ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಶಿಡ್ಲಘಟ್ಟದಲ್ಲಿ ಹಾರ್ಡ್ವೇರ್ ಪಾರ್ಕ್ ಸ್ಥಾಪಿಸುವ ಯೋಜನೆಯನ್ನು ಘೋಷಿಸಿದ್ದು, ಇದರ ಮೂಲಕ ಸಾವಿರಾರು ವಿದ್ಯಾವಂತ ಯುವಕರಿಗೆ ಉದ್ಯೋಗ ಸಿಗಲಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ವಿ.ಮುನಿಯಪ್ಪ ತಿಳಿಸಿದರು.
ತಾಲ್ಲೂಕಿನ ಗಂಜಿಗುಂಟೆ ಮತ್ತು ಬಶೆಟ್ಟಹಳ್ಳಿ ಪಂಚಾಯಿತಿಗಳಲ್ಲಿ ಮತಯಾಚನೆ ಮಾಡಿ ಅವರು ಮಾತನಾಡಿದರು.
ತಾಲ್ಲೂಕಿನ ಹೇಮಾರ್ಲಹಳ್ಳಿ, ವೈ.ಹುಣಸೇನಹಳ್ಳಿ, ಕೆ.ಮುತ್ತುಗದಹಳ್ಳಿ, ದಿಬ್ಬೂರಹಳ್ಳಿ, ಈ ತಿಮ್ಮಸಂದ್ರ, ಕೆಂಚಾರ್ಲಹಳ್ಳಿಯಲ್ಲಿ ನಮ್ಮ ಅವಧಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಿದ್ದೆವು. ಕುಡಿಯುವ ನೀರಿಗೆ ಹೆಚ್ಚು ಒತ್ತು ನೀಡಿದ್ದೆವು. ಕೆರೆಗಳ ಹೂಳೆತ್ತುವಿಕೆ, ಬಡವರಿಗೆ ನಿವೇಶನ ಹಾಗೂ ಮನೆಗಳನ್ನು ನೀಡಲು ಸಾಕಷ್ಟು ಶ್ರಮಿಸಿದ್ದೇನೆ. ಆರೋಗ್ಯ, ಶಿಕ್ಷಣ, ನಿರುದ್ಯೋಗ ನಿವಾರಣೆ ಕಾಂಗ್ರೆಸ್ ಪಕ್ಷದ ಮುಖ್ಯ ಉದ್ದೇಶ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಸದಸ್ಯ ಸತೀಶ್ ಮಾತನಾಡಿ, ರಾಜ್ಯದಲ್ಲೂ ಕಾಂಗ್ರೆಸ್ ಸರ್ಕಾರವೇ ಬರಲಿದೆ. ಇಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಯನ್ನೇ ಗೆಲ್ಲಿಸಿದರೆ ಅಭಿವೃದ್ಧಿಗೆ ವೇಗ ಸಿಗುತ್ತದೆ, ಕ್ಷೇತ್ರದ ಜನರಿಗೆ ಅನುಕೂಲವಾಗುತ್ತದೆ ಎಂದರು.