ಬೇಸಿಗೆ ರಜೆಯಲ್ಲಿ ಗ್ರಾಮೀಣ ಮಕ್ಕಳಿಗೆ ಕರಾಟೆ ಕಲಿಕೆಯನ್ನು ಕಲಿಸುವ ಮೂಲಕ ಅವರಲ್ಲಿ ಆತ್ಮವಿಶ್ವಾಸ ತುಂಬಲಾಗಿದೆ ಎಂದು ಗ್ರಾಮ ಪಂಚಾಯಿತಿ ಸದಸ್ಯೆ ಹಂಸ ಪ್ರಭಾಕರ್ ತಿಳಿಸಿದರು.
ತಾಲ್ಲೂಕಿನ ತಾದೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಈಚೆಗೆ ದಿವ್ಯ ಭಾರತ್ ಕರಾಟೆ ಡೋ ಅಸೋಸಿಯೇಷನ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಹತ್ತು ದಿನಗಳ ಉಚಿತ ಬೇಸಿಗೆ ಶಿಬಿರದ ಮುಕ್ತಾಯ ಸಮಾರಂಭದಲ್ಲಿ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ನೀಡಿ ಅವರು ಮಾತನಾಡಿದರು.
ಆರೋಗ್ಯ ಪೂರ್ಣ ಜೀವನ ನಡೆಸಲು ಹಾಗೂ ಒತ್ತಡದಿಂದ ಹೊರಬರಲು ಯೋಗ, ಧ್ಯಾನ ಅಗತ್ಯವಾಗಿದೆ. ತಂದೆ, ತಾಯಿಗಳು ಮಕ್ಕಳಿಗೆ ತಪ್ಪದೇ ಕರಾಟೆ ಕಲೆಯನ್ನು ಕಲಿಯಲು ಅಗತ್ಯ ಪ್ರೋತ್ಸಾಹ, ಸಹಕಾರ ನೀಡಬೇಕು. ಮಕ್ಕಳ ಪ್ರತಿಭೆ ವಿಕಸನಕ್ಕೆ ಕರಾಟೆ ಕಲೆ ಹೆಚ್ಚು ಸಹಕಾರಿ. ವಿಶೇಷವಾಗಿ ಮಹಿಳೆಯರು ಕರಾಟೆ ಕಲಿತಿದ್ದರೆ ಎಂತಹ ಅಪಾಯ ಎದುರಾದರೂ ನಿಭಾಯಿಸಿಕೊಂಡು ರಕ್ಷಣೆ ಮಾಡಿಕೊಳ್ಳಬಹುದು. ನಾವು ಚಿಕ್ಕವರಿದ್ದಾಗ ಇಂತಹ ಅವಕಾಶಗಳು ನಮಗೆ ದೊರೆಯಲಿಲ್ಲ. ಪ್ರಸ್ತುತ ದಿವ್ಯ ಭಾರತ್ ಕರಾಟೆ ಡೋ ಅಸೋಸಿಯೇಷನ್ ಗ್ರಾಮೀಣ ಪ್ರದೇಶದಲ್ಲಿ ಇಂತಹ ಕೆಲಸ ಮಾಡುತ್ತಿರುವುದು ಅರ್ಥಪೂರ್ಣವಾಗಿದೆ ಎಂದು ಹೇಳಿದರು.
ಲಯನ್ ಯುವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಗೌರವಾಧ್ಯಕ್ಷ ಮುನಿರಾಜು ಮಾತನಾಡಿ, ತಾಲ್ಲೂಕಿನಲ್ಲಿ ಕ್ರೀಡೆಯಲ್ಲಿ ಆಸಕ್ತ ಮಕ್ಕಳನ್ನು ಗುರುತಿಸಿ ತರಬೇತಿ ನೀಡಿ ಅವರನ್ನು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸುವಂತೆ ಪ್ರೋತ್ಸಾಹಿಸುವುದು ನಮ್ಮ ಮುಖ್ಯ ಉದ್ದೇಶವಾಗಿದೆ. ಮುಂದಿನ ಹತ್ತು ವರ್ಷದಲ್ಲಿ ಶಿಡ್ಲಘಟ್ಟದ ಹೆಸರು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಈ ಮೂಲಕ ಕೇಳಿಬರಬೇಕು ಎಂದು ಹೇಳಿದರು.
ದಿವ್ಯ ಭಾರತ್ ಕರಾಟೆ ಡೋ ಅಸೋಸಿಯೇಷನ್ ಕರಾಟೆ ಶಿಕ್ಷಕ ಅರುಣ್ಕುಮಾರ್, ಆರ್.ಬಾಬು, ಶಕುಂತಲಮ್ಮ ಹಾಜರಿದ್ದರು.
- Advertisement -
- Advertisement -
- Advertisement -







