ತಾಲ್ಲೂಕಿನಲ್ಲಿ ಬುಧವಾರ ವಿವಿಧ ಸಂಘಟನೆಗಳ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ನಡೆಸಿದ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ಸಿಯಟಿಯು ಸಂಯೋಜಿತ ಅಂಗನವಾಡಿ, ಬಿಸಿಯೂಟ, ಗ್ರಾಮ ಪಂಚಾಯತಿ ನೌಕರರ ಸಂಘ, ಡಿವೈಎಫ್ಐ, ರೈತ ಸಂಘ, ಸಮಾನ ಮನಸ್ಕರ ಹೋರಾಟ ಸಮಿತಿ ಮುಂತಾದ ಸಂಘಟನೆಗಳ ಮುಖಂಡರು ನಗರದಲ್ಲಿ ಬೈಕ್ ರ್ಯಾಲಿ ನಡೆಸಿದರು.
ಹೋಟೆಲ್, ಅಂಗಡಿ ಮುಂಗಟ್ಟುಗಳು, ಥಿಯೇಟರ್, ಬ್ಯಾಂಕುಗಳು, ಶಾಲಾ ಕಾಲೇಜುಗಳು ಬಂದ್ ಆದ್ದರಿಂದಾಗಿ ನಗರದ ರಸ್ತೆಗಳು ಬಿಕೋ ಎನ್ನುತ್ತಿತ್ತು.
ಬಸ್, ಆಟೋ ಸಂಚಾರವಿಲ್ಲದೆ ಸಾರ್ವಜನಿಕರಿಗೆ ತೊಂದರೆಯಾಗಿತ್ತು. ಬಸ್ ನಿಲ್ದಾಣದ ಬಳಿ ರಸ್ತೆ ತಡೆ ನಡೆಸಿದ ವಿವಿಧ ಸಂಘಟನೆಗಳ ಸದಸ್ಯರು ರಸ್ತೆಯಲ್ಲೇ ಅಡುಗೆ ತಯಾರಿಸಿದರು. ಖಾಸಗಿ ವಾಹನಗಳನ್ನು ಈ ಮಾರ್ಗದಲ್ಲಿ ತಡೆಯಲಾಗಿತ್ತು.
‘ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಮದ್ಯಾಹ್ನ ಬಿಸಿಯೂಟ ತಯಾರಿಸುವ ಅಡುಗೆ ನೌಕರರ ಹಲವು ಸಮಸ್ಯೆಗಳನ್ನು ಕಳೆದ ಹಲವಾರು ವರ್ಷಗಳಿಂದಲೂ ಸರ್ಕಾರದ ಗಮನಕ್ಕೆ ತಂದರೂ ಪ್ರಯೋಜನವಾಗುತ್ತಿಲ್ಲ.
ಎಲ್ಲ ಗ್ರಾಮ ಪಂಚಾಯಿತಿ ನೌಕರರನ್ನು ಷರತ್ತು ಇಲ್ಲದೆ ನೇಮಕಾತಿಗೆ ಅನುಮೋದನೆ ನೀಡುವುದು ಹಾಗೂ ಈಗಾಗಲೆ ಕೆಲವು ನೌಕರರನ್ನು ಕೈಬಿಟ್ಟಿದ್ದು ಅವರನ್ನು ಪುನಃ ಸೇರಿಸಿಕೊಳ್ಳುವುದು, ನ್ಯಾಯಾಲಯದ ತೀರ್ಪಿನಂತೆ ಕನಿಷ್ಠ ವೇತನ ೧೫ ಸಾವಿರ ರೂಪಾಯಿಗಳನ್ನು ಕೊಡುವುದು. ಸಾಕಷ್ಟು ನೌಕರರಿಗೆ ವರ್ಷಗಳಿಂದಲೂ ಬಾಕಿ ವೇತನ ನೀಡಬೇಕಿದ್ದು ಕೂಡಲೆ ಬಾಕಿ ವೇತನವನ್ನು ಬಿಡುಗಡೆ ಮಾಡಬೇಕು. ಮುಂತಾದ ಹಲವು ಬೇಡಿಕೆಗಳ ಜೊತೆಗೆ, ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಮುಷ್ಕರ ನಡೆಸುತ್ತಿದ್ದೇವೆ’ ಎಂದು ಸಿ.ಐ.ಟಿ.ಯು ಜಿಲ್ಲಾ ಕಾರ್ಯದರ್ಶಿ ಲಕ್ಷ್ಮೀದೇವಮ್ಮ ತಿಳಿಸಿದರು.
ಸಮಾನ ಮನಸ್ಕರ ಹೋರಾಟ ಸಮಿತಿ ಅಧ್ಯಕ್ಷ ಜೆ.ಎಸ್.ವೆಂಕಟಸ್ವಾಮಿ, ಕಾರ್ಯದರ್ಶಿ ಪ್ರತೀಶ್, ರೈತ ಸಂಘದ ತಾಲ್ಲೂಕು ಅಧ್ಯಕ್ಷ ರವಿಪ್ರಕಾಶ್, ಗ್ರಾಮ ಪಂಚಾಯತಿ ನೌಕರರ ಸಂಘದ ಅಧ್ಯಕ್ಷ ಸುದರ್ಶನ್, ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಅಶ್ವತ್ಥಮ್ಮ, ಬಿಸಿಯೂಟ ನೌಕರರ ಸಂಘದ ಅಧ್ಯಕ್ಷೆ ಮುನಿಲಕ್ಷ್ಮಮ್ಮ, ಆಶಾ ನೌಕರರ ಸಂಘದ ಕಾರ್ಯದರ್ಶಿ ಕಲಾವತಿ, ಪುರುಷೋತ್ತಮ್, ಡಿ.ವೈ.ಎಫ್.ಐ ರಾಜ್ಯ ಮುಖಂಡ ಮುನೀಂದ್ರ, ಸುರೇಶ್, ಪಾಪಣ್ಣ ಮತ್ತಿತರರು ಪ್ರತಿಭಟನಾ ರ್ಯಾಲಿಯಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -