ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎಚ್.ಡಿ.ಕುಮಾರಸ್ವಾಮಿರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿಸಲು ಪ್ರತಿಯೊಬ್ಬ ಕಾರ್ಯಕರ್ತರು ಹೆಚ್ಚಿನ ಪರಿಶ್ರಮ ಪಡಬೇಕು ಎಂದು ಎಚ್.ಡಿ.ದೇವೇಗೌಡ ಮತ್ತು ಜಯಪ್ರಕಾಶ್ ನಾರಾಯಣ್ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಬಿ.ಎನ್.ರವಿಕುಮಾರ್ ತಿಳಿಸಿದರು.
ಮಾಜಿ ಶಾಸಕ ದಿ.ಎಸ್.ಮುನಿಶಾಮಪ್ಪರ ೫ ನೇ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ಭಾನುವಾರ ಎಚ್.ಡಿ.ದೇವೇಗೌಡ ಮತ್ತು ಜಯಪ್ರಕಾಶ್ ನಾರಾಯಣ್ ಚಾರಿಟೆಬಲ್ ಟ್ರಸ್ಟ್ ವತಿಯಿಂದ ತಾಲ್ಲೂಕಿನ ಸಾದಲಿಯ ಸಾದಲಮ್ಮ ದೇವಾಲಯದ ಆವರಣದಲ್ಲಿ ಉಚಿತ ಆಂಬ್ಯುಲೆನ್ಸ್ ಸೇವೆ, ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಹಾಗೂ ಗರ್ಬಿಣಿ ಮಹಿಳೆಯರಿಗೆ ಆರ್ಥಿಕ ಸಹಾಯಧನ ನೀಡುವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಾಜಿ ಶಾಸಕ ದಿ.ಎಸ್.ಮುನಿಶಾಮಪ್ಪ ಅವರು ಹಾಕಿಕೊಟ್ಟ ರಾಜಕೀಯ ಹಾದಿಯಲ್ಲಿ ಕಳೆದ ಹತ್ತು ವರ್ಷಗಳಿಂದ ತಾಲ್ಲೂಕಿನಲ್ಲಿ ಜೆಡಿಎಸ್ ಪಕ್ಷದ ಅಭಿವೃದ್ದಿಗಾಗಿ ತನು, ಮನ, ಧನ ಅರ್ಪಿಸಿ ಪಕ್ಷವನ್ನು ಬೇರು ಮಟ್ಟದಿಂದ ಸಂಘಟಿಸಿದ್ದೇವೆ. ಹಾಗಾಗಿ ಮುಂಬರುವ ಚುನಾವಣೆಯಲ್ಲಿ ಎಚ್.ಡಿ.ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿಯನ್ನಾಗಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಕಾರ್ಯ ಪ್ರವೃತ್ತರಾಗಬೇಕು ಎಂದರು.
ಜಿಲ್ಲಾ ಪಂಚಾಯ್ತಿ ಸದಸ್ಯ ಹಾಗೂ ಕೋಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ ಮಾತನಾಡಿ, ಕಳೆದ ಎರಡು ಚುನಾವಣೆಯಿಂದ ಪಕ್ಷದ ಸಂಘಟನೆಯಲ್ಲಿ ಉತ್ತಮ ಕಾರ್ಯ ನಿರ್ವಹಿಸಿರುವ ಮೇಲೂರಿನ ರವಿಕುಮಾರ್ ಹಾಗೂ ತಂಡ ಇದೀಗ ಎಚ್.ಡಿ.ದೇವೇಗೌಡ ಹಾಗೂ ಜಯಪ್ರಕಾಶ್ ನಾರಾಯಣ್ ಚಾರಿಟೆಬಲ್ ಟ್ರಸ್ಟ್ ಮೂಲಕ ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ, ಈ ಹಿಂದೆ ನೂರಾರು ಉಚಿತ ಬಸ್ಗಳ ಮೂಲಕ ತಾಲ್ಲೂಕಿನಾಧ್ಯಂತ ಮಹಿಳೆಯರನ್ನು ಮೇಲ್ ಮರವತ್ತೂರು ಪ್ರವಾಸಕ್ಕೆ ಕಳುಹಿಸಿದ್ದು, ನಗರದ ವಾಲ್ಮೀಕಿ ಸಮುದಾಯ ಭವನ ನಿರ್ಮಾಣಕ್ಕೆ ನಿವೇಶನ ನೀಡಿರುವುದು. ನಗರದ ಮುಸ್ಲಿಂ ಬಾಂದವರಿಗೆ ಸುಮಾರು ೪ ಎಕರೆ ಎಂಟು ಗುಂಟೆಯಷ್ಟು ಜಮೀನು ಖರೀದಿಸಿ ರುದ್ರಭೂಮಿಗಾಗಿ ಉಚಿತವಾಗಿ ನೀಡಿದ್ದಾರೆ. ಈಚೆಗೆ ದೇವೇಗೌಡರ ಹುಟ್ಟುಹಬ್ಬದ ಪ್ರಯುಕ್ತ ೧೦೧ ಉಚಿತ ಸಾಮೂಹಿಕ ವಿವಾಹಗಳನ್ನು ನಡೆಸಿದ್ದು ಇದೀಗ ಹೋಬಳಿಗೊಂದರಂತೆ ಆಂಬುಲೆನ್ಸ್ ಉಚಿತವಾಗಿ ನೀಡುವುದಷ್ಟೇ ಅಲ್ಲದೇ ಅದರ ನಿರ್ವಹಣೆಯನ್ನು ಟ್ರಸ್ಟ್ ಮೂಲಕ ಮಾಡುತ್ತಿದ್ದಾರೆ. ಇಂತಹ ಸಾಮಾಜಿಕ ಕಳಕಳಿಯುಳ್ಳ ಮುಖಂಡರ ಸೇವೆ ಮುಂದಿನ ದಿನಗಳಲ್ಲಿ ತಾಲ್ಲೂಕಿಗೆ ಅಗತ್ಯವಿದೆ ಎಂದರು.
ತಾಲ್ಲೂಕಿನ ಸಾದಲಿ ಹೋಬಳಿಯ ಸುತ್ತಮುತ್ತಲ ಗ್ರಾಮಗಳು ಕೇಂದ್ರ ಸ್ಥಾನದಿಂದ ಸುಮಾರು ೩೫ ರಿಂದ ೪೦ ಕಿ.ಮೀ ದೂರದಲ್ಲಿದ್ದು ಈ ಭಾಗದ ಜನರು ಸೇರಿದಂತೆ ವಿದ್ಯಾರ್ಥಿಗಳು ಕೇಂದ್ರ ಸ್ಥಾನಕ್ಕೆ ಬರಲು ಪರದಾಡುವ ಸ್ಥಿತಿಯಿದೆ. ಹಾಗಾಗಿ ಟ್ರಸ್ಟ್ ವತಿಯಿಂದ ಈ ಭಾಗದ ಜನರ ತುರ್ತು ಆರೋಗ್ಯ ಸೇವೆಗಾಗಿ ಒಂದು ಆಂಬುಲೆನ್ಸ್ ನೀಡಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಪಿಯುಸಿ ಹಾಗೂ ಪದವಿ ಓದುತ್ತಿರುವ ಸುಮಾರು ೮೮ ಮಂದಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೇರಿದಂತೆ ಗರ್ಭಿಣಿ ಸ್ತ್ರೀಯರಿಗೆ ತಲಾ ೧೦ ಸಾವಿರದಂತೆ ಸುಮಾರು ೩೫ ಮಂದಿ ಮಹಿಳೆಯರಿಗೆ ಆರ್ಥಿಕ ಸಹಾಯ ಟ್ರಸ್ಟ್ ಮೂಲಕ ನೆರವೇರಿಸಲಾಯಿತು.
ಕಾರ್ಯಕ್ರಮಕ್ಕೂ ಮುನ್ನ ಸಾದಲಮ್ಮ ದೇವಾಲದಲ್ಲಿ ಪೂಜೆ ಸಲ್ಲಿಸಿದ ಮುಖಂಡರು ನಂತರ ದೇವಾಲಯದ ಆವರಣದಲ್ಲಿ ಸಸಿ ನೆಟ್ಟರು.
ಕಾರ್ಯಕ್ರಮದಲ್ಲಿ ಇತ್ತೀಚೆಗೆ ಮೃತಪಟ್ಟ ತಾಲ್ಲೂಕಿನ ಯಣ್ಣಂಗೂರಿನ ಹುತಾತ್ಮ ಯೋಧ ಗಂಗಾಧರ್ರ ಆತ್ಮಕ್ಕೆ ಶಾಂತಿ ಕೋರಿ ಮೌನ ಆಚರಿಸಲಾಯಿತು.
ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಪಿ.ವಿ.ನಾಗರಾಜ್, ಪಿ.ಶಿವಾರೆಡ್ಡಿ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಕೆ.ಲಕ್ಷ್ಮಿನಾರಾಯಣರೆಡ್ಡಿ, ಉಪಾಧ್ಯಕ್ಷ ಎಚ್.ನರಸಿಂಹಯ್ಯ, ಮಾಜಿ ಅಧ್ಯಕ್ಷ ಯರ್ರಬಚ್ಚಪ್ಪ, ಸದಸ್ಯ ರಾಜಶೇಖರ್, ಪುರಸಭೆ ಮಾಜಿ ಸದಸ್ಯ ಆದಿಲ್ಪಾಷ, ಮುಖಂಡರಾದ ಗೊರಮಡುಗು ರಾಮಾಂಜಿ, ದೊಣ್ಣಹಳ್ಳಿ ರಾಮಣ್ಣ, ಮುಗಲಡಿಪಿ ನಂಜಪ್ಪ, ಕೆ.ಎಸ್.ಮಂಜುನಾಥ್, ತಾದೂರು ರಘು, ರಮೇಶ್, ಸಾದಲಿಯ ವೆಂಕಟಾಚಲಪತಿ, ಆವಲರೆಡ್ಡಿ, ತ್ಯಾಗರಾಜ್, ತಿಪ್ಪಣ್ಣ, ವೇಣು, ಪಾಪಣ್ಣ, ಮುಕುಂದರೆಡ್ಡಿ, ಕಾರ್ಯಕ್ರಮದಲ್ಲಿ ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







