ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ನಗರದ ಪ್ರವಾಸಿಮಂದಿರದಲ್ಲಿ ಸೋಮವಾರ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಶ್ರಮ ಶಕ್ತಿ ಯೋಜನೆಯಡಿಯಲ್ಲಿ ಸ್ವಯಂ ಉದ್ಯೋಗಕ್ಕಾಗಿ ತಲಾ ಹತ್ತು ಸಾವಿರ ರೂಗಳ ಸಾಲವನ್ನು ೩೫೩ ಮಂದಿಗೆ ಫಲಾನುಭವಿಗಳಿಗೆ ವಿತರಣೆ ಮಾಡಿ ಅವರು ಮಾತನಾಡಿದರು.
ಒಟ್ಟಾರೆ ೩೯ ಲಕ್ಷ ರೂಪಾಯಿಗಳ ಸಾಲವನ್ನು ನೀಡುತ್ತಿದ್ದು, ಅದರಲ್ಲಿ ಸಹಾಯಧನವೂ ಸೇರಿರುತ್ತದೆ. ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು ಆರ್ಥಿಕವಾಗಿ ಸಬಲರಾಗಲು ಸರ್ಕಾರ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದ್ದು, ಹಲವಾರು ಯೋಜನೆಗಳ ಮುಖಾಂತರ ಸಹಾಯಧನಗಳನ್ನು ವಿತರಣೆ ಮಾಡಲಾಗುತ್ತಿದೆ. ಈ ಎಲ್ಲಾ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ವ್ಯಾಪಾರ ವಹಿವಾಟುಗಳು ಹಾಗೂ ಸಣ್ಣ ಉದ್ದಿಮೆಗಳನ್ನು ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಬೇಕು. ಸೌಲಭ್ಯಗಳಿಗೆ ನೇರವಾಗಿ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ ಅರ್ಜಿಗಳನ್ನು ಸಲ್ಲಿಸುವ ಮೂಲಕ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಬೇಕು ಎಂದರು.
ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಡಾ.ಧನಂಜಯರೆಡ್ಡಿ, ನಗರಸಭಾ ಸದಸ್ಯರಾದ ಅಫ್ಸರ್ಪಾಷ, ವೆಂಕಟಸ್ವಾಮಿ, ಷಫಿವುಲ್ಲಾ, ಜೆಡಿಎಸ್ ಕಾರ್ಮಿಕ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ರಹಮತ್ತುಲ್ಲ, ಅಲಿ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಇಂತಿಯಾಜ್ಪಾಷಾ, ಮುಂತಾದವರು ಹಾಜರಿದ್ದರು.