Home News ಕನ್ನಡ ಧ್ವಜದ ವಿನ್ಯಾಸಕ ಮ.ರಾಮಮೂರ್ತಿ ಅವರ ಜನ್ಮದಿನಾಚರಣೆ

ಕನ್ನಡ ಧ್ವಜದ ವಿನ್ಯಾಸಕ ಮ.ರಾಮಮೂರ್ತಿ ಅವರ ಜನ್ಮದಿನಾಚರಣೆ

0

ತಾಲ್ಲೂಕಿನ ಯಣ್ಣಂಗೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಕಸಾಪ ವತಿಯಿಂದ ಕನ್ನಡ ಧ್ವಜದ ವಿನ್ಯಾಸವನ್ನು ರೂಪಿಸಿದ ಮ.ರಾಮಮೂರ್ತಿ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಕಸಾಪ ತಾಲ್ಲೂಕು ಅಧ್ಯಕ್ಷ ಎ.ಎಂ.ತ್ಯಾಗರಾಜ್ ಮಾತನಾಡಿದರು.
ಕನ್ನಡ ಭಾವುಟವನ್ನು ಸೃಜಿಸಿದ ಮಹನೀಯ ಮ. ರಾಮಮೂರ್ತಿ ಅವರು ಕನ್ನಡಿಗರು ತಲೆ ಎತ್ತಿ ಗೌರವದಿಂದ ಬಾಳುವ ಹಾಗೆ, ಕನ್ನಡದ ಬಾವುಟವು ನಿರಂತರ ಹಾರಾಡುವ ಹಾಗೆ ತಮ್ಮ ಕೊನೆಯ ಉಸಿರಿರುವವರೆಗೂ ಕನ್ನಡ ನಾಡು ನುಡಿಗಾಗಿ ಶ್ರಮಿಸಿದರು ಎಂದು ಅವರು ತಿಳಿಸಿದರು.
ಅರವತ್ತರ ದಶಕದಲ್ಲಿ ಅನ್ಯಭಾಷಿಗರ ಪ್ರಾಬಲ್ಯದಿಂದ ಬೆಂಗಳೂರು ನಗರದಲ್ಲಿ ಕನ್ನಡಕ್ಕೆ ಹೀನಾಯ ಸ್ಥಿತಿ ಒದಗಿದಾಗ ಕನ್ನಡದ ವಾತಾವರಣವನ್ನು ಮೂಡಿಸಲು, ಕನ್ನಡಿಗರನ್ನು ಎಚ್ಚರಿಸಲು ಹುಟ್ಟಿಕೊಂಡದ್ದೇ ಕನ್ನಡ ಚಳವಳಿ. ಹೀಗೆ ಹೋರಾಟ ಮಾಡಲು ಪ್ರಾರಂಭಿಸಿದವರಲ್ಲಿ ಹಿರಿಯರ ಜೊತೆಗೆ ಕೈಜೋಡಿಸಿದವರು ಮ.ರಾಮಮೂರ್ತಿ.
ಅವರು ರಚಿಸಿದ ಪತ್ತೇದಾರಿ ಕಾದಂಬರಿಗಳ ಸಂಖ್ಯೆ ೧೫೦ಕ್ಕೂ ಹೆಚ್ಚು. ಈ ಪತ್ತೇದಾರಿ ಕಾದಂಬರಿಗಳ ಜೊತೆಗೆ ಅವರು ಹಲವಾರು ಐತಿಹಾಸಿಕ ಕಾದಂಬರಿಗಳನ್ನೂ ರಚಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ “ನಗರ”ದಲ್ಲಿ ನಡೆದ ರೈತ ಬಂಡಾಯ ಕುರಿತಾಗಿ ಇವರು ಬರೆದಿರುವ “ರಾಜದಂಡ” ಚಾರಿತ್ರಿಕವಾಗಿ ಅದ್ವಿತೀಯ ಕಾದಂಬರಿ ಎನಿಸಿದೆ.
ನಮ್ಮ ಸಾರ್ವಜನಿಕ ಜೀವನದಲ್ಲಿ ಕನ್ನಡ ಭಾಷೆ ಹೆಮ್ಮೆ ಪಡುವಂತೆ ಉಳಿದಿದೆ ಎಂದರೆ ಮ. ರಾಮಮೂರ್ತಿ ಅಂತಹ ಹಿರಿಯರ ಕೊಡುಗೆಯಿಂದ ಎಂದು ನೆನೆಯುವುದು ನಮ್ಮೆಲ್ಲರ ಕರ್ತವ್ಯ ಮತ್ತು ಧರ್ಮ ಎಂದು ಹೇಳಿದರು.
ಶಿಕ್ಷಕಿ ಮಂಜುಳಮ್ಮ ಮಾತನಾಡಿ, ಕನ್ನಡ ಹೋರಾಟಗಾರ ಮ. ರಾಮಮೂರ್ತಿ ವಿನ್ಯಾಸ ಮಾಡಿದ್ದ ಹಳದಿ ಮತ್ತು ಕೆಂಪು ಧ್ವಜ ಜನರನ್ನು ಭಾವನಾತ್ಮಕವಾಗಿ ಬೆಸೆದಿದೆ. ಕನ್ನಡದ ಬಾವುಟ ಕೇವಲ ಬಣ್ಣದ ಬಾವುಟವಲ್ಲ. ಅದು ಕನ್ನಡಿಗರ ಭಾವೈಕ್ಯತೆಯ ಸಂಕೇತ. ನಮ್ಮ ಹಿರಿಯರು ಮಾಡಿಕೊಟ್ಟ ಹಳದಿ ಕೆಂಪು ಧ್ವಜ ನಮ್ಮೆಲ್ಲ ಕನ್ನಡಿಗರ ಏಕತೆಯ ಸಂಕೇತವೂ ಹೌದು ಎಂದರು.
ಈ ಸಂದರ್ಭದಲ್ಲಿ ಕಸಾಪ ವತಿಯಿಂದ ಶಿಕ್ಷಕರಿಗೆ ಪುಸ್ತಕಗಳನ್ನು ನೀಡಲಾಯಿತು.
ಕಸಾಪ ನಗರ ಘಟಕದ ಅಧ್ಯಕ್ಷ ಸಿ.ಎನ್.ಮುನಿರಾಜು, ಸಂಘ ಸಂಸ್ಥೆಗಳ ಪ್ರತಿನಿಧಿ ಶಂಕರ್, ಮಂಜುನಾಥ್, ಶಿಕ್ಷಕಿ ಪ್ರೇಮಾ, ಎಸ್.ಡಿ.ಎಂ.ಸಿ ಮಾಜಿ ಅಧ್ಯಕ್ಷ ರಾಮಾಂಜಿನಪ್ಪ, ಅಶೋಕ್, ನಾಗೇಶ್, ರಘು, ಅಭಿಷೇಕ್, ಅಜಯ್ ಹಾಜರಿದ್ದರು.

error: Content is protected !!