ಹೈನುಗಾರಿಕೆಯು ಬಯಲು ಸೀಮೆಯ ಬಹುತೇಕ ಜನರ ಆರ್ಥಿಕ ಚೇತರಿಕೆಗೆ ಕಾರಣವಾಗಿದೆ ಎಂದು ಕೋಲಾರ–ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ನಿರ್ದೇಶಕ ಬಂಕ್ ಮುನಿಯಪ್ಪ ತಿಳಿಸಿದರು.
ತಾಲ್ಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳ ಅಧ್ಯಯನ ಪ್ರವಾಸಕ್ಕೆ ಕೋಟೆ ವೃತ್ತದ ಶ್ರೀರಾಮ ದೇವಾಲಯದ ಆವರಣದಲ್ಲಿ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು.
ಅಂತರ್ಜಲ ಕುಸಿದು, ನೀರಿಗೆ ಅಭಾವವಿದ್ದರೂ ರೈತರು ಶ್ರಮಜೀವಿಗಳಾಗಿದ್ದು, ಹಾಲಿನ ಹೊಳೆ ಹರಿಸುವ ಮೂಲಕ ರಾಜ್ಯಕ್ಕೇ ಮಾದರಿಯಾಗಿದ್ದಾರೆ. ಲಕ್ಷಾಂತರ ಕುಟುಂಬಗಳು ಹೈನುಗಾರಿಕೆಯಿಂದ ಸ್ವಾಭಿಮಾನದ ಬದುಕನ್ನು ಕಟ್ಟಿಕೊಂಡಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧೆ ಇರುವಂತೆ ಹೈನುಗಾರಿಕೆಯ ಕ್ಷೇತ್ರದಲ್ಲೂ ಇದೆ. ವಿಜ್ಞಾನ ತಂತ್ರಜ್ಞಾನದ ಅಳವಡಿಕೆ ಅತ್ಯಗತ್ಯವಾಗಿದೆ. ಈ ಕ್ಷೇತ್ರದಲ್ಲಿನ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕಿದೆ. ಹೀಗಾಗಿ ಅಧ್ಯಯನ ಪ್ರವಾಸಕ್ಕೆ ಕಳುಹಿಸುತ್ತಿದ್ದು, ಸದುಪಯೋಗಪಡಿಸಿಕೊಳ್ಳುವಂತೆ ಹೇಳಿದರು.
ಗುಣಮಟ್ಟದ ಹಾಲು ಉತ್ಪಾದನೆ, ರಾಸುಗಳ ಸಾಕಣೆ, ಮೇವು ನಿರ್ವಹಣೆ, ಕೊಟ್ಟಿಗೆ ನಿರ್ವಹಣೆ ಮುಂತಾದ ವಿಷಯಗಳ ಕುರಿತಂತೆ ಪ್ರವಾಸದಲ್ಲಿ ತಿಳಿಸಿಕೊಡಲಾಗುವುದು ಎಂದು ಪ್ರವಾಸದ ವಿಷಯ ಮತ್ತು ಉದ್ದೇಶಗಳನ್ನು ವಿವರಿಸಿದರು.
ತಾಲ್ಲೂಕಿನ 45 ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು, ಕಾರ್ಯದರ್ಶಿಗಳ ತಂಡವನ್ನು ಮಂಗಳೂರು ಡೈರಿಗೆ ಅಧ್ಯಯನಕ್ಕೆಂದು ಕಳುಹಿಸಲಾಯಿತು.
ಕೋಚಿಮುಲ್ ಶಿಡ್ಲಘಟ್ಟ ಶಿಬಿರದ ಉಪವ್ಯವಸ್ಥಾಪಕ ಬಿ.ಎಸ್.ಹನುಮಂತರಾವ್, ವಿಸ್ತರಣಾಧಿಕಾರಿಗಳಾದ ಶ್ರೀನಿವಾಸ್, ಉಮೇಶ್ ರೆಡ್ಡಿ, ಮಂಜುನಾಥ್, ಆನಂದ್, ಮುನೇಗೌಡ, ಕುಮ್ಮಣ್ಣ, ಸಿದ್ದೇಶ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.