ತಾಲ್ಲೂಕಿನ ಹರಳಹಳ್ಳಿ ಗ್ರಾಮದ ತಿರುಮಲ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಕಸಾಪ ತಾಲ್ಲೂಕು ಘಟಕ ಮತ್ತು ಗ್ರಾಮಸ್ಥರ ಸಹಯೋಗದಲ್ಲಿ ಆಚರಿಸಿದ “ಸುಗ್ಗಿ-ಹುಗ್ಗಿ ಸಂಕ್ರಾಂತಿ ಜಾನಪದ ಸಂಭ್ರಮ” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಸಾಪ ತಾಲ್ಲೂಕು ಅಧ್ಯಕ್ಷ ಎ.ಎಂ.ತ್ಯಾಗರಾಜ್ ಮಾತನಾಡಿದರು.
ಧಾರ್ಮಿಕ ಹಿನ್ನೆಲೆಯ ಜತೆಗೆ ರೈತರಿಗೆ ಪರಿಶ್ರಮಕ್ಕೆ ಸಿಕ್ಕ ಪ್ರತಿಫಲವನ್ನು ಹಂಚಿಕೊಂಡು ಸಂಭ್ರಮಿಸುವ ದಿನ ಸಂಕ್ರಾಂತಿ ಹಬ್ಬದ ವಿಶೇಷ ಎಂದು ಅವರು ತಿಳಿಸಿದರು.
ಪೈರು ತೆಗೆಯುವ ಸಂದರ್ಭದಲ್ಲಿ ಆಚರಿಸಲಾಗುವ ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತ. ಸಂಕ್ರಾಂತಿಯೆಂದರೆ, ರೈತಪರಿವಾರವು ತಮ್ಮ ಬೆಳೆ, ಹೊಲ, ಎತ್ತು, ದನ ಕರುಗಳ ಜತೆ ಸಂಭ್ರಮಿಸುವ ಹಬ್ಬ. ನಮ್ಮಲ್ಲಿ ಎತ್ತುಗಳನ್ನು ದೇವರೆಂದು ಭಾವಿಸುತ್ತೇವೆ. ವಿಶೇಷವೆಂದರೆ ಹಬ್ಬಕ್ಕೆ ಮಾಡಿದ ತಿಂಡಿಯನ್ನೇ ಈ ದಿನ ಎತ್ತುಗಳಿಗೆ ತಿನ್ನಿಸಲಾಗುತ್ತದೆ. ಹಬ್ಬದಡುಗೆಯನ್ನು ಎತ್ತಿಗೂ ತಿನ್ನಿಸುವ ಮೂಲಕ ಎತ್ತನ್ನು ಮನೆ ಮಕ್ಕಳಂತೆ ನೋಡಿಕೊಳ್ಳುವ ಆಶಯ ವ್ಯಕ್ತವಾಗುತ್ತದೆ ಎಂದು ಹೇಳಿದರು.
ಹರಳಹಳ್ಳಿ ತಿರುಮಲ ದೇವಸ್ಥಾನದ ಅರ್ಚಕ ಕೆ.ವಿ.ನಾರಾಯಣಸ್ವಾಮಿ ಮಾತನಾಡಿ, ಹದವಾಗಿ ಹುರಿದ ಎಳ್ಳು, ಶೇಂಗಾ, ಹುರಿಗಡಲೆ, ಒಣಕೊಬ್ಬರಿ ತುಂಡು, ಬೆಲ್ಲದಚ್ಚು , ಜೊತೆಗೆ ಕಬ್ಬಿನ ತುಂಡುಗಳ ಮಿಶ್ರಣವನ್ನು ತಯಾರಿಸಿ, ಅದನ್ನು ಎಳ್ಳುಬೀರಿ ‘ಎಳ್ಳು ಬೆಲ್ಲ ಕೊಳ್ಳಿ, ಒಳ್ಳೊಳ್ಳೆ ಮಾತಾಡಿ’ ಎನ್ನುವುದು ಸಂಕ್ರಮಣದ ಸಂಭ್ರಮವನ್ನು ಹಂಚಿಕೊಳ್ಳುವ ವಿಧಾನ ಎಂದರು.
ಕಲಾವಿದ ನಾಮದೇವ್ ಮಾತನಾಡಿ, ಗ್ರಾಮಗಳಲ್ಲಿ ಎತ್ತುಗಳು ಕಡಿಮೆಯಾಗುತ್ತಿವೆ, ಬಹುತೇಕ ಕೃಷಿ ಪರಿಕರಗಳು ಮಾಯವಾಗಿವೆ. ಆಧುನಿಕತೆಯು ಜಾನಪದವನ್ನು ಕಳೆಯಬಾರದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರು ರಂಗೋಲಿ ಹಾಕಿ, ರಾಗಿಯ ರಾಶಿಗೆ ಮಾವಿನ ಸೊಪ್ಪು, ಕಬ್ಬು, ಹೂಗಳಿಂದ ಅಲಂಕರಿಸಿ ಪೂಜೆಯನ್ನು ಮಾಡಿ, ಕೃಷಿ ಪರಿಕರಗಳಾದ ನೊಗ, ನೇಗಿಲು, ಮೊರ, ಕುಡುಗೋಲು, ಜರಡಿ, ಮುಣಗೋಲು ಮುಂತಾದ ಕಣದ ಸಾಮಾನುಗಳನ್ನು ಜೋಡಿಸಿಟ್ಟು, ಕಬ್ಬು, ಕಾಶಿ ಮತ್ತು ಊಶಿ ಹುಲ್ಲು, ಮಾವಿನ ಸೊಪ್ಪು, ಶೃಂಗರಿಸಿದ ಎತ್ತುಗಳ ಜೊತೆಯಲ್ಲಿಟ್ಟು ಪೂಜೆ ಸಲ್ಲಿಸಿದರು. ಅಲಂಕರಿಸಿದ ಎತ್ತುಗಳಿಗೆ ಅಕ್ಕಿ, ಬೆಲ್ಲ, ಬಾಳೆಹಣ್ಣು, ಕಬ್ಬನ್ನು ತಿನ್ನಿಸಿದರು. ಭಾಗವಹಿಸಿದ್ದವರಿಗೆಲ್ಲಾ ಎಳ್ಳು ಬೆಲ್ಲವನ್ನು ಹಂಚಲಾಯಿತು.
ಕಸಾಪ ತಾಲ್ಲೂಕು ಘಟಕದ ವತಿಯಿಂದ ಗ್ರಾಮದ ಹಿರಿಯ ಸೊಣ್ಣೇಗೌಡ ಮತ್ತು ರೈತ ನಾರಾಯಣಸ್ವಾಮಿ ಅವರಿಗೆ ಪ್ರಮಾಣಪತ್ರ ಮತ್ತು ಪುಸ್ತಕಗಳನ್ನು ನೀಡಿ ಗೌರವಿಸಲಾಯಿತು. ಗ್ರಾಮದ ಶ್ರೀ ಭುವನೇಶ್ವರಿ ಕನ್ನಡ ಯುವಕರ ಸಂಘಕ್ಕೆ ಕಸಾಪ ವತಿಯಿಂದ ಪ್ರಮಾಣಪತ್ರ ಮತ್ತು ಪುಸ್ತಕವನ್ನು ನೀಡಲಾಯಿತು.
ಕಸಾಪ ತಾಲ್ಲೂಕು ಗೌರವ ಕಾರ್ಯದರ್ಶಿ ಚಾಂದ್ ಪಾಷ , ನಗರ ಘಟಕದ ಅಧ್ಯಕ್ಷ ಸಿ.ಎನ್.ಮುನಿರಾಜು, ಸಂಘ ಸಂಸ್ಥೆಗಳ ಪ್ರತಿನಿಧಿ ಶಂಕರ್, ಮಹಿಳಾ ಪ್ರತಿನಿಧಿ ದಾಕ್ಷಾಯಿಣಿ, ಶಿಕ್ಷಕಿ ಚಂದ್ರಕಲಾ, ಜಸ್ಮಿತಾ ಡ್ಯಾನ್ಸ್ ಅಕಾಡೆಮಿ ಧನುಶ್ರೀ ಮಾನಸ್, ನೃತ್ಯ ನಿರ್ದೇಶಕ ಸುಬ್ಬು, ಗ್ರಾಮ ಪಂಚಾಯಿತಿ ಸದಸ್ಯೆ ಸುಮಿತ್ರಮ್ಮ ಕೃಷ್ಣಪ್ಪ, ಪದ್ಮಮ್ಮ, ನಂದಕುಮಾರ್, ಶಶಿಕುಮಾರ್, ಶ್ರೀನಿವಾಸ್, ಎಂ.ಪಿ.ಸಿ.ಎಸ್ ಅಧ್ಯಕ್ಷ ಚನ್ನಪ್ಪ, ನಂದೀಶ್ ಕಾರ್ಯಕ್ರಮದಲ್ಲಿ ಹಾಜರಿದ್ದರು.