Home News ಕೋಮುವಾದಿ ಪಕ್ಷವನ್ನು ಅಧಿಕಾರಕ್ಕೆ ತರಬಾರದು – ಬಿ.ಎನ್.ರವಿಕುಮಾರ್

ಕೋಮುವಾದಿ ಪಕ್ಷವನ್ನು ಅಧಿಕಾರಕ್ಕೆ ತರಬಾರದು – ಬಿ.ಎನ್.ರವಿಕುಮಾರ್

0

ರಾಜ್ಯದಲ್ಲಿ ಕೋಮುವಾದಿ ಪಕ್ಷವನ್ನು ಅಧಿಕಾರಕ್ಕೆ ತರಬಾರದು ಎಂಬ ಉದ್ದೇಶದಿಂದ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರ ಆಡಳಿತ ನಡೆಸುತ್ತಿದೆ. ಅದೇ ಕಾರಣದಿಂದ ನಾವು ಮೈತ್ರಿ ಅಭ್ಯರ್ಥಿ ಕೆ.ಎಚ್.ಮುನಿಯಪ್ಪನವರನ್ನು ಬೆಂಬಲಿಸುತ್ತಿದ್ದೇವೆ ಎಂದು ಜೆಡಿಎಸ್ ಮುಖಂಡ ಬಿ.ಎನ್.ರವಿಕುಮಾರ್ ತಿಳಿಸಿದರು.
ತಾಲ್ಲೂಕಿನ ವೈ ಹುಣಸೇನಹಳ್ಳಿ ಗ್ರಾಮದಲ್ಲಿ ಗುರುವಾರ ಕೋಲಾರ ಲೋಕಸಭೆ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಪರ ಹೋಬಳಿ ಮಟ್ಟದ ಜೆಡಿಎಸ್ ಪಕ್ಷದ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಆದೇಶವನ್ನು ಪಾಲಿಸುವುದು ಪಕ್ಷದ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಕಳೆದ ೨೦ ವರ್ಷಗಳಿಂದ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ವಿರೋಧಿಸಿಕೊಂಡು ರಾಜಕೀಯ ಮಾಡಿದ ನಾವುಗಳು ಇದೀಗ ರಾಜ್ಯ ಹಾಗೂ ರಾಷ್ಟ್ರದ ಜನಹಿತವನ್ನು ಉದ್ದೇಶವಾಗಿಟ್ಟುಕೊಂಡು ಮೈತ್ರಿ ಅಭ್ಯರ್ಥಿಗೆ ಬೆಂಬಲಿಸುವ ಮೂಲಕ ಮೈತ್ರಿ ಸರ್ಕಾರದ ಉಳಿವಿಗೆ ಶ್ರಮಿಸಬೇಕು ಎಂದರು.
ಕೋಲಾರ ಲೋಕಸಭೆ ಕ್ಷೇತ್ರದ ಮೈತ್ರಿ ಅಭ್ಯರ್ಥಿ, ಸಂಸದ ಕೆ.ಎಚ್.ಮುನಿಯಪ್ಪ ಮಾತನಾಡಿ, ರಾಜ್ಯದಲ್ಲಿ ಕೋಮುವಾದಿ ಪಕ್ಷ ಅಧಿಕಾರ ಹಿಡಿಯುವುದನ್ನು ತಡೆಯಲು ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ರಚಿಸಿದೆ. ಮೈತ್ರಿ ಸರ್ಕಾರದ ಮುಖ್ಯಮಂತ್ರಿ ರಾಜ್ಯದ ಸಮಸ್ತ ರೈತರ ಕಣ್ಣೀರು ಒರೆಸುವ ಕೆಲಸ ಮಾಡುತ್ತಿದ್ದಾರೆ. ಮೈತ್ರಿ ಸರ್ಕಾರದ ಆಡಳಿತಾವಧಿಯಲ್ಲಿ ಬಂದಿರುವ ಈ ಚುನಾವಣೆಯಲ್ಲಿ ರಾಜ್ಯದ ೨೧ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸ್ಪರ್ಧಿಸಿದರೆ ಉಳಿದ ೭ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ರಾಜ್ಯದಲ್ಲಿ ಕೋಮುವಾದಿ ಪಕ್ಷಗಳಿಗೆ ಬುದ್ದಿ ಕಲಿಸಬೇಕಾದರೆ ರಾಜ್ಯದ ಎಲ್ಲಾ ೨೮ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದರು.
ಮೂಲತಃ ನಾನು ಕಾಂಗ್ರೆಸ್ ಅಭ್ಯರ್ಥಿಯಾದರೂ ಈ ಭಾರಿಯ ಚುನಾವಣೆಯಲ್ಲಿ ನನಗೆ ಜೆಡಿಎಸ್ ಕಾರ್ಯಕರ್ತರು ಮತನೀಡುವುದರಿಂದ ಮುಂದಿನ ದಿನಗಳಲ್ಲಿ ಕ್ಷೇತ್ರದ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರನ್ನು ತಮ್ಮ ಎರಡು ಕಣ್ಣುಗಳಂತೆ ನೋಡಿಕೊಳ್ಳುತ್ತೇನೆ ಎಂದರು.
ಜಿಲ್ಲಾ ಪಂಚಾಯಿತಿ ಸದಸ್ಯ ಬಂಕ್ ಮುನಿಯಪ್ಪ ಮಾತನಾಡಿ, “ನಾವು ಕಾಂಗ್ರೆಸ್ ಗೆ ಮತ ನೀಡುತ್ತಿಲ್ಲ. ಸಮ್ಮಿಶ್ರ ಸರ್ಕಾರದ ಮೈತ್ರಿ ಅಭ್ಯರ್ಥಿಗೆ ಮತ ಕೊಡುತ್ತಿದ್ದೇವೆ. ಬಿ.ಎನ್.ರವಿಕುಮಾರ್, ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೋಸ್ಕರ ಮತನೀಡುತ್ತೇವೆ. ಕ್ಷೇತ್ರದಲ್ಲಿ ಸುಮಾರು ೬೦ ಸಾವಿರಕ್ಕೂ ಹೆಚ್ಚು ಮತಗಳನ್ನು ನೀಡುವ ಮೂಲಕ ನಮ್ಮ ನಾಯಕರಾದ ಬಿ.ಎನ್.ರವಿಕುಮಾರ್ ಅವರಿಗೆ ಗೌರವ ತಂದುಕೊಡುವ ಕೆಲಸವನ್ನು ಕಾರ್ಯಕರ್ತರ ಮಾಡಬೇಕು ಎಂದರು.
ಮೈತ್ರಿ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಪರ ಜೆಡಿಎಸ್ ಪಕ್ಷದ ಮುಖಂಡರು ಗುರುವಾರ ತಾಲ್ಲೂಕಿನ ಸಾದಲಿ, ಬಶೆಟ್ಟಹಳ್ಳಿ, ಜಂಗಮಕೋಟೆ, ಕಸಬಾಹೋಬಳಿ ಸೇರಿದಂತೆ ಶಿಡ್ಲಘಟ್ಟ ಟೌನ್ ನಲ್ಲಿ ಚುನಾವಣೆ ಪ್ರಚಾರ ಸಭೆಗಳನ್ನು ನಡೆಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಡಿ.ಬಿ.ವೆಂಕಟೇಶ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ವಿ.ನಾರಾಯಣಸ್ವಾಮಿ, ಮಾಜಿ ಶಾಸಕಿ ಅನಸೂಯಮ್ಮ, ಮುಖಂಡರಾದ ಪಿ.ವಿ.ನಾಗರಾಜ್, ಹುಜಗೂರು ರಾಮಯ್ಯ, ನಂದನವನಂ ಶ್ರೀರಾಮರೆಡ್ಡಿ, ಮುಗಿಲಡಿಪಿ ನಂಜಪ್ಪ, ಸಿ.ಎಂ.ಗೋಪಾಲ್ ಹಾಜರಿದ್ದರು.

error: Content is protected !!