Home News ಸ್ವಿಜರ್‌ಲೆಂಡ್‌ ದೇಶದ ತಜ್ಞರಿಂದ ರೇಷ್ಮೆ ವೀಕ್ಷಣೆ

ಸ್ವಿಜರ್‌ಲೆಂಡ್‌ ದೇಶದ ತಜ್ಞರಿಂದ ರೇಷ್ಮೆ ವೀಕ್ಷಣೆ

0

ಸ್ವಿಜರ್ಲೆಂಡ್‌ ದೇಶದಲ್ಲಿ ರೇಷ್ಮೆ, ಹೈನುಗಾರಿಕೆ, ಕಾಫಿ ಮುಂತಾದವುಗಳಲ್ಲಿ ಆಸಕ್ತಿ ಹೊಂದಿರುವವರನ್ನು ಕಳೆದ ಮೂರು ವರ್ಷಗಳಿಂದ ದಕ್ಷಿಣ ಭಾರತಕ್ಕೆ ಕರೆದುಕೊಂಡು ಬರುತ್ತಿದ್ದೇನೆ. ಶಿಡ್ಲಘಟ್ಟಕ್ಕೂ ಮೂರನೆಯ ಬಾರಿ ವಿವಿಧ ಕ್ಷೇತ್ರಗಳ ತಜ್ಞರನ್ನು ಕರೆದುಕೊಂಡು ಬಂದಿದ್ದೇನೆ. ಭಾರತದ ಕೇಂದ್ರೀಯ ರೇಷ್ಮೆ ಮಂಡಳಿಯ ಸಹಕಾರ ಪಡೆದು ರೇಷ್ಮೆಯ ವಿವಿಧ ಹಂತಗಳ ಅಧ್ಯಯನವನ್ನು ಕೈಗೊಂಡಿರುವುದಾಗಿ ಸ್ವಿಜರ್ಲೆಂಡ್‌ನ ಜಾನುವಾರುಗಳ ಅಭಿವೃದ್ಧಿ ಸಂಸ್ಥೆಯ ಸಲಹೆಗಾರ ಫ್ರಿಟ್ಜ್‌ ಶ್ನೀಡರ್‌ ತಿಳಿಸಿದರು.
ತಾಲ್ಲೂಕಿನ ಹಿತ್ತಲಹಳ್ಳಿಯ ಪ್ರಗತಿಪರ ರೈತ ಎಚ್‌.ಕೆ.ಸುರೇಶ್‌ ಅವರ ಚಾಕಿ ಕೇಂದ್ರಕ್ಕೆ ಸೋಮವಾರ ತಮ್ಮ ತಂಡದೊಡನೆ ಭೇಟಿ ನೀಡಿದ್ದ ಅವರು ಮಾತನಾಡಿದರು.
ಸ್ವಿಜರ್ಲೆಂಡ್‌ ದೇಶದಲ್ಲಿ ಈಗಾಗಲೇ ಸ್ವಲ್ಪಮಟ್ಟಿಗಿನ ರೇಷ್ಮೆ ಉತ್ಪಾದನೆಯಿದ್ದು, ಭಾರತದ ಸಹಕಾರದೊಂದಿಗೆ ಅದನ್ನು ಅಭಿವೃದ್ಧಿಗೊಳಿಸುವ ಯೋಜನೆಯಿದೆ. ಹೈನುಗಾರಿಕೆ, ನೀರಿನ ಸದ್ಭಳಕೆಯ ಬಗ್ಗೆಯೂ ಅಧ್ಯಯನ ನಡೆಸುತ್ತಿದ್ದೇವೆ. ಕೇಂದ್ರ ರೇಷ್ಮೆ ಮಾರಾಟ ಮಹಾಮಂಡಳಿಯ ನಿವೃತ್ತ ಅಧಿಕಾರಿ ನಾಗರಾಜ್ ಅವರೊಂದಿಗೆ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ರೇಷ್ಮೆಯ ಬೆಳೆಯುವ ಬಗ್ಗೆ ಕ್ಷೇತ್ರದರ್ಶನ ಮಾಡಿ ಮಾಹಿತಿಯನ್ನು ಪಡೆಯುತ್ತಿದ್ದೇವೆ.
ಇಂಡೋ ಸ್ವಿಜ್‌ ಜಂಟಿಯಾಗಿ ರೇಷ್ಮೆ ಬೆಳೆಯುವ ಕೆಲಸವನ್ನು ಸ್ವಿಜರ್ಲೆಂಡ್‌ ದೇಶದಲ್ಲಿ ಮುಂದಿನ ದಿನಗಳಲ್ಲಿ ಕೈಗೊಳ್ಳುವ ಉದ್ದೇಶವಿದೆ. ಸ್ವಿಜರ್ಲೆಂಡ್‌ನಲ್ಲಿ –10 ರಿಂದ 30 ಡಿಗ್ರಿಯವರೆಗೆ ತಾಪಮಾನ ವೈಪರೀತ್ಯವಿದೆ. ಆ ದೃಷ್ಟಿಯಿಂದಲೂ ಅಧ್ಯಯನ ಮಾಡುತ್ತಿದ್ದೇವೆ. ಭಾರತದ ತಮಿಳುನಾಡು, ಕೇರಳ, ಆಂದ್ರಪ್ರದೇಶ ಮತ್ತು ಕರ್ನಾಟಕದಲ್ಲಿ ಕೇಂದ್ರೀಯ ರೇಷ್ಮೆ ಮಂಡಳಿಯ ಸಹಕಾರ ಪಡೆದು ಮಾಹಿತಿ ಸಂಗ್ರಹಿಸುತ್ತಿದ್ದೇವೆ ಎಂದು ವಿವರಿಸಿದರು.
ಕೇಂದ್ರ ರೇಷ್ಮೆ ಮಾರಾಟ ಮಹಾಮಂಡಳಿಯ ನಿವೃತ್ತ ಅಧಿಕಾರಿ ನಾಗರಾಜ್ ಮಾತನಾಡಿ, ಶಿಡ್ಲಘಟ್ಟ ತಾಲ್ಲೂಕು ರೇಷ್ಮೆ ಮತ್ತು ಹೈನುಗಾರಿಕೆಗೆ ಪ್ರಸಿದ್ಧಿ. ಹಾಗಾಗಿ ಅಧ್ಯಯನಶೀಲರಿಗೆ ಅನುಕೂಲಕರ. ರೇಷ್ಮೆಯ ವಿವಿಧ ಹಂತಗಳು, ಮಾರುಕಟ್ಟೆಯ ಸ್ಥಿತಿಗತಿ, ಅದರ ಉತ್ಪನ್ನಗಳು, ಬಳಕೆ ಎಲ್ಲವನ್ನೂ ಸ್ವಿಜರ್ಲೆಂಡ್‌ ದೇಶದಿಂದ ಬಂದ 16 ಮಂದಿ ತಜ್ಞರಿಗೆ ವಿವರಿಸುತ್ತಿದ್ದೇವೆ. ನೀರಿನ ಸದುಪಯೋಗ ಹಾಗೂ ಕಾಫಿಯ ಕುರಿತಂತೆಯೂ ಅವರು ಅಧ್ಯಯನ ನಡೆಸುತ್ತಿದ್ದಾರೆ ಎಂದರು.
ಹಿತ್ತಲಹಳ್ಳಿಯ ಪ್ರಗತಿಪರ ರೈತ ಎಚ್‌.ಕೆ.ಸುರೇಶ್‌ ಅವರ ಚಾಕಿ ಕೇಂದ್ರ, ಹಿಪ್ಪುನೇರಳೆ ತೋಟ, ರೇಷ್ಮೆ ಹುಳು ಸಾಕಾಣಿಕಾ ಮನೆ, ರೇಷ್ಮೆ ಗೂಡಿನ ಮಾರುಕಟ್ಟೆ, ಸ್ವಯಂಚಾಲಿತ ರೀಲಿಂಗ್‌ ಕೇಂದ್ರವನ್ನು ವೀಕ್ಷಿಸಿ ವಿವರಗಳನ್ನು ಪಡೆದರು.
ರೇಷ್ಮೆ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ ಜನಾರ್ಧನಮೂರ್ತಿ, ಎಚ್.ಜಿ.ಗೋಪಾಲಗೌಡ ಹಾಜರಿದ್ದರು.

error: Content is protected !!