ಗ್ರಾಮೀಣ ಪ್ರದೇಶಗಳಲ್ಲಿನ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಅನುಕೂಲವಾಗಲೆಂದು ಮತ್ತು ನಿರುದ್ಯೋಗ ಸಮಸ್ಯೆ ನಿವಾರಿಸಲೆಂದು ಐ.ಟಿ.ಐ.ಕಾಲೇಜನ್ನು ಪ್ರಾರಂಭಿಸುತ್ತಿರುವುದಾಗಿ ಶಾಸಕ ಎಂ.ರಾಜಣ್ಣ ತಿಳಿಸಿದರು.
ತಾಲ್ಲೂಕಿನ ತುಮ್ಮನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ತಿಪ್ಪೇನಹಳ್ಳಿ ಗ್ರಾಮದಲ್ಲಿ ಸೋಮವಾರ ಸುಮಾರು ೩ ಕೋಟಿ ೧೯ ಲಕ್ಷ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಐ.ಟಿ.ಐ.ಕಾಲೇಜಿನ ೨೦ ಕೊಠಡಿಗಳ ಕಟ್ಟಡ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ತಾಲ್ಲೂಕಿನಲ್ಲಿ ೪ ಪಿ.ಯು.ಸಿ.ಕಾಲೇಜುಗಳು ಹಾಗೂ ಪಾಲಿಟೆಕ್ನಿಕ್ ಕಾಲೇಜಿನ ಅಗತ್ಯತೆ ಇದ್ದು, ಕಳೆದ ಮೂರು ವರ್ಷಗಳಲ್ಲಿ ಉನ್ನತ ಶಿಕ್ಷಣ ಸಚಿವಾಲಯದಿಂದ ಒಂದೇ ಒಂದು ಕಾಲೇಜು ಸ್ಥಾಪಿಸಲು ಮುಂದಾಗಿಲ್ಲ. ಖಾಸಗಿ ಕಾಲೇಜುಗಳು ಮಾತ್ರ ಪ್ರತಿವರ್ಷವೂ ಹಲವಾರು ಪ್ರಾರಂಭವಾಗುತ್ತಿವೆ. ಬಡ ಗ್ರಾಮೀಣ ಮಕ್ಕಳಿಗೆ ಅನುಕೂಲ ಆಗಲಕೆಂದು ಈಗಾಗಲೇ ಉನ್ನತಶಿಕ್ಷಣ ಸಚಿವರಿಗೆ ಮನವಿಯನ್ನು ಸಲ್ಲಿಸಲಾಗಿದ್ದು, ಸರ್ಕಾರದಿಂದ ಕಾಲೇಜುಗಳಿಗೆ ಮಂಜೂರಾತಿ ಸಿಕ್ಕರೆ, ತಾಲ್ಲೂಕಿನಲ್ಲಿ ಪಾಲಿಟೆಕ್ನಿಕ್ ಕಾಲೇಜು ಸ್ಥಾಪನೆಯಾಗುತ್ತದೆ.
ಹಿತ್ತಲಹಳ್ಳಿಯ ಬಳಿಯಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಡಿಪೋ ನಿರ್ಮಾಣಕ್ಕೆ ಅಗತ್ಯವಾಗಿರುವ ಭೂಮಿಯ ದಾಖಲೆಗಳನ್ನು ಸಿದ್ದಪಡಿಸಿ, ಸರ್ಕಾರಕ್ಕೆ ಒದಗಿಸಲಾಗಿದೆ. ಮುಂದಿನ ಬಜೆಟ್ನಲ್ಲಿ ಡಿಪೋ ನಿರ್ಮಾಣಕ್ಕೆ ಅಗತ್ಯವಾಗಿರುವ ಅನುದಾನವನ್ನು ಮೀಸಲಿಡುವ ಭರವಸೆ ಇದೆ. ಅಗ್ನಿಶಾಮಕ ಠಾಣೆಗಾಗಿ ತಾಲ್ಲೂಕು ಕಚೇರಿಯ ಪಕ್ಕದಲ್ಲೆ ತಾತ್ಕಾಲಿಕವಾಗಿ ಶೆಡ್ ನಿರ್ಮಾಣ ಮಾಡಲಾಗಿದ್ದು, ಮುಂದಿನ ೧೫ ದಿನಗಳಲ್ಲಿ ಅಗ್ನಿಶಾಮಕ ವಾಹನಗಳು ತಾಲ್ಲೂಕಿನ ಜನತೆಗೆ ಲಭ್ಯವಾಗಲಿವೆ ಎಂದರು.
ಅಬ್ಲೂಡು ಕ್ಷೇತ್ರದ ಜಿಲ್ಲಾ ಪಂಚಾಯತಿ ಸದಸ್ಯ ಬಂಕ್ಮುನಿಯಪ್ಪ ಮಾತನಾಡಿ, ಗ್ರಾಮಾಂತರ ಪ್ರದೇಶಗಳ ಮಕ್ಕಳು ದುಬಾರಿ ಹಣವನ್ನು ಖರ್ಚು ಮಾಡಿಕೊಂಡು ಉದ್ಯೋಗಾಧಿಕಾರಿತ ಶಿಕ್ಷಣವನ್ನು ಪಡೆದುಕೊಳ್ಳಲು ದೂರದ ಊರುಗಳಿಗೆ ಹೋಗಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮೀಣ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಇಂತಹ ಕಟ್ಟಡಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಮುಖಂಡ ಹುಜುಗೂರು ರಾಮಣ್ಣ ಮಾತನಾಡಿ, ತುಮ್ಮನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವ್ಯಾಪ್ತಿಯಲ್ಲಿ ಸುಮಾರು ೧೧ ಹಳ್ಳಿಗಳು ಸೇರಿದ್ದು, ಅನಾರೋಗ್ಯವಾದರೆ, ಅನಿವಾರ್ಯವಾಗಿ ಶಿಡ್ಲಘಟ್ಟಕ್ಕೆ ಹೋಗಬೇಕಾಗುತ್ತಿದೆ. ಸರಿಯಾದ ಸಾರಿಗೆ ವ್ಯವಸ್ಥೆಯಿಲ್ಲ, ಆದ್ದರಿಂದ ತ್ವರಿತವಾಗಿ ತುಮ್ಮನಹಳ್ಳಿ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸ್ಥಾಪನೆ ಮಾಡಬೇಕು, ಕಾಲೇಜು ಸ್ಥಾಪನೆಯಾದ ನಂತರ ಇಲ್ಲಿಗೆ ಬಂದುಹೋಗುವಂತಹ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿ ಸಾರಿಗೆ ವ್ಯವಸ್ಥೆಯನ್ನು ಅನುಕೂಲ ಮಾಡಿಕೊಡಬೇಕು ಎಂದರು.
ತಹಶೀಲ್ದಾರ್ ಕೆ.ಎಂ.ಮನೋರಮಾ, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ಗೌಡ, ಚೀಮಂಗಲ ಕ್ಷೇತ್ರದ ಜಿಲ್ಲಾ ಪಂಚಾಯತಿ ಸದಸ್ಯೆ ತನುಜಾ ಬಿ.ರಘು, ಮೇಲೂರು ತಾಲ್ಲೂಕು ಪಂಚಾಯತಿ ಸದಸ್ಯ ಮುನಿಯಪ್ಪ, ಹಂಡಿಗನಾಳ ಕ್ಷೇತ್ರದ ಸದಸ್ಯ ಕೆ.ಲಕ್ಷ್ಮೀನಾರಾಯಣರೆಡ್ಡಿ, ತುಮ್ಮನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ವಿಜಯಮ್ಮಕದಿರಪ್ಪ, ಉಪಾಧ್ಯಕ್ಷ ಎಂ.ಸುರೇಂದ್ರ, ಜೆ.ವೆಂಕಟಾಪುರ ಗ್ರಾಮ ಪಂಚಾಯತಿ ಅಧ್ಯಕ್ಷ ಬಿ.ಎನ್.ರಘುನಾಥ್, ಜಂಗಮಕೋಟೆ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಜೆ.ಎಂ.ವೆಂಕಟೇಶ್, ಯೂನಿಯನ್ ನಿರ್ದೇಶಕ ತಾದೂರು ರಮೇಶ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -







