
ವಿದ್ಯಾರ್ಥಿಗಳು ಮೊಬೈಲ್ ಬಳಕೆಯನ್ನು ಮಿತಿಗೊಳಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಅಪಾಯಕಾರಿ ಸಾಹಸಗಳ ರೀಲ್ಸ್ ಮತ್ತು ವಿಡಿಯೊಗಳನ್ನು ಯಾವುದೇ ಕಾರಣಕ್ಕೂ ಅನುಕರಿಸಬಾರದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮದ್ ರೋಷನ್ ಷಾ ಹೇಳಿದರು.
ನಗರದ ಸಂತೋಷ್ ನಗರದ ಸರ್ಕಾರಿ ಉರ್ದು ಹಾಗೂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಂಗಳವಾರ ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಮತ್ತು ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮೊಬೈಲ್ ಗಳ ಅತಿಯಾದ ಬಳಕೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇದೆ. ವಿದ್ಯಾಭ್ಯಾಸದ ಮೇಲಿನ ಏಕಾಗ್ರತೆಯೂ ಕುಂಠಿತವಾಗಬಹುದು. ಆದ್ದರಿಂದ ಅಗತ್ಯಕ್ಕೆ ಅನುಗುಣವಾಗಿ ಮೊಬೈಲ್ ಬಳಸಬೇಕು ಎಂದು ಸಲಹೆ ನೀಡಿದರು.
ಸಾಮಾಜಿಕ ಜಾಲತಾಣಗಳಲ್ಲಿ ಜನಪ್ರಿಯತೆಗಾಗಿ ಕೆಲವರು ಅಪಾಯಕಾರಿ ಸಾಹಸಗಳ ವಿಡಿಯೊಗಳನ್ನು ಪ್ರಕಟಿಸುತ್ತಾರೆ. ಅವುಗಳನ್ನು ಅನುಕರಿಸುವುದು ಅಪಘಾತ ಹಾಗೂ ಜೀವಹಾನಿಗೆ ಕಾರಣವಾಗುವ ಸಾಧ್ಯತೆ ಇರುವುದರಿಂದ ವಿದ್ಯಾರ್ಥಿಗಳು ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.
18 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ವಾಹನ ಚಾಲನೆ ಮಾಡುವುದು ಕಾನೂನುಬಾಹಿರವಾಗಿದೆ. ಅಪ್ರಾಪ್ತರು ವಾಹನ ಚಲಾಯಿಸಿ ಅಪಘಾತಕ್ಕೆ ಕಾರಣವಾದರೆ ಚಾಲಕರ ಜತೆಗೆ ಪೋಷಕರೂ ಕಾನೂನು ಕ್ರಮ ಎದುರಿಸಬೇಕಾಗುತ್ತದೆ. ಆದ್ದರಿಂದ ಪೋಷಕರು ಮಕ್ಕಳಿಗೆ ವಾಹನ ನೀಡದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.
ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ವಿದ್ಯಾಭ್ಯಾಸವನ್ನು ಮಧ್ಯದಲ್ಲೇ ಕೈಬಿಡದೆ ಶ್ರಮಪಟ್ಟು ಕಲಿಯಬೇಕು. ಶಿಕ್ಷಣದೊಂದಿಗೆ ಶಿಸ್ತು, ಜವಾಬ್ದಾರಿ ಹಾಗೂ ಉತ್ತಮ ಮೌಲ್ಯಗಳನ್ನು ಬೆಳೆಸಿಕೊಂಡು ಸಮಾಜದ ಜವಾಬ್ದಾರಿಯುತ ನಾಗರಿಕರಾಗಬೇಕು ಎಂದು ಕರೆ ನೀಡಿದರು.
ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎ. ನಾರಾಯಣಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳು ಬಾಲ್ಯದಲ್ಲಿಯೇ ಕಾನೂನು ಅರಿವು ಬೆಳೆಸಿಕೊಳ್ಳಬೇಕು. ಶಿಕ್ಷಣದ ಜತೆಗೆ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಜಿ. ಭಾಸ್ಕರ್, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Summary: A legal awareness programme at the Government Urdu and English Medium School, Santhosh Nagar, Sidlaghatta, warned students against imitating dangerous social-media reels and against minors driving vehicles, senior civil judge Mohammad Roshan Shah said.












