ಶಾಲೆಗಳಲ್ಲೂ ಮೂರನೆಯ ತರಗತಿಯಿಂದ ಹತ್ತನೆಯ ತರಗತಿಯವರೆಗೂ ಒಂದು ಭಾಷೆಯಾಗಿ ಕನ್ನಡವನ್ನು ಕಡ್ಡಾಯವಾಗಿ ಓದಬೇಕಾಗಿದೆ. ‘ಗೋಕಾಕ್ ವರದಿ’ ಯಲ್ಲಿ ಕನ್ನಡಕ್ಕೆ ಶಾಲಾ ಶಿಕ್ಷಣದಲ್ಲಿ ಸಲ್ಲಬೇಕಾದ ನ್ಯಾಯಯುತ ಸ್ಥಾನವನ್ನು ದೊರಕಿಸಿಕೊಟ್ಟರು ಎಂದು ವಿವರಿಸಿದರು.
‘ನನ್ನ ಮೆಚ್ಚಿನ ಪುಸ್ತಕ’ ಎಂಬ ವಿಷಯವಾಗಿ ತಾವು ಓದಿದ ಪುಸ್ತಕದ ಬಗ್ಗೆ ಭಾಷಣ ಮಾಡಿ ವಿಜೇತರಾದ 10ನೇ ತರಗತಿಯ ನರಸಿಂಹಮೂರ್ತಿ, ಕೆ.ಎಲ್.ಭವಾನಿ ಮತ್ತು 9 ನೇ ತರಗತಿಯ ವಿ.ಕೆ.ರಾಕೇಶ್ ಅವರಿಗೆ ಪುಸ್ತಕ ಮತ್ತು ಪ್ರಮಾಣಪತ್ರವನ್ನು ಕ.ಸಾ.ಪ ವತಿಯಿಂದ ನೀಡಲಾಯಿತು.
ಈ ಸಂದರ್ಭದಲ್ಲಿ ತಾಲ್ಲೂಕು ಕ.ಸಾ.ಪ ವತಿಯಿಂದ ಶಾಲೆಯ ಗ್ರಂಥಾಲಯಕ್ಕೆ ‘ಎ.ಪಿ.ಜೆ ಅಬ್ದುಲ್ ಕಲಾಂ’ ಮತ್ತು ‘ಕನ್ನಡ ರತ್ನಕೋಶ’ವನ್ನು ನೀಡಲಾಯಿತು.
ಕ.ಸಾ.ಪ ಹೋಬಳಿ ಪದಾಧಿಕಾರಿ ಕೆಂಪೇಗೌಡ, ರಮೇಶ್, ಮುಖ್ಯ ಶಿಕ್ಷಕಿ ಮಮತಾ, ಶಿಕ್ಷಕರಾದ ಹೇಮಾವತಿ, ಅನಿತಾ, ಮಾಲತಿ, ರವಿ, ಶ್ರೀಧರ್, ಗಣೇಶ್, ವಿಜಯಶ್ರೀ ಹಾಜರಿದ್ದರು.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!