ಹೆಣ್ಣುಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬ ಪಾಲಕರ ನೈತಿಕ ಹೊಣೆಯಾಗಿದೆ ಎಂದು ಮೇಲೂರು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಜಮುನಾ ಧರ್ಮೇಂದ್ರ ತಿಳಿಸಿದರು.
ತಾಲ್ಲೂಕಿನ ಮೇಲೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ 8 ನೇ ತರಗತಿಯ ಐವತ್ತೇಳು ಮಕ್ಕಳಿಗೆ ಸೈಕಲ್ ವಿತರಿಸಿ ಅವರು ಮಾತನಾಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಈಗ ಮೊದಲಿನಂತಿಲ್ಲ. ಸಾಕಷ್ಟು ಸುಧಾರಣೆ ಆಗಿದೆ. ಗ್ರಾಮೀಣ ಭಾಗದ ಮಕ್ಕಳಿಗೆ ಶಿಕ್ಷಣ ಎಂಬುದು ಗಗನ ಕುಸುಮ ಎಂಬ ದಿನಗಳು ಮರೆಯಾಗುತ್ತಿವೆ. ಗ್ರಾಮೀಣ ಭಾಗದ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಸರ್ಕಾರ ಹಲವು ಸೌಲಭ್ಯಗಳನ್ನು ಒದಗಿಸುತ್ತಿದೆ. ಅವನ್ನು ಸದುಪಯೋಗ ಮಾಡಿಕೊಳ್ಳಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಹಾಲು ಉತ್ಪಾದಕರ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ನೀಡುವ ಸಮವಸ್ತ್ರ ಹೊಲಿಸಿಕೊಳ್ಳಲು ಬೇಕಾದ ಹಣವನ್ನು ನೀಡಿದರು.
ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಆಂಜನೇಯರೆಡ್ಡಿ, ಪಿಡಿಒ ಶಾರದಮ್ಮ, ಎಂ.ಪಿ.ಸಿ.ಅಧ್ಯಕ್ಷ ಶ್ರೀನಿವಾಸಮೂರ್ತಿ, ಮುಖ್ಯ ಶಿಕ್ಷಕಿ ಮಂಗಳಗೌರಮ್ಮ, ಎಸ್ಡಿಎಂಸಿ ಅಧ್ಯಕ್ಷ ಜನಾರ್ಧನ್, ಸದಸ್ಯರಾದ ಪ್ರಕಾಶ್, ರವಿಕುಮಾರ್, ಆರ್.ಎ.ಉಮೇಶ್, ರಾಮಾಂಜಿನಪ್ಪ, ಗಂಗಾಧರಪ್ಪ ಹಾಜರಿದ್ದರು.