24.1 C
Sidlaghatta
Saturday, April 20, 2024

ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮುಸುಕಿನ ಗುದ್ದಾಟ ಬಹಿರಂಗ

- Advertisement -
- Advertisement -

ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಮತ್ತು ಶಿಡ್ಲಘಟ್ಟ ಮಾಜಿ ಶಾಸಕ ವಿ.ಮುನಿಯಪ್ಪ ನಡುವಿನ ಮುಸುಕಿನ ಗುದ್ದಾಟ ಬುಧವಾರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಬಹಿರಂಗಗೊಂಡು ಚರ್ಚೆಗೆ ಗ್ರಾಸವಾಯಿತು.
ಕಳೆದ ವಿಧಾನಸಭೆಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ವಿ.ಮುನಿಯಪ್ಪ ಅವರಿಗೆ ಕೆ.ಎಚ್.ಮುನಿಯಪ್ಪ, ಅವರ ಕುಟುಂಬದವರಿಂದ ಹಾಗೂ ಬೆಂಬಲಿಗರಿಂದ ಮತದಾರರಲ್ಲಿ ವಿ.ಮುನಿಯಪ್ಪ ಅವರ ವಿರುದ್ಧ ಇಲ್ಲ ಸಲ್ಲದ ತಪ್ಪು ಮಾಹಿತಿಗಳನ್ನು ಬಿತ್ತಿ ಸೋಲಲು ಕಾರಣರಾದರೆಂದು ಕಳೆದೊಂದು ವರ್ಷದಿಂದಲೂ ಕಾರ್ಯಕರ್ತರ ನಡುವೆ ಬೂದಿ ಮುಚ್ಚಿದ ಕೆಂಡದಂತಿದ್ದ ಸಂಗತಿ ಹಾಗೂ ಇವರ ನಡುವಿನ ಮನಸ್ತಾಪ ಇಂದಿನ ಸಭೆಯಲ್ಲಿ ಕಾರ್ಯಕರ್ತರ ಮುಂದೆ ಸ್ಪೋಟಗೊಂಡಿತು.
ಪಟ್ಟಣದ ಕಾಂಗ್ರೆಸ್ ಭವನದ ಮುಂದೆ ಬುಧವಾರ ಲೋಕಸಭಾ ಚುನಾವಣೆಯ ಪ್ರಚಾರಕ್ಕೆಂದು ಬಂದಿದ್ದ ಸಚಿವ ರೋಷನ್ ಬೇಗ್, ಚಿಕ್ಕಬಳ್ಳಾಪುರ ಶಾಸಕ ಡಾ.ಸುಧಾಕರ್, ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ, ವಿಧಾನಪರಿಷತ್ ಸದಸ್ಯ ನಜೀರ್ ಅಹ್ಮದ್ ಹಾಗೂ ನೆರೆದಿದ್ದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾ ಪಂಚಾಯಿತಿ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ಹಾಜರಿದ್ದ ಸಭೆಯಲ್ಲಿ ಮಾತನಾಡಿದ ಕೆ.ಎಚ್.ಮುನಿಯಪ್ಪ, ‘ವಿ.ಮುನಿಯಪ್ಪ ಅವರಿಗೆ ನಮ್ಮ ಕಡೆಯಿಂದ ದ್ರೋಹವಾಗಿಲ್ಲ. ಅವರು ಹೇಳಿದ ಎಲ್ಲಾ ಕೆಲಸಗಳನ್ನೂ ಮಾಡಿಕೊಡುತ್ತಾ ಬಂದಿದ್ದೇನೆ. ಇವರಿಗೆ ನಾನು ದ್ರೋಹ ಬಗೆದಿಲ್ಲವೆಂದು ಯಾವ ದೇವಸ್ಥಾನದಲ್ಲಿ ಬೇಕಾದರೂ ಬಂದು ಪ್ರಮಾಣ ಮಾಡುತ್ತೇನೆ. ಖುರಾನ್ ಮೇಲೆ ಪ್ರಮಾಣ ಮಾಡುತ್ತೇನೆ’ ಎಂದು ಭಾವೋದ್ರೇಕದಿಂದ ಮಾತನಾಡಿದರು.
ಕೋಲಾರ ಚಿಕ್ಕಬಳ್ಳಾಪುರ ಎರಡೂ ಜಿಲ್ಲೆಗಳ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರೊಂದಿಗೆ ಸೇರಿ ಮುಖ್ಯಮಂತ್ರಿಗಳೊಂದಿಗೆ ಈಗಾಗಲೇ ಚರ್ಚಿಸಿದ್ದೇವೆ. ಲೋಕಸಭಾ ಚುನಾವಣೆ ಮುಗಿದ ನಂತರ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ವಿ.ಮುನಿಯಪ್ಪ ಅವರಿಗೆ ಸೂಕ್ತ ಸ್ಥಾನಮಾನ ಕೊಡಿಸುವುದಾಗಿ ತಿಳಿಸಿದರು.
‘ದೇವರ ಬಗ್ಗೆ ನಂಬಿಕೆಗಿಂತ ಕಳೆದ ವಿಧಾನಸಭೆಯ ಚುನಾವಣೆ ಸಂದರ್ಭದಲ್ಲಿ ಯಾರು ಯಾವ ರೀತಿ ನಡೆದುಕೊಂಡರೆಂದು ಅವರೇ ಆತ್ಮಾವಲೋಕನ ಮಾಡಿಕೊಳ್ಳಬೇಕು. ಕೆ.ಎಚ್.ಮುನಿಯಪ್ಪ ಅವರು ರಾಜಕೀಯ ಪ್ರವೇಶಿಸಿದಾಗ ಇದ್ದ ಪರಿಸ್ಥಿತಿಯೇ ಬೇರೆ. ಈಗ ಅವರು ನನ್ನಂಥ ನೂರು ಜನಕ್ಕೆ ಸಹಾಯ ಮಾಡುವ ಸ್ಥಿತಿಯಲ್ಲಿದ್ದಾರೆ. ಆದರೂ ರಾಜಕೀಯವಾಗಿ ನನಗೆ ಇದುವರೆಗೂ ಅವರಿಂದ ಸಹಾಯವಾಗಿಲ್ಲ. ನಾನು ಶಾಸಕನಾಗಿದ್ದಾಗ ಕೆ.ಎಚ್.ಮುನಿಯಪ್ಪ ಅವರು ತಮ್ಮ ಅನುದಾನ ಬಿಡುಗಡೆ ಮಾಡುವಲ್ಲಿ ವಿಳಂಬ ಮಾಡಿದ್ದರಿಂದ ಹಲವು ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡವು. ಆದರೂ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷದ ಪರವಾಗಿ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಪರವಾಗಿ ಮತಯಾಚಿಸುತ್ತೇನೆ’ ಎಂದು ಮಾಜಿ ಶಾಸಕ ವಿ.ಮುನಿಯಪ್ಪ ಮಾರ್ಮಿಕವಾಗಿ ಕೆ.ಎಚ್.ಮುನಿಯಪ್ಪ ಅವರಿಗೆ ತಿಳಿಸಿದರು.
ಕಾರ್ಯಕರ್ತರ ಸಭೆಯ ಮುನ್ನ ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಮತ್ತು ಮುಖಂಡರು ಪಟ್ಟಣದ ಗಾರ್ಡನ್ ರಸ್ತೆಯಲ್ಲಿರುವ ಸೈಯದ್ ಸರ್ಮಸ್ತ್ ಹುಸೇನಿ ಶಾವಾಲಿ ದರ್ಗಾಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಚಿವ ರೋಷನ್ ಬೇಗ್, ಶಾಸಕರಾದ ಡಾ.ಸುಧಾಕರ್, ಸುಬ್ಬಾರೆಡ್ಡಿ, ವಿಧಾನಪರಿಷತ್ ಸದಸ್ಯ ನಜೀರ್ ಅಹ್ಮದ್, ಮಾಜಿ ವಿಧಾನಪರಿಷತ್ ಸದಸ್ಯ ಡಾ.ಹನುಮಂತಯ್ಯ, ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ವಿವರಿಸಿ ಕೆ.ಎಚ್.ಮುನಿಯಪ್ಪ ಪರವಾಗಿ ಮತಯಾಚಿಸಿದರು.
ಕಾಂಗ್ರೆಸ್ ಮುಖಂಡರಾದ ಮುನಿಕೃಷ್ಣಪ್ಪ, ಎಂ.ಶಶಿಧರ್, ಎಸ್.ಎಂ.ನಾರಾಯಣಸ್ವಾಮಿ, ಗುಡಿಯಪ್ಪ, ಬಿಸೇಗೌಡ, ಮೌಲಾ, ಸುಬ್ರಮಣಿ, ಎಚ್.ಎಂ.ಮುನಿಯಪ್ಪ, ತಮ್ಮಣ್ಣ, ಮುನೇಗೌಡ, ಸತೀಶ್ ಮತ್ತಿತರರು ಹಾಜರಿದ್ದರು.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!